Monday, December 29, 2008

ಮಲೀನಗೊಳ್ಳದಿರಲಿ ಭಾವಕೋಶ

ಯುಗಾದಿಯನ್ನು ವರ್ಷದ ಆರಂಭ ಎಂದು ನಮ್ಮ ಪರಂಪರೆಯಿಂದ ಒಪ್ಪಿಕೊಂಡು ಬಂದರೂ ಜನವರಿ ಒಂದನ್ನು ಹೊಸ ವರ್ಷದ ಸಂಭ್ರಮಾಚರಣೆಯಾಗಿಸುವುದು ಇತ್ತೀಚೆಗೆ ಜನಪ್ರಿಯವಾಗುತ್ತಲಿದೆ. ಮನುಷ್ಯ ಯಾವಾಗಲೂ ಭವಿಷ್ಯದಲ್ಲಿಯೇ ಬದುಕುತ್ತಿರುತ್ತಾನೆ. ಯಾವತ್ತೂ ಆತ ವರ್ತಮಾನದಲ್ಲಿ ಸುಖಿಯಲ್ಲ. ಮುಂದೆ ಇನ್ನೂ ಒಳ್ಳೆಯ ದಿನಗಳು ಬರಬಹುದು ಎಂಬ ನಿರೀಕ್ಷೆಯಲ್ಲಿ ಬದುಕಿನ ಸವಾಲುಗಳನ್ನು ಎದುರಿಸುತ್ತಾ ಹೋಗುತ್ತಾನೆ. ವರ್ಷದ ಕೊನೆಯಲ್ಲಿ ನಾವೀಗ ನಿಂತಿದ್ದೇವೆ. ಬರಲಿರುವ ವರ್ಷ ಹರ್ಷದಾಯಕವಾಗಿರಬಹುದೆಂಬ ನಿರೀಕ್ಷೆ ಎಲ್ಲರದ್ದು. ಅದಕ್ಕಾಗಿ ಅನೇಕರು ಹೊಸ ನಿರ್ಣಯಗಳನ್ನು ಕೈಗೊಳ್ಳುತ್ತಾರೆ. ಆದರೆ ಅವುಗಳಲ್ಲಿ ಬಹಳಷ್ಟು ಕಾರ್ಯರೂಪಕ್ಕೆ ಬರುವುದೇ ಇಲ್ಲ. ಅವು ಮುಂದಿನ ವರ್ಷಾಂತ್ಯಕ್ಕೆ ಮತ್ತೆ ಹೊಸ ನಿರ್ಣಯಗಳಾಗಿ ಆವರ್ತನಗೊಳ್ಳುತ್ತವೆ.

 ನನ್ನಲ್ಲೂ ಹೊಸ ನಿರ್ಣಯಗಳಿವೆ. ಅವುಗಳನ್ನಿಲ್ಲಿ ದಾಖಲಿಸುವುದರಲ್ಲಿ ಸ್ವಾರ್ಥವಿದೆ. ಮಾತುಗಳು ಗಾಳಿಯಲ್ಲಿ ಹಾರಿ ಹೋಗುತ್ತವೆ; ಯೋಚನೆಗಳು ಮನಸ್ಸಿನಯೇ ಇಂಗಿ ಹೋಗುತ್ತವೆ. ಅವುಗಳನ್ನು ಬರಹರೂಪಕ್ಕಿಳಿಸಿದರೆ ಅವು ದಾಖಲೆಗಳಾಗುತ್ತವೆ. ಅದಕ್ಕೆ ಬದ್ಧತೆ ಪ್ರಾಪ್ತವಾಗುತ್ತದೆ. ಅವುಗಳನ್ನು ಹೀಗೆ ಸಾರ್ವಜನಿಕಗೊಳಿಸಿದಾಗಲಂತೂ ಅದು ಸಾಮಾಜಿಕ ಜವಾಬ್ದಾರಿಯ ರೂಪ ಪಡೆದುಕೊಳ್ಳುತ್ತದೆ.

 ಬೆಂಗಳೂರಿನಲ್ಲಿ ನನ್ನಂತವಳಿಗೆ ಕನಸುಗಳು ಹುಟ್ಟಿಕೊಳ್ಳುವುದು ಕಷ್ಟ. ಏನು ಮಾಡಬೇಕಾದರೂ ಬೇರೆಯವರನ್ನು ಅವಲಂಬಿಸಬೇಕಾದುದು ಅನಿವಾರ್ಯ. ಹಾಗಾಗಿ ಓದದೆ ಉಳಿಸಿಕೊಂಡ ಪುಸ್ತಕಗಳನ್ನು ಓದಬೇಕೆಂದುಕೊಂಡಿದ್ದೇನೆ. ಅದರ ಪೂರ್ವಭಾವಿಯಾಗಿ ನಿನ್ನೆ ತಾನೆ ಮಾರ್ಕೆಟಿಗೆ ಹೋಗಿ ಆರಡಿ ಎತ್ತರ ಮೂರಡಿ ಅಗಲದ ನಾಲ್ಕು ಬುಕ್ ಶೆಲ್ಪ್ ಗಳನ್ನು ತಂದು ಪುಸ್ತಕಗಳನ್ನು ನೀಟಾಗಿ ಜೋಡಿಸಿ ಇಟ್ಟೆ. ಪುಸ್ತಕದ ರಾಶಿ ಎಷ್ಟಿದೆಯೆಂದರೆ ಇನ್ನೂ ಇಂತಹ ಮೂರು ಶೆಲ್ಪ್ ಗಳಾದರೂ ಬೇಕು.

 ಎಲ್ಲಿಯೋ ಹುಟ್ಟಿ ಇನ್ನೆಲ್ಲಿಯೋ ಬೆಳೆದು, ಮತ್ತೆಲ್ಲೋ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ, ಕೊನೆಗೆಲ್ಲೋ ನೆಲೆ ಕಂಡುಕೊಳ್ಳುವುದು ಬದುಕಿನ ಸೋಜಿಗಗಳಲ್ಲೊಂದು. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹಲವು ಬಾರಿ ನಾವು ವ್ಯವಸ್ಥೆಯೊಡನೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಾಡಿಕೊಳ್ಳಬೇಕು. ಇಲ್ಲವೇ ವ್ಯವಸ್ಥೆಯೊಳಗಿದ್ದುಕೊಂಡೇ ಅದನ್ನು ಬದಲಾಯಿಸುವ ಪ್ರಯತ್ನ ಮಾಡಬೇಕು. ವ್ಯವಸ್ಥೆಯ ಲೋಪದೋಶಗಳನ್ನು ಸರಿಪಡಿಸುವ ಪ್ರಯತ್ನಕ್ಕೆ ಸಾಂಘಿಕ ಹೋರಾಟದ ಅಗತ್ಯ ಇದೆ. ಅದು ಒಂಟಿ ದನಿಯಾದರೆ ವ್ಯವಸ್ಥೆ ನಮ್ಮನ್ನು ರಿಜೆಕ್ಟ್ ಮಾಡುತ್ತಾ ಹೋಗುತ್ತದೆ. ಆಗ ನಾವು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಲೇ ಬೇಕು. ಇಲ್ಲವಾದರೆ ನಮ್ಮ ಅಸ್ತಿತ್ವಕ್ಕೆ ಕಾರಣವೂ ಇರುವುದಿಲ್ಲ; ಬೆಲೆಯೂ ಬರುವುದಿಲ್ಲ. ಹಾಗೆ ನಾನು ಕಂಡು ಕೊಂಡ ಹಾದಿ ’ಬ್ಯಾಕ್ ಟು ನೇಚರ್’ ಅಂದರೆ ಕೃಷಿ.

 ನೆಲದೊಡನೆ ಮಾತು. ಗಿಡ-ಮರಗಳ ಒಡನಾಟ, ಖಗ-ಮೃಗಗಳ ಮಿಂಚು, ನದಿಯ ಸಂಗೀತ. ಅಲ್ಲೀಗ ನನ್ನ ಕನಸುಗಳು ಮೊಳಕೆಯೊಡೆಯುತ್ತಿವೆ. ನಾನು ಮಲೆನಾಡಿನ ಸೆರಗಿನಲ್ಲಿ, ಕಪಿಲೆಯ ದಂಡೆಯಲ್ಲಿ ಜಮೀನು ಖರಿದಿಸಿ ಒಂದು ವರ್ಷವಾಯಿತು. ಮೂರು ಎಕ್ರೆ ಫಲ ಬರುವ ಅಡಿಕೆ ತೋಟವಿದೆ. ತೆಂಗು, ಮಾವು, ಹಲಸು, ಹುಣಸೆ, ಬಾಳೆ ಸೇರಿದಂತೆ ಎಲ್ಲಾ ರೀತಿಯ ಹಣ್ಣಿನ ಗಿಡಗಳಿವೆ. ಹದಗೆಟ್ಟ ಸ್ಥಿತಿಯಲ್ಲಿದ್ದ ಅದನ್ನು ಕಳೆ ಕಿತ್ತು ಗೊಬ್ಬರ ಹಾಕಿ ನಳನಳಿಸುವಂತೆ ಮಾಡಿದ್ದಾಯ್ತು. ಜೊತೆಗೆ ಇನ್ನೂರೈವತ್ತು ಕೊಕ್ಕೊ ಗಿಡ ನೆಡಿಸಿದೆ. ಮುಂದಿನ ವರ್ಷ ಇಡೀ ಜಮೀನಿಗೆ ಸೋಲಾರ್ ಬೇಲಿ ಹಾಕಿಸಬೇಕು.ಖಾಲಿ ಇರುವ ಒಂದೆಕ್ರೆ ಜಾಗದಲ್ಲಿ ಉಳ್ಳಾಲ-೩ ಗೇರು ಸಸಿ ಹಾಕಬೇಕೆಂದಿದ್ದೇನೆ. ಅಡಿಕೆ ಗಿಡಗಳು ತುಂಬಾ ಹಳೆಯದಾಗಿ ಮುಗಿಲು ಮುಟ್ಟುತ್ತಿವೆ. ಹಾಗಾಗಿ ಮದ್ದು ಬಿಡಲು, ಅಡಿಕೆ ಕೊಯ್ಯಲು ಕಷ್ಟವಾಗುತ್ತಿದೆ. ಅದಕ್ಕಾಗಿ ರೀಪ್ಲಾಂಟ್ ಮಾಡಲು ನಿರ್ಧರಿಸಿದ್ದೇನೆ. ಕಳೆದ ವರ್ಷವೇ ಎರಡು ಸಾವಿರ ಮಂಗಳ ಗಿಡಗಳ ಬೀಜ ಹಾಕಿಟ್ಟಿದ್ದೇನೆ. ಕಳೆದ ವಾರ ಹೊಂಡ ತೆಗೆಯಲು ಕಾಂಟ್ರಾಕ್ಟ್ ಕೊಟ್ಟು ಬಂದಿದ್ದೇನೆ. ಇಡೀ ತೋಟಕ್ಕೆ ಸ್ಪಿಂಕ್ಲರ್ ಹಾಕುವ ಯೋಚನೆಯೂ ಇದೆ. ಸ್ವಲ್ಪ ನೇಂದ್ರ ಬಾಳೆ ಗಡ್ಡೆ ಹಾಕಬೇಕು. ಇನ್ನೈದು ವರ್ಷಕ್ಕೆ ಅದನ್ನು ನಂದನ ವನವಾಗಿಸುವ ಕನಸು ನನ್ನದು. ಬಳಲಿದ ಮೈ ಮನಸ್ಸುಗಳು ಅಲ್ಲಿ ಬಂದು ಜೀವ ಚೈತನ್ಯ ತುಂಬಿಕೊಳ್ಳಬೇಕು.ಅಲ್ಲಿಗೆ ನನ್ನ ಆಪ್ತರೆಲ್ಲಾ-ನಿಮ್ಮನ್ನೂ ಸೇರಿಸಿ-ಆಗಾಗ ಬರುತ್ತಿರಬೇಕು. ಒಂದು ಧ್ಯಾನ ಮಂದಿರ...ಲೈಬ್ರರಿ...ಮ್ಯೂಸಿಕ್....ಇನ್ನೂ ಏನೇನೆನೋ ಕನಸು ಕನವರಿಕೆಗಳು. ಇದು ನಾನು ಕಂಡ; ಕಾಣುತ್ತಿರುವ ಕನಸು. 

ವೈಯಕ್ತಿಕ ಮಟ್ಟದಲ್ಲಿರುವ ಈ ಕನಸು ನನಸಾಗುವುದು ನನ್ನ ಶ್ರದ್ಧೆ ಮತ್ತು ಪರಿಶ್ರಮದ ಮೇಲೆ ನಿಂತಿದೆ. ಅಂದರೆ ಇಂತಹ ಕೆಲಸ ಕಾರ್ಯಗಳು ವ್ಯಕ್ತಿಯೊಬ್ಬನ ದೈಹಿಕ ಶ್ರಮ ಮತ್ತು ಕ್ರಿಯಾಶೀಲತೆಯನ್ನಷ್ಟೇ ಬೇಡುತ್ತವೆ. ಆದರೆ ಭಾವಕೋಶದ ವಿಚಾರ ಹಾಗಲ್ಲ. ಭಾವಕೋಶಕ್ಕೆ ಸಂಬಂಧಪಟ್ಟಂತೆ ಎರಡು ಸಂಗತಿಗಳನ್ನಿಲ್ಲಿ ಹೇಳುತ್ತಿದ್ದೇನೆ. ನನ್ನ ’ಡಾರ್ಕ್ ರೂಂನಲ್ಲಿ ಕುಳಿತ್ಯಾಕೆ ಬರೆಯಬೇಕು?’ ಎಂಬ ಬರಹಕ್ಕೆ ಕಮೆಂಟ್ ಬರೆಯುತ್ತಾ ಸುಧನ್ವಾ ಹೇಳುತ್ತಾರೆ, ’ನಮ್ಮ ಭಾವ ಪ್ರಪಂಚವನ್ನು ಉಳಿಸಿಕೊಳ್ಳುವುದೇ ಈಗಿನ ದೊಡ್ಡ ಕೆಲಸ’. ಜೋಗಿ ತಮ್ಮ ಇತ್ತಿಚೆಗಿನ ಕಾದಂಬರಿ ’ಯಾಮಿನಿ’ ಯಲ್ಲಿ ತಮ್ಮ ಬಗ್ಗೆ ಬರೆಯುತ್ತಾ,”ಹಳೆಯ ಗೆಳೆಯರು ಧ್ರುವತಾರೆ. ಹೊಸಬರು ನಾಳಿನಾಚೆಯ ಬಾಗಿಲು” ಎನ್ನುತ್ತಾರೆ. ಅಂದರೆ ಏನರ್ಥ? ನಮ್ಮ ಭಾವಕೋಶ ಮಲೀನಗೊಳ್ಳುತ್ತಿದೆ! ಅದನ್ನು ಕಾಯ್ದುಕೊಳ್ಳುವ ಭರದಲ್ಲಿ ನಾವೆಲ್ಲಾ ಒಬ್ಬಂಟಿಗರಾಗುತ್ತಿದ್ದೇವೆ; ದ್ವೀಪವಾಗುತ್ತಿದ್ದೇವೆ.

 ನಿಜ. ನಮಗೊಂದು ಖಾಸಗಿ ಬದುಕಿದೆ. ಅಲ್ಲಿ ಒಳ್ಳೆಯ ಮನಸ್ಸುಗಳು ಮಾತ್ರ ಹರಿದಾಡುತ್ತಿರಲಿ ಎಂದು ಆಶಿಸುವುದು ತಪ್ಪಲ್ಲ. ಆದರೆ ಅಂತವರನ್ನು ಎಲ್ಲಿಂದ ಹುಡುಕಿ ನಮ್ಮವರನ್ನಾಗಿಸಿಕೊಳ್ಳೋಣ? ಅದು ಒಳ್ಳೆಯ ಪುಸ್ತಕಗಳನ್ನು ಹುಡುಕಿ ತಂದು ಶೆಲ್ಪ್ ನಲ್ಲಿಟ್ಟುಕೊಂಡಷ್ಟು ಸುಲಭವಲ್ಲ. ಒಳ್ಳೆಯ ಗೆಳೆಯರನ್ನು ಪಡೆಯುವುದಕ್ಕೆ ಪುಣ್ಯ ಮಾಡಿರಬೇಕು. ಅಂತಹ ಪುಣ್ಯ ಹೊಸ ವರ್ಷದಲ್ಲಿ ಎಲ್ಲರಿಗೂ ಲಭಿಸಲಿ. ಯಾರ ಭಾವಕೋಶವೂ ಛಿದ್ರಗೊಳ್ಳದಿರಲಿ.

Monday, December 15, 2008

’ನನ್ನದಾಗಿದ್ದ ನನ್ನದಲ್ಲದ ಕ್ಷಣಗಳು’




ಕಳೆದ ರಾತ್ರಿ ರಾಧಿಕಾಳ ಫೋನ್ ಬಂದಾಗಿನಿಂದ ರಾಜೀವ, ರಾಜೀವನಾಗಿರಲಿಲ್ಲ. ಕುಳಿತಲ್ಲಿ, ನಿಂತಲ್ಲಿ ರಾಧೆಯ ಬಗ್ಗೆಯೇ ಯೋಚಿಸುತ್ತಿದ್ದ. ”ನನಗೆ ನಿನ್ನೊಡನೆ ತುಂಬಾ ಮಾತಾಡುವುದಿದೆ. ಮಂಗಳೂರಿಗೆ ಬರುತ್ತಿದ್ದೇನೆ. ಗುರುವಾರ ಬೆಳಿಗ್ಗೆ ಬಸ್ ಸ್ಟ್ಯಾಂಡಿನಲ್ಲಿ ನನಗಾಗಿ ಕಾದಿರುತ್ತಿಯಾ...?” ಎಂದು ಕೇಳಿದ್ದಳು.

ಇಪ್ಪತ್ತು ವರ್ಷಗಳ ನಂತರ ಅವಳ ಧ್ವನಿ ಕೇಳಿ ಪುಳಕಿತಗೊಂಡಿದ್ದ ರಾಜೀವ.

ಈಗ ರಾಧೆ ಹೇಗಿರಬಹುದು?. ತನ್ನ ನಂಬರು ಆಕೆಗೆ ಹೇಗೆ ಸಿಕ್ಕಿತು?.... ಎಂದೆಲ್ಲಾ ಪ್ರಶ್ನೆಗಳ ಮಳೆಗೆರೆದಾಗ ’ಅಲ್ಲಿಗೇ ಬರುತ್ತಿದ್ದೇನಲ್ಲಾ.. ಆಗ ಎಲ್ಲವನ್ನೂ ಹೇಳುತ್ತೇನೆ.’ ಎಂದು ಪೋನ್ ಕಟ್ ಮಾಡಿದ್ದಳು.

ಬದುಕು ಎಂದರೆ ಸಂಬಂಧಗಳ ಜೋಡಣೆ ಮತ್ತು ವಿಘಟನೆ. ಹಲವು ಬಾರಿ ಅದು ಬಿಡುಗಡೆಯ ಹಂಬಲವೂ ಆಗಿರುತ್ತದೆ.

ಒಂದು ಕಾಲದಲ್ಲಿ ರಾಧಿಕಾ ರಾಜೀವನ ಬದುಕಿನ ಒಂದು ಭಾಗವಾಗಿದ್ದಳು. ನಾಟಕ, ಯಕ್ಷಗಾನ, ಸೆಮಿನಾರು, ಕ್ಷೇತ್ರಕಾರ್ಯಗಳಲೆಲ್ಲಾ ಅವಳು ಅವನ ಸಂಗಾತಿ. ನಸುಗಪ್ಪು ಬಣ್ಣದ ಆ ಹುಡುಗಿ ರಾಜೀವನ ಜೀವದ ಗೆಳತಿಯಾಗಿದ್ದಳು. ಅವಳ ಗೈರು ಹಾಜರಿ ಅವನಲ್ಲಿ ಬ್ರಹ್ಮಾಂಡದಷ್ಟು ಶೂನ್ಯತೆಯನ್ನು ಉಂಟುಮಾಡುತ್ತಿತ್ತು. ರಜೆ ಬಂದಾಗಲೆಲ್ಲಾ ಕಂಬೈನ್ಡ್ ಸ್ಟಡಿಯ ನೆಪದಲ್ಲಿ ಅವಳನ್ನು ತನ್ನ ಮನೆಗೆ ಆಮಂತ್ರಿಸುತ್ತಿದ್ದ. ನಿಷ್ಕಪಟ ಮನಸ್ಸಿನ ರಾಧಿಕಳನ್ನು ಕಂಡರೆ ರಾಜೀವನ ತಾಯಿ ಅನುಸೂಯರಿಗೂ ವಿಶೇಷ ಮಮತೆ. ತಂಗಿ ಕುಸುಮ ತನಗೊಬ್ಬಳು ಜೊತೆಗಾತಿ ಸಿಕ್ಕಿದಳೆಂದು ಹಿರಿಹಿರಿ ಹಿಗ್ಗುತ್ತಿದ್ದಳು.

ರಾಜೀವನಿಗೆ ಯಕ್ಷಗಾನದ ಶೋಕಿ ಜಾಸ್ತಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ವಾರ್ಷಿಕೋತ್ಸವದಂದು ಹಳೆ ವಿದ್ಯಾರ್ಥಿಗಳವತಿಯಿಂದ ಸಾಮಾನ್ಯವಾಗಿ ಯಕ್ಷಗಾನ ಇದ್ದೇ ಇರುತ್ತಿತ್ತು. ರಾಜೀವನಿಗೆ ಪುಂಡು ವೇಷ ಕಟ್ಟಿಟ್ಟ ಬುತ್ತಿ. ರಾಧಿಕಾಳಿಗೂ ಅಷ್ಟಿಷ್ಟು ಕುಣಿತ ಬರುತಿತ್ತು. ಭಾಗವತಿಕೆಯ ಮೇಲೆ ಆಕೆಗೆ ವಿಶೇಷ ಆಸಕ್ತಿ. ಶಾಸ್ತ್ರೀಯ ಸಂಗೀತದ ಗಂಧಗಾಳಿಯೂ ಇಲ್ಲದವರು ಅಷ್ಟೊಂದು ಭಾವಪೂರ್ಣವಾಗಿ ಹಾಡುವುದನ್ನು ಕೇಳಿ ಆಕೆ ಅಚ್ಚರಿ ಪಡುತ್ತಿದ್ದಳು; ಮೈಮರೆಯುತ್ತಿದ್ದಳು.

’ತನಗೆ ಎಂಥ ಸಖಿಯಾಗಿದ್ದಳು ರಾಧೆ...!’ ಎಂದು ನಿಟ್ಟುಸಿರು ಬಿಡುತ್ತಾ ಮಗ್ಗುಲು ಬದಲಾಯಿಸಿದ ರಾಜೀವ. ಆಕೆಯನ್ನು ಮದುವೆಯಾಗಬೇಕೆಂದು ಒಂದು ದಿನವೂ ಕನಸು ಕಾಣಲಿಲ್ಲ. ವರ್ತಮಾನವೇ ಅಷ್ಟೊಂದು ಸುಂದರವಾಗಿದ್ದವು. ಭವಿಷ್ಯದ ಬಗ್ಗೆ ಯೋಚಿಸುವ ಪ್ರಮೆಯವೇ ಬರಲಿಲ್ಲ. ಆದರೆ ಆಕೆ ಮುಂದಿನ ತಿಂಗಳು ತನ್ನ ಮದುವೆ ಎಂದಾಗ ತಾನು ಒಳಗೊಳಗೆ ಕುಸಿದು ಹೋಗಿದ್ದು ಸತ್ಯ. ಅಂದು ಜುಲೈ ೧೮. ಆ ದಿನ ಈಗಲೂ ತನ್ನ ನೆನಪಿನಲ್ಲಿ ಹಚ್ಚಹಸಿರಾಗಿ ಉಳಿದಿದೆ ಅಂದರೆ ಅದಕ್ಕೆ ಏನರ್ಥ?

’ನನ್ನನು ಮದುವೆಯಾಗುತ್ತಿಯಾ?’ ಎಂದು ಕೇಳಿಬಿಡೋಣವೆಂದುಕೊಳ್ಳುತ್ತಿದ್ದ. ಆದರೆ ಇನ್ನೊಂದು ಮನಸ್ಸು ಪ್ರತಿರೋಧ ಒಡ್ಡುತ್ತಿತ್ತು. ಅದಕ್ಕೆ ಕಾರಣವೂ ಇತ್ತು. ಅವಳನ್ನು ಮೃದುವಾಗಿ ಬಳಸಿ ಎದೆಗೊರಗಿಸಿಕೊಡು ನೆತ್ತಿಯ ಮೇಲೆ ಗಲ್ಲವೂರುವವರೆಗೆ ಅವನ ಕಲ್ಪನೆಗಳು ಗರಿಗೆದರುತ್ತಿದ್ದವು. ತುಟಿಗೆ ತುಟಿ ಬೆಸೆದು ಮೈಗೆ ಮೈ ಹೊಸೆದು ರತಿಕ್ರೀಡೆಯಾಡುವುದನ್ನು ಕಲ್ಪಿಸಿಕೊಳ್ಳುವುದಕ್ಕೂ ಅವನಿಂದಾಗುತ್ತಿರಲಿಲ್ಲ. ತನ್ನ ಪುರುಷತ್ವದಲ್ಲೇನಾದರೂ ಕೊರತೆಯಿರಬಹುದೇ, ಎಂದು ಆತ ಯೋಚಿಸಿದ್ದೂ ಇದೆ. ಅದನ್ನು ಪರೀಕ್ಷಿಸಿ ’ಹಾಗೇನೂ ಇಲ್ಲ’ ಎಂಬುದನ್ನು ದೃಢಪಡಿಸಿಕೊಂಡದ್ದೂ ಆಯಿತು.

ತನ್ನ ಬದುಕಿನಲ್ಲಿ ರಾಧೆಯ ಸ್ಥಾನ ಏನು? ಎಂದು ರಾಜೀವ ತೊಳಲಾಡುತ್ತಿರುವಾಗ ಇತ್ತ ರಾಧಿಕ ನಗುನಗುತ್ತಲೇ ಮದುವೆ ಮಾಡಿಕೊಂಡು ಬೆಂಗಳೂರು ಸೇರಿದಳು. ಇವನು ಮಂಗಳೂರಿನಲ್ಲೇ ಲೆಕ್ಚರರ್ ಆಗಿ ಕೆಲಸಕ್ಕೆ ಸೇರಿಕೊಂಡ. ಮದುವೆಯೂ ಆಯ್ತು. ಪತ್ನಿ ವಸುಂಧರ ಸುಸಂಸ್ಕೃತ ಮಹಿಳೆ. ಚುರುಕಾದ ಇಬ್ಬರು ಮಕ್ಕಳು. ಸ್ವರ್ಗಕ್ಕೆ ಕಿಚ್ಚು ಹಚ್ಚಲು ಇನ್ನೇನು ಬೇಕು?

ಸಾಮಾನ್ಯರಿಗೆ ಇಷ್ಟೇ ಸಾಕಾಗಿತ್ತೇನೋ, ಆದರೆ ರಾಜೀವನಿಗೆ ಇನ್ನೇನೋ ಬೇಕಾಗಿತ್ತು. ಸಂಜೆಯಾಯಿತೆಂದರೆ ಆವರಿಸಿಕೊಳ್ಳುವ ಶೂನ್ಯ. ಖಾಲಿತನ, ಪರಿಪೂರ್ಣವಾದ ಸಂಬಂಧವೊಂದರ ಹುಡುಕಾಟ. ’ರಾಧೆ ಇದ್ದಿದ್ದರೆ...’ ನಿಟ್ಟುಸಿರು...
"ನಿದ್ದೆ ಬಂದಿಲ್ವಾ?" ಎನ್ನುತ್ತಾ ವಸುಂಧರ ಮಗ್ಗುಲು ಬದಲಾಯಿಸಿ ಗಂಡನನ್ನು ತಬ್ಬಿಕೊಂಡು ಅವನ ಭುಜ ತಟ್ಟುತ್ತಾ ನಿದ್ದೆ ಹೋದಳು.

ಅತ್ತ ಎಚ್ಚರವೂ ಅಲ್ಲದ ಇತ್ತ ನಿದ್ರೆಯೂ ಅಲ್ಲದ ಸ್ಥಿತಿಯಲ್ಲಿರುವಾಗಲೇ ಅಲಾರಂ ಸದ್ದಾಯಿತು. ಎದ್ದವನೇ ಟೀ ಮಾಡಿಕೊಂಡು ಕುಡಿದು ಕಾರು ತಗೊಂಡು ಬಸ್ ಸ್ಟ್ಯಾಂಡಿಗೆ ಬಂದು ಬೆಂಗಳೂರು ಬಸ್ಸಿಗಾಗಿ ಕಾಯತೊಡಗಿದ. ರಾಧೆ ಈಗ ಹೇಗಾಗಿರಬಹುದು? ತಾಯ್ತನ, ಗೃಹಕೃತ್ಯಗಳು ಹುಡುಗಿಯರಿಗೆ ಸ್ಥೂಲಕಾಯವನ್ನು ತರುತ್ತದೆ ಎಂದುಕೊಳ್ಳುತ್ತಿರುವಾಗಲೇ ಬಸ್ ಬಂತು. ಅರೇ.... ಅದು ರಾಧೆಯಲ್ಲವೇ?

ಜುಬ್ಬ ಪೈಜಾಮ ತೊಟ್ಟ, ಸ್ವಚ್ಚಂದವಾಗಿ ಹಾರುತ್ತಿರುವ ಕೂದಲನ್ನು ಎಡಗೈನಿಂದ ಹಿಂದಕ್ಕೆ ಸರಿಸುತ್ತಾ ತನ್ನೆಡೆಗೆ ಮುಗುಳ್ನಕ್ಕ ಬಳ್ಳಿ ದೇಹದ ಯುವತಿಯನ್ನು ರಾಧಿಕಳೆಂದು ಗುರುತು ಹಿಡಿಯಲು ರಾಜೀವನಿಗೆ ಒಂದು ಕ್ಷಣ ಗಲಿಬಿಲಿಯಾಯಿತು. ಅವಳೇ ಮುಂದೆ ಬಂದು "ಹಾಯ್ ರಾಜಿ" ಎಂದು ಕೈ ಹಿಡಿದುಕೊಂಡಳು. ಅವಳನ್ನೇ ದಿಟ್ಟಿಸಿ ನೋಡುತ್ತಾ, ’ಎಷ್ಟು ಸುಂದರಿಯಾಗಿದ್ದಿಯಾ ನೀನು’ ಎಂದು ಮೆಲ್ಲನೆ ಅವಳ ಭುಜ ತಟ್ಟಿದ ರಾಜೀವ. ’ನೀನೆನೂ ಕಮ್ಮಿ ಇಲ್ಲ.’ ಎಂದು ತೋಳು ಹಿಡಿದು ತನ್ನೆಡೆಗೆ ತಿರುಗಿಸಿಕೊಂಡು ಅವನನ್ನೇ ದಿಟ್ಟಿಸಿ ’ಹಿಂದೆ ನೀನು ಹೀಗಿರಲಿಲ್ಲ’ ಎನ್ನುತ್ತಾ ಅವನ ಅಂಗೈಗಳನ್ನು ಮೃದುವಾಗಿ ಹಿಸುಕಿದಳು.

ಇಬ್ಬರೂ ಸ್ವಲ್ಪ ಹೊತ್ತು ಮೌನವಾದರು. ’ನಿನ್ನ ಪ್ರೋಗ್ರಾಂ ಏನೂಂತ ಗೊತ್ತಾಗಿಲ್ಲಾ. ಯಾವುದಾದರೂ ಹೋಟೇಲ್...’ಎಂದು ಅನುಮಾನಿಸುತ್ತಲೇ ಕೇಳಿದ ರಾಜೀವ. ತಕ್ಷಣ ರಾಧಿಕಳ ಮುಖ ಬಾಡಿ ಹೋಯಿತು. ’ನಿನ್ನ ಮನೆಗೆ ನಾ ಬರಬಾರದೇ..ನಿನ್ನ ಹೆಂಡ್ತಿಯೇನಾದರೂ.....?’ ಎಂದು ಅವನ ಮುಖ ನೋಡಿದಳು. ರಾಜೀವ ಮರುಮಾತಾಡದೆ ಅವಳ ಕೈಯಿಂದ ಬ್ಯಾಗ್ ತೆಗೆದುಕೊಂಡು ಎಡಗೈಗೆ ಬದಲಾಯಿಸಿ ಬಲಗೈಯನ್ನು ಅವಳೆಡೆಗೆ ಚಾಚಿದ.

ಕಾರು ಮುಂದಕ್ಕೆ ಚಲಿಸುತ್ತಿತ್ತು. ಮೌನ ಮಾತಾಡುತ್ತಿತ್ತು. ರಾಧಿಕ ಮೆಲ್ಲನೆ ಬಲಕ್ಕೆ ವಾಲಿ ಆತನ ಭುಜದ ಮೇಲೆ ತಲೆಯಿಟ್ಟಳು. ಅವನು ಎಡಗೈನಿಂದ ಅವಳ ಭುಜ ಬಳಸಿದ. ಅವಳು ಹಾಗೆಯೇ ಕಣ್ಮುಚ್ಚಿದಳು.

ಕಾರು ಮನೆಯ ಮುಂದೆ ನಿಂತಾಗ ರಾಧಿಕ ಭಾವಲೋಕದಿಂದ ಹೊರಬಂದಳು. ವಸುಂಧರ ಮನೆಯಿಂದ ಹೊರಬಂದಳು. ಸೇಹಿತ ಬರುತ್ತಾನೆಂದಿದ್ದರು, ಈಗ ನೋಡಿದರೆ ಸೇಹಿತೆ ಬಂದಿದ್ದಾಳೆ. ಯಾರಿರಬಹುದು? ಎಂದುಕೊಳ್ಳುತ್ತಲೇ ಸ್ವಾಗತಿಸಲು ಕಾರಿನ ಹತ್ತಿರ ಬಂದಳು.
’ಇವಳು ನನ್ನ ಬಾಲ್ಯ ಸೇಹಿತೆ ರಾಧಿಕಾ’ ಎಂದು ಪತ್ನಿಗೆ ಪರಿಚಯಸಿದ ರಾಜೀವ ರಾಧಿಕಳತ್ತ ತಿರುಗಿ, ’ಇವಳು ನನ್ನ ಗೃಹಲಕ್ಷ್ಮಿ, ವಸುಂಧರ..’ ಎಂದು ನಾಟಕೀಯವಾಗಿ ಪರಚಯಿಸಿದ.
ವಸುಂಧರ ರಾಧಿಕಳ ಕೈ ಹಿಡಿದು ಬರಮಾಡಿಕೊಂಡಳು.

ರಾಜೀವನ ಮೊದಲ ಮಗಳು ರಂಜಿತಾ ಸುಳ್ಯಕ್ಕೆ ವಾಸ್ತವ್ಯದ ಸಮ್ಮರ್ ಕ್ಯಾಂಪಿಗೆ ಹೋಗಿದ್ದಳು. ಅವಳ ರೂಮಿನಲ್ಲಿ ರಾಧಿಕಳ ಲಗೇಜನಿಟ್ಟು ಅಣಿ ಮಾಡಿದಳು ವಸುಂಧರಾ. ಸ್ನಾನ ತಿಂಡಿಗಳಾದವು. ರಾದಿಕಳಂತೆ ವಸುಂಧರಾ ಕೂಡಾ ಒಳ್ಳೆಯ ಅಭಿರುಚಿಯುಳ್ಳ ಮಾತುಗಾತಿಯಾಗಿದ್ದಳು. ಇಬ್ಬರೂ ಬಹುಕಾಲದ ಗೆಳತಿಯರಂತೆ ಹೊಂದಿಕೊಂಡುಬಿಟ್ಟರು.

ಇಬ್ಬರೂ ಹಂಪನಕಟ್ಟೆಗೆ ಹೋಗಿ ತಾಜ ಮೀನು ತಂದು ರುಚಿಯಾದ ಅಡುಗೆ ಮಾಡಿದರು. ಊಟ ಮುಗಿದ ಒಡನೆಯೇ ರಾಧಿಕಳಿಗೆ ಗಡದ್ದಾದ ನಿದ್ರೆ ಬಂತು. ನಿದ್ದೆಯಿಂದ ಎಚ್ಚೆತ್ತಾಗ ಹಬೆಯಾಡುವ ಚಹ ಜೊತೆಗೆ ಬಾಳೆಕಾಯಿ ಬಜ್ಜಿಯೂ ಬಂತು. ಇನ್ನೊಬ್ಬರ ಕೈನಲ್ಲಿ ಉಪಚಾರ ಹೇಳಿಸಿಕೊಂಡು ತಿಂಡಿ ತಿನ್ನುವುದರಲ್ಲಿ ಎಷ್ಟು ಗಮ್ಮತ್ತಿದೆ ಎಂದುಕೊಳ್ಳುತ್ತಲೇ ರ್‍ಆಧಿಕಾ ತಿಂಡಿ ತಿಂದಳು.

ಸಂಬಂಧಗಳನ್ನು ಸಂಭಾಳಿಸುವುದರಲ್ಲಿ ರಾದಿಕ ಬಹು ಜಾಣೆ. ತನ್ನ ಆತ್ಮೀಯ ವರ್ತುಲದೊಳಗಿನ ಯಾರಾದರೊಬ್ಬ ಗಂಡಸಿನ ಬಗ್ಗೆ ತನಗೇನಾದರು ಅನೂಹ್ಯವಾದ ಸೆಳೆತವೇನಾದರು ಹುಟ್ಟಿಬಿಟ್ಟರೆ ಅದನ್ನು ಅಲ್ಲಿಯೇ ಚಿವುಟಲು ಪ್ರಯತ್ನಿಸುತ್ತಾಳೆ. ಅದು ನಿಸರ್ಗ ಸಹಜವಾದ ಆಕರ್ಷಣೆ ಎಂಬುದು ಆಕೆಗೆ ಗೊತ್ತಿದೆ. ಆದರೆ ಸೆಳೆತದ ಗುಂಗು ಆವರಿಸಿಕೊಂಡರೆ ಅವಳು ಅದೀರ್‍ಅಳಾಗುತ್ತಾಳೆ. ತಕ್ಷಣ ಆಕೆ ಅತನ ಪತ್ನಿಯ ಪರಿಚಯ ಮಾಡಿಕೊಳ್ಳಲು ಪ್ರಯತ್ನಿಸುತ್ತಾಳೆ. ಒಂದು ಹೆಣ್ಣು ಇನ್ನೊಂದು ಪರಿಚಿತ ಹೆಣ್ಣಿಗೆ ಮೋಸ ಮಾಡಲಾರಳು ಎಂಬುದು ಅವಳ ನಂಬಿಕೆ. ’ತಾಯ್ತನ’ ಹಾಗೆ ಮಾಡಲು ಬಿಡಲಾರದು.

ರಾಜೀವನೆಡೆಗಿನ ಆಕರ್ಷಣೆ ಆ ತೆರನಾದ್ದಲ್ಲ. ಅದು ವ್ಯಾಖ್ಯೆಗೆ ನಿಲುಕದ್ದು. ಬಹುಶಃ ಆತ್ಮವನ್ನು ಹುಡುಕಿ ಬಂದ ಜೀವದ ಆಕರ್ಷಣೆ.

ಪೈಂಟಿಂಗ್ ಕ್ಲಾಸಿಗೆ ಹೋಗಿದ್ದ ಕಾರ್ತಿಕ ಬಂದ ನಂತರ ಎಲ್ಲರೂ ಸೇರಿ ಬೀಚಿಗೆ ಹೋದರು. ಇಪ್ಪತ್ತು ವರ್ಷಗಳ ಹಿಂದೆ ಓಡಾಡಿದ ಜಾಗದಲ್ಲಿ ಈಗ ಮತ್ತೊಮ್ಮೆ ರಾದಿಕಾ, ರಾಜೀವ ಜತೆಯಾಗಿ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಅಂದಿಗೂ ಇಂದಿಗೂ ಅಪಾರ ಅಂತರವಿತ್ತು. ವಸುಂಧರೆಗೂ ಇದು ಗೊತ್ತಾಗುತ್ತಿತ್ತು.ಹಾಗಾಗಿ ಆಕೆ ಕುರುಕು ತಿಂಡಿ ತರುತ್ತೇನೆಂದು ಮಗನೊಡನೆ ಅಂಗಡಿಯತ್ತ ಹೋದಳು.

ರಾಜೀವನಿಗೆ ಆಕೆ ಇಲ್ಲಿಗೆ ಯಾಕೆ ಬಂದಿದ್ದಾಳೆ ಎಂಬ ಚಿಕ್ಕ ಕುತೂಹಲವಿತ್ತು. ಆದರೆ ಕೇಳಲು ಮುಜುಗರ. ಏನಾದರು ಮಾತಾಡಬೇಕಲ್ಲಾ ಎನಿಸಿ
’ಮಕ್ಕಳೇನು ಮಾಡುತ್ತಿದ್ದಾರೆ?’ ಎಂದ.
’ಮೊದಲನೆಯವಳು ಸೆಕೆಂಡ್ ಪಿಯುಸಿ, ಎರಡನೆಯವನು ಎಂಟನೇ ಕ್ಲಾಸ್. ಇಬ್ಬರೂ ತುಂಬಾ ಬುದ್ಧಿವಂತರು. ಆ ಮಟ್ಟಿಗೆ ನಾನು ಪರಮ ಸುಖಿ’.
’ಆ ಮಟ್ಟಿಗೆ’ ಶಬ್ದ ರಾಜೀವನಿಗೆ ಇನ್ನೇನೋ ರವಾನಿಸಿದಂತಾಯಿತು.
’ಯಶವಂತ ಹೇಗಿದ್ದಾರೆ?’
’ಚೆನ್ನಾಗಿದ್ದಾರೆ. ಪೀಲ್ಡ್ ನಲ್ಲಿ ಒಳ್ಳೆ ಹೆಸರಿದೆ. ಪ್ರಾಮಾಣಿಕ. ತನ್ನ ಕೆಲಸದ ಮೇಲಿರುವಷ್ಟು ನಿಷ್ಟೆ, ಶ್ರದ್ಧೆ, ಇನ್ಯಾವುದರ ಮೇಲೂ ಇಲ್ಲ. ಇದೇ ನಮ್ಮಿಬ್ಬರ ನಡುವೆ.....’ ಎಂದವಳೇ ಅರ್ಧಕ್ಕೆ ನಿಲ್ಲಿಸಿದಳು.
ರಾಜೀವನಿಗೆ ಮಾತು ಬದಲಾಯಿಸಬೇಕೆನಿಸಿತು.
’ನೀನು ಇಲ್ಲಿಗೆ ಬಂದ ಕಾರಣ....’ಮುಜುಗರದಿಂದಲೇ ತಡೆ ತಡೆದು ಕೇಳಿದ.
ನಡೆಯುತ್ತಿದ್ದವಳು ತಟ್ಟನೆ ನಿಂತು ಅವನನ್ನೇ ದಿಟ್ಟಿಸುತ್ತಾ,’ ಯಾಕೋ? ನಿನ್ನನ್ನು ಕಾಣಲು ನಾನು ಬರಬಾರದೇ?’
ರಾಜೀವ ಕಿರುನಗು ನಕ್ಕು ಅವಳ ತಲೆಗೊಂದು ಮೊಟಕಿದ. ಅವಳು ಅವನ ತೋಳು ಚಿವುಟಿದಳು. ಇಬ್ಬರೂ ಏನನ್ನೋ ನೆನಸಿಕೊಂಡು ಜೋರಾಗಿ ನಕ್ಕರು.
’ಏನದು ಅಷ್ಟೊಂದು ನಗು’ ಎನ್ನುತ್ತಾ ಕೈಯಲ್ಲಿ ಬೇಲ್ ಪುರಿ ಹಿಡಿದು ಬಂದ ವಸುಂಧರಾ ಅವರ ಜೊತೆ ಸೇರಿದಳು.
ಎಲ್ಲರೂ ರುದ್ರಪಾದೆ ಹತ್ತಿ ಕಡಲಿಗೆ ಮುಖಮಾಡಿ ಕುಳಿತು ಬೇಲ್ ಪುರಿ ತಿನ್ನುತ್ತಾ ಮುಳುಗುತ್ತಿರುವ ಸೂರ್ಯನ ಕೆಂಬಣ್ಣ ತೆರೆಗಳೊಡನೆ ಚೆಲ್ಲಾಟವಾಡುತ್ತಿರುವುದನ್ನು ನೋಡುವುದರಲ್ಲಿ ಮಗ್ನರಾದರು.
ರಾದಿಕಳಿಗೆ ಕಡಲೆಂದರೆ ಹುಚ್ಚು ಮೋಹ. ಅಬ್ಬರದ ತೆರೆಗಳನ್ನು ದಡಕ್ಕಪ್ಪಳಿಸುವ ಪರಿ ನೋಡಿದರೆ ’ನನ್ನ ಮುಂದೆ ನೀನು ಅಲ್ಪ. ತಾಕತ್ತಿದ್ದರೆ ನನ್ನನ್ನು ಗೆಲ್ಲು ಬಾ’ ಎಂದು ಸವಾಲು ಹಾಕುತ್ತಿರುವಂತೆ ಭಾಸವಾಗುತ್ತಿತ್ತು.

ಕಾಲೇಜು ದಿನಗಳಲ್ಲಿ ಕಡಲಿಗೆ ಬಂದಾಗಲೆಲ್ಲಾ ಮರಳ ಮೇಲೆ ’ ಸಮುದ್ರರಾಜ, ಐ ಲವ್ ಯೂ’ ಎಂದು ಬರೆಯುವುದು, ಅದನ್ನು ಅಲೆಗಳು ಅಳಿಸಿ ಹಾಕುತ್ತವೆಯೇನೋ ಎಂದು ಕಾತರದಿಂದ ನೋಡುವುದು, ಅಳಿಸಿದರೆ ಸಮುದ್ರರಾಜನಿಗೆ ತನ್ನಲ್ಲಿ ಪೇಮವಿದೆ ಎಂದು ಸಂಭ್ರಮವಿಸುವುದು, ಅಳಿಸದಿದ್ದರೆ ತನ್ನ ಬಗ್ಗೆ ಉಪೇಕ್ಷೆಯಿದೆ ಎಂದು ಮನಸ್ಸು ಬಾಡಿಸಿಕೊಳ್ಳುವುದು.
ಅದನ್ನೆಲ್ಲ ನೆನೆಸಿಕೊಂಡು ರಾಧಿಕಳ ಮುಖದಲ್ಲಿನಗು ಲಾಸ್ಯವಾಡಿತು.ಇನ್ನೊಮ್ಮೆ ಬಂದಾಗ ಅಂದಿನ ಎಲ್ಲಾ ಗೆಳೆಯ-ಗೆಳತಿಯರ ವಿಳಾಸ ಪತ್ತೆ ಮಾಡಿ ಸಂಬಂಧಗಳನ್ನು ಪುನರ್ ಜೋಡಿಸಬೇಕು ಎಂದುಕೊಂಡಳು.

ಯಶವಂತನ ಜೊತೆ ಬಂದು ಈ ರುದ್ರಪಾದೆಯ ಮೇಲೆ ಕುಳಿತು ಸಮುದ್ರದ ರುದ್ರ ರಮಣೀಯ ದೃಶ್ಯವನ್ನು ನೋಡಬೇಕೆಂದು ಎಷ್ಟೊಂದು ಹಂಬಲಿಸಿದ್ದಳು. ಮದುವೆಯಾದಂದಿನಿಂದ ತೀರಾ ಇತ್ತೀಚಿನವರೆಗೂ ಕಂಡಂತ ಕನಸದು. ಆದರೆ ಅದು ಕನಸಾಗಿಯೇ ಉಳಿಯಿತು. ಅವಳಿಂದ ನಿಟ್ಟುಸಿರು ಹೊಮ್ಮಿತು.
’ರಾತ್ರಿಯಿಡಿ ಪ್ರಯಾಣ ಮಾಡಿ ನಿನ್ಗೆ ಆಯಾಸ ಆಗಿರ್ಬೇಕು. ನಾಳೆ ಬೇಕಾದ್ರೆ ಬರೋಣ.’ ಎನ್ನುತ್ತಾ ಎದ್ದ ರಾಜೀವ.
’ನಾಳೆ ರಾತ್ರಿ ಬೆಂಗಳೂರಿಗೆ ವಾಪಾಸ್ಸಾಗ್ಬೇಕು’ ಎನ್ನುತ್ತಾ ಬಟ್ಟೆ ಕೊಡವಿಕೊಂಡಳು.
’ಒಂದೆರಡು ದಿನ ಇದ್ದು ಹೋಗಬಾರದೇ? ನಮ್ಮವರಿಗೆ ನೀವೊಬ್ಬರೇ ಆತ್ಮೀಯರೆಂದು ಅವರು ಆಗಾಗ ಹೇಳುತ್ತಿದ್ರು. ನಿಮ್ಮನ್ನು ನೋಡುವ ಕುತೂಹಲವೂ ನನಗಿತ್ತು. ಈಗ ನನಗೂ ನೀವು ಹತ್ತಿರದವರೆನಿಸುತ್ತಿದೆ’ ಎಂದು ವಸುಂಧರೆಯೂ ಒತ್ತಾಯಿಸಿದಳು.
’ಇನ್ನೊಮ್ಮೆ ಖಂಡಿತವಾಗಿಯೂ ಬರುತ್ತೇನೆ’ ಅವಳ ಧ್ವನಿ ಕಂಪಿಸಿದ್ದು ರಾಜೀವನ ಅನುಭವಕ್ಕೆ ಬಂತು.
ಯಾಕೆ, ನನ್ನ ರಾಧೆ ನೆಮ್ಮದಿಯಾಗಿಲ್ಲವೇ?
ಮರುದಿನ ಬೆಳಿಗ್ಗೆ ಎಷ್ಟೇ ಒತ್ತಾಯ ಮಾಡಿದರೂ ರಾಧಿಕ ನಿಲ್ಲಲಿಲ್ಲ. ಕಳುಹಿಸಿ ಕೊಡಲೆಂದು ಸಿದ್ದನಾದ ರಾಜೀವನನ್ನು ನೋಡಿ, ’ರಂಜಿತಾಳ ಮನೆಗೆ ಹೋಗುತ್ತಿದ್ದೇನೆ. ನೀನೂ ಬಂದರೆ ಚೆನ್ನಾಗಿರುತ್ತಿತ್ತು. ಎಂದಳು.
’ರಂಜಿತಾ ಇಲೆ ಇದ್ದಾಳಾ? ನನಗೆ ಗೊತ್ತೆ ಇರಲಿಲ್ಲಾ..’ಎಂದ ರಾಜೀವ.
’ಅವರೊಬ್ಬರೇ ಹುಡುಕಿಕೊಂಡು ಹೋಗ್ಬೆಕಲ್ಲಾ. ನೀವೂ ಜೋತೆಯಲ್ಲಿ ಹೋಗಿ’ ಎಂದಳು. ವಸುಂಧರಾ.
’ಹೆಂಗಸರ ಕಷ್ಟ ಹೆಂಗಸರಿಗೆ ಮಾತ್ರ ಅರ್ಥ ಆಗುತ್ತೆ, ಅಲ್ವಾ ವಸು.’ ಎಂದು ನಕ್ಕಳು ರಾಧಿಕಾ.
ರಾಧಿಕಾಳನ್ನು ಪ್ರೀತಿಯಿಂದ ವಸುಂಧರಾ ಬೀಳ್ಕೊಟ್ಟಳು.
ಕಾರು ಎಕ್ಕೂರನ್ನು ದಾಟಿ ಪಂಪ್ ವೆಲ್ ಹತ್ತಿರಕ್ಕೆ ಬಂದಾಗ ’ರಂಜಿತಳ ಮನೆ ಯಾವ ಕಡೆಗೆ’ ಎಂದ ರಾಜೀವ.
ರಾಧಿಕಾ ಅವನನ್ನೇ ಆಳವಾಗಿ ದಿಟ್ಟಿಸಿ ನೋಡಿ,’ಹೋಟೇಲ್ ನವರತ್ನಕ್ಕೆ ಹೋಗೋಣ’ ಎಂದಳು.
ಯಾಕೆ ಎಂದು ಪ್ರಶ್ನಿಸಬೇಕೆನಿಸಿದರೂ ಹಿಂದಿನ ದಿನಗಳ ಅವಳ ಹಟಮಾರಿತನ ನೆನಪಾಗಿ ಹೋಟೇಲಿನತ್ತ ಕಾರು ತಿರುಗಿಸಿದ. ಹೋಟೇಲ್ ಮುಂದೆ ಕಾರು ನಿಂತಿತು. ತಾನೇ ರಿಸೆಪ್ಷನ್ ಬಳಿ ಹೋಗಿ ರೂಂ ಪಡೆದು ಲಿಪ್ಟ್ ನತ್ತ ನಡೆದಳು. ರಾಜೀವ ಮೌನವಾಗಿ ಹಿಂಬಾಲಿಸಿದನು.

ರೂಮಿಗೆ ಬಂದವಳೇ ಹಾಸಿಗೆ ಮೇಲೆ ದೊಪ್ಪೆಂದು ಬಿದ್ದಳು. ರಾಜೀವನಿಗೆ ಏನೂ ತೋಚದೆ ಕಿಟಿಕಿಯನ್ನು ತೆರೆಯುತ್ತಾ ದೂರದಲ್ಲಿ ಕಾಣುತ್ತಿರುವ ಸಮುದ್ರವನ್ನೊಮ್ಮೆ ಆಕೆಯನ್ನೊಮ್ಮೆ ದಿಟ್ಟಿಸತೊಡಗಿದನು. ಸ್ವಲ್ಪ ಹೊತ್ತಿನ ನಂತರ ನಿಧಾನವಾಗಿ ರಾಜೀವನ ಹತ್ತಿರ ಬಂದ ರಾಧಿಕ ಅವನ ಕೈ ಹಿಡಿದುಕೊಂಡಳು. ಪವಿತ್ರ ಮುಂಜಾವಿನಲ್ಲಿ ಪಾರಿಜಾತ ಪುಷ್ಪ ಮೆಲ್ಲನೆ ಧರೆಯನ್ನು ಸ್ಪರ್ಶಿಸುವಂತೆ ಮೆಲ್ಲನೆ ಅವನ ಎದೆಗೊರಗಿದಳು. ಅರೆಗಣ್ಣು ಮುಚ್ಚಿದ ಆಕೆ ಈ ಲೋಕದಲ್ಲಿರುವಂತೆ ಕಾಣುತ್ತಿರಲಿಲ್ಲ. ರಾಜೀವ, ಅವಳನ್ನು ಮೃದುವಾಗಿ ತೋಳುಗಳಿಂದ ಬಳಸಿ ಮಂಚದ ಬಳಿ ತಂದು ಹಾಸಿಗೆಯ ಮೇಲೆ ಮಲಗಿಸಿ ಮೇಲೇಳಬೇಕೆನ್ನುವಷ್ಟರಲ್ಲಿ ಆಕೆ ಆತನ ಕೈ ಹಿಡಿದು ಕುಳ್ಳಿರಿಸಿದಳು. ಅವನು ಏನೋ ಹೇಳಲೆಂದು ಬಾಯ್ತೆರೆದಾಗ ಅವಳು ಮಾತಾಡದಂತೆ ತಡೆದಳು.

ಆ ದಿವ್ಯ ಘಳಿಗೆಯನ್ನು ಪೂರ್ತಿಯಾಗಿ ಅನುಭವಿಸುತ್ತಿರುವಂತೆ ಅವನತ್ತ ಸರಿದು ತೊಡೆಯ ಮೇಲೆ ತಲೆಯಿಟ್ಟಳು. ಹೊಟ್ಟೆಯಲ್ಲಿರುವ ಮಗುವಿನಂತೆ ಕಾಲುಗಳನ್ನು ಮಡಿಚಿ, ಗಲ್ಲದ ಮೇಲೆ ಕೈಗಳನ್ನಿಟ್ಟುಕೊಂಡು ಮಗ್ಗುಲಾಗಿ ಮಲಗಿದಳು. ರಾಜೀವನಿಗೆ ಏನೂ ತೋಚದೆ ಸುಮ್ಮನೆ ಅವಳ ಕೂದಲು ಸವರುತ್ತಾ ಕುಳಿತುಕೊಂಡ.

ಸ್ವಲ್ಪ ಹೊತ್ತಿನಲ್ಲಿ ತನ್ನ ಪ್ಯಾಂಟ್ ಒದ್ದೆಯಾದ ಅನುಭವವಯ್ತು. ಬಗ್ಗಿ ನೋಡಿದರೆ ಮುಚ್ಚಿದ ಕಣ್ಣುಗಳಿಂದ ನೀರು ಧಾರೆಯಾಗಿ ಹರಿಯುತ್ತಿದೆ. ಬಹುಕಾಲದಿಂದ ತಡೆಹಿಡಿದಿದ್ದ ಭಾವನೆಗಳ ಮಹಾಪೂರವಿರಬೇಕು. ಹರಿದುಬಿಡಲಿ. ಸ್ವಾಭಿಮಾನದ ಹೆಣ್ಣು. ಎಲ್ಲಿಯೂ, ಯಾರೆದುರೂ ಇದುವರೆಗೆ ತನ್ನ ಅಂತರಂಗವನ್ನು ಬಿಚ್ಚಿಟ್ಟಿರಲಾಳು ಎಂದುಕೊಳ್ಳುತ್ತಾ, ಬಲಗೈನಿಂದ ಅವಳನ್ನು ಬಾಚಿ ತನ್ನ ಹೊಟ್ಟೆಯೆಡೆಗೆ ಇನ್ನಷ್ಟು ಒತ್ತಿಕೊಂಡ.

ಎಷ್ಟೋ ಹೊತ್ತು ರಾಜೀವ ಹಾಗ್ಯೇ ಕುಳಿತಿದ್ದನು. ಕಾಲುಗಳು ಚೋಮುಗಟ್ಟಿ ನೋಯಲಾರಂಭಿಸಿದಾಗ ಮೆಲ್ಲಗೆ ಅವಳ ಮುಖದೆಡೆಗೆ ಬಾಗಿದ. ಶತಮಾನಗಳಿಂದ ನಿದ್ದೆಯೇ ಮಾಡಿಲ್ಲವೇನೋ ಎಂಬಂತೆ ಶಾಂತಳಾಗಿ ನಿದ್ರಿಸುತ್ತಿದ್ದಳು. ರಾಜೀವನಿಗೆ ಅಕ್ಕರೆ ಉಕ್ಕಿ ಬಂತು. ಮೆಲ್ಲನೆ ಬಾಗಿ ಅವಳ ಹಣೆಯ ಮೇಲೆ ಹೂ ಮುತ್ತನ್ನಿತ್ತ. ಆಕೆ ನಿದ್ದೆಯಲ್ಲಿಯೇ ಹೊರಳಿ ಇನ್ನಷ್ಟು ಹತ್ತಿರಕ್ಕೆ ಸರಿದಳು.

ಇವಳ ಸಂಸಾರದಲ್ಲೇನಾದರು ತೊಡಕಿರಬಹುದೇ? ಎಂದು ಚಿಂತಿಸುತ್ತಲೇ ತುಂಬಾ ಹೊತ್ತು ಸುಮ್ಮನೆ ಕುಳಿತ ರಾಜೀವ. ನೀರು ಕುಡಿಯಬೇಕೆನಿಸಿತು. ಮೆಲ್ಲನೆ ಅವಳನ್ನು ಹಾಸಿಗೆಯಲ್ಲಿ ಮಲಗಿಸಿ ಗಂಟಲಿಗೆ ನೀರು ಸುರಿದುಕೊಂಡ. ಪ್ಯಾನ್ ಹಾಕಿ ಕುರ್ಚಿಯಲ್ಲಿ ಒರಗಿಕೊಂಡ.

ಎಚ್ಚರ ಆದಾಗ ಮದ್ಯಾಹ್ನವಾಗಿತ್ತು. ’ಎನೋ ಕುಂಭಕರ್ಣ, ಬೇಗ ಎದ್ದು ರೆಡಿಯಾಗು. ಸಂಜೆ ಮರವಂತೆಗೆ ಹೋಗ್ಬೇಕು’ ಎಂದಳು ರಾಧಿಕ. ರಾಜೀವನಿಗೆ ಆಶ್ಚರ್ಯವಯ್ತು; ಸ್ವಲ್ಪ ಹೊತ್ತಿನ ಹಿಂದಿನ ರಾಧಿಕ ಇವಳೆನಾ...?

ಮರವಂತೆಗೆ ಮಂಗಳೂರಿನಿಂದ ಎರಡೂವರೆ ಘಂಟೆಗಳ ಪಯಣ. ದಾರಿಯುದ್ದಕ್ಕೂ ತಮ್ಮ ಕಾಲೇಜು ದಿನಗಳನ್ನು ಆ ಕಾಲದ ಸೇಹಿತರನ್ನು ನೆನಪು ಮಾಡಿಕೊಳ್ಳುತ್ತಿದ್ದರು. ಹಾದಿ ಸವೆದದ್ದೇ ಗೊತ್ತಾಗಲಿಲ್ಲ.

ಸೂರ್ಯ ಮುಳುಗುವ ವೇಳೆಗೆ ಅವರು ಮರವಂತೆ ಬೀಚಿನಲ್ಲಿದ್ದರು. ಕಡಲಂಚಿನಲ್ಲಿ ಮರೆಯಾಗುತ್ತಿದ್ದ ರಕ್ತವರ್ಣದ ದಿನಕರನನ್ನು ಕಣ್ತುಂಬಿಸಿಕೊಂಡರು. ಸೂರ್ಯೋದಯ ಮತ್ತು ಸೂರ್ಯಾಸ್ತಗಳನ್ನು ಏಕಕಾಲದಲ್ಲಿ ನೋಡಬಹುದಾದ ಅಪರೂಪದ ಸ್ಥಳ ಇದು. ತಾವು ಒಂದಷ್ಟು ಜನ ಪ್ರೆಂಡ್ಸ್ ಹುಣ್ಣಿಮೆಯ ರಾತ್ರಿಯಲ್ಲಿ ಇಡೀ ದಿನ ಇಲ್ಲಿ ಕಳೆದ ರಸಘಳಿಗೆಗಳನ್ನು ಅವರು ನೆನಪಿಸಿಕೊಂಡರು.

ಒಂದು ಬದಿಯಲ್ಲಿ ಶಾಂತವಾಗಿ ಹರಿಯುವ ಸೌಪರ್ಣೀಕಾ ನದಿ. ಇನ್ನೊಂದು ಬದಿಯಲ್ಲಿ ಬೊರ್ಗೆರೆಯುತ್ತಿರುವ ಕಡಲು. ಸುತ್ತೆಲ್ಲಾ ಹಾಲು ಚೆಲ್ಲಿದಂತ ಬೆಳದಿಂಗಳು. ಕಡಲ ಕೊರೆತ ತಡೆಯಲು ಹಾಕಿದ ಬಂಡೆಗಲ್ಲುಗಳ ಮೇಲೆ ಕುಳಿತ ಆ ಜೋಡಿ. ಬಹುಶಃ ಅವರು ಶಾಪಗ್ರಸ್ತ ಕಿನ್ನರ ದಂಪತಿಗಳೇ ಇರಬೇಕು!
[ಆರು ವರ್ಷಗಳ ಹಿಂದೆ ಕಥೆ ಬರೆಯುವ ಪ್ರಯತ್ನದಲ್ಲಿ ಮೂಡಿ ಬಂದ ಬರಹ ಇದು. ]

Monday, December 1, 2008

”ರಾಜಕಾರಣಿಗಳೇ ನೀವೀಗ ಅಸ್ಪ್ರ್ರಶ್ಯರು”




’ನಮ್ಮ ಮನೆಗೆ ರಾಜಕಾರಣಿಗಳು ಬರುವ ಅಗತ್ಯ ಇಲ್ಲ. ನಿಮ್ಮ ಸಾಂತ್ವನ ನಮಗೆ ಬೇಕಿಲ್ಲ. ಹಾಗೇನಾದ್ರು ಬಂದ್ರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’

ಹೀಗೆಂದು ಗುಡುಗಿದವರು ಉನ್ನಿಕೃಷ್ಣನ್. ಉನ್ನಿಕೃಷ್ಣನ್, ಮೊನ್ನೆ ಮುಂಬಯಿಯಲ್ಲಿ ನಡೆದ ಉಗ್ರಗಾಮಿ ವಿರುದ್ಧದ ಹೋರಾಟದಲ್ಲಿ ವೀರ ಮರಣವನಪ್ಪಿದ ಎನ್.ಎಸ್.ಜಿ ಪಡೆಯ ಮೇಜರ್ ಸಂದಿಪ್ ತಂದೆ.

ಕೇರಳದ ಮುಖ್ಯಮಂತ್ರಿ ಅಚ್ಯುತಾನಂದ ಮತ್ತು ಗೃಹ ಸಚಿವರಾದ ಕೋಡಿಹಾಳ್ ಬಾಲಕೃಷ್ಣ ಅವರು ನಿನ್ನೆ ಅಂದರೆ ಭಾನುವಾರದಂದು ಉನ್ನಿಕೃಷ್ಣ ಮನೆಗೆ ಬಂದಿದ್ದರು. ಇದು ಅವರಿಗೆ ಇಷ್ಟವಿರಲಿಲ್ಲ.

ಸಂದೀಪ್ ಉಗ್ರರೊಡನೆ ಸೆಣಸಾಡುತ್ತಾ ಹುತಾತ್ಮರಾದರು ಎಂದು ಗೊತ್ತಾದೊಡನೆ ಮಾದ್ಯಮದವರು ಸಹಜವಾಗಿಯೇ ಬೆಂಗಳೂರ್‍ಇನ ಇಸ್ರೋಲೇಔಟ್ ನಲ್ಲಿರುವ ಅವರ ನಿವಾಸಕ್ಕೆ ತೆರಳಿ ತಂದೆ ಉನ್ನಿಕೃಷ್ಣ ನಾಯರ್ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದಾರೆ. ಅವರ ಮುಂದೆ ಮೈಕ್ ಹಿಡಿದಿದ್ದಾರೆ. ಅಂಥ ನೋವಿನ ಸಂದರ್ಭದಲ್ಲೂ ಆ ತಂದೆ ಹೇಳಿದ್ದೇನು ಗೊತ್ತೆ? ” ನನ್ನ ಮಗ ದೇಶಕ್ಕೆ ತನ್ನ ಕೈಲಾದ ಸೇವೆಯನ್ನಷ್ಟೇ ಮಾಡಿದ. ಆ ಬಗ್ಗೆ ನನಗೆ ಹಿಮ್ಮೆಯಿದೆ, ಇದನ್ನು ಮಾರ್ಕೆಟೈಸ್ ಮಾಡುವುದು ನನಗಿಷ್ಟವಿಲ್ಲ”. ಎಂದು ಅಚ್ಚಕನ್ನಡದಲ್ಲಿ ಹೇಳಿದರು, ವೀರಯೋದನ ಸ್ವಾಭಿಮಾನಿ ತಂದೆ.

ಕೇರಳದ ಮುಖ್ಯಮಂತ್ರಿ ಕರ್ನಾಟಕಕ್ಕೆ ಬಂದು ಯಾಕೆ ಸಾಂತ್ವನ ಹೇಳಬೇಕಾಗಿತ್ತು?

ಉನ್ನಿಕೃಷ್ಣನ್ ಕೇರಳದ ಕಲ್ಲಿಕೋಟೆ ಮೂಲದವರು. ಬೆಂಗಳೂರಿನ ಇಸ್ರೋದಲ್ಲಿ ಉದ್ಯೋಗಿಯಾಗಿದ್ದವರು. ಸಂದಿಪ್ ಮರಣ ಸಂಭವಿಸಿದಾಗ ಅವರ ಕುಟುಂಬಕ್ಕೆ ಕೇರಳ ಮುಖ್ಯಮಂತ್ರಿ ಸಾಂತ್ವನ ಹೇಳಲಿಲ್ಲ ಎಂಬ ಆಕ್ಷೇಪ ಕೇರಳದಲ್ಲಿ ವ್ಯಕ್ತವಾಗಿತ್ತು. ಅದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಚ್ಯುತಾನಂದನ್ ಉನ್ನಿಕೃಷ್ಣನ್ ಕುಟುಂಬಕ್ಕೆ ಸಂತಾಪಸೂಚಕ ಸಂದೇಶವೊಂದನ್ನು ಕಳುಹಿಸಿದ್ದರು. ಆ ಸಂದೇಶದಲ್ಲಿ ಸಂದಿಪನ ಹೆಸರು ತಪ್ಪಾಗಿ ಮುದ್ರಿತವಾಗಿತ್ತು.

ರಾಜಕಾರಣಿಗಳಿಗೆ ಎಲ್ಲವೂ ಯಾಂತ್ರಿಕ ಮತ್ತು ರಾಜಕೀಯ ಪ್ರೇರಿತ

ಮೊನ್ನೆಯ ಮುಂಬೈ ದುರ್ಘಟನೆಗೆ ಮಹಾರಾಸ್ಟ್ರದ ಗೃಹಸಚಿವರಾದ ಅರ್ ಅರ್ ಪಾಟೀಲ್ ನೀಡಿದ ಹೇಳಿಕೆಯನ್ನೇ ನೋಡಿ; ’ಮಹಾನಗರದಲ್ಲಿ ಇಂಥ ಸಣ್ಣ ಪುಟ್ಟ ಘಟನೆಗಳು ನಡೆಯುವುದು ಸಾಮಾನ್ಯ’ ಇಂದು ಈ ಸಾಮಾನ್ಯ ಘಟನೆ ಅವರ ಉಪಮುಖ್ಯ ಮಂತ್ರಿ ಮತ್ತು ಗೃಹಮಂತ್ರಿ ಗಾದಿಗಳನ್ನು ಕಿತ್ತುಕೊಂಡಿದೆ.

ಇನ್ನೊಬ್ಬರಿದ್ದಾರೆ ಗುಜರಾತಿನ ಮುಖ್ಯಮಂತ್ರಿ, ನರೇಂದ್ರ ಮೋದಿ. ಕಮಾಂಡೋಗಳುಗಳು ಉಗ್ರಗಾಮಿಗಳ ವಿರುದ್ದ ಸೆಣಸಾಟ ನಡೆಸುತ್ತಿರುವ ಸ್ಥಳಕ್ಕೆ ಬಂದ ಮೊದಲ ರಾಜಕಾರಣಿ. ಇದೇನೋ ಮೆಚ್ಚತಕ್ಕ ಅಂಶ. ಬಂದವರು ನಮ್ಮ ವೀರ ಯೋದರಿಗೆ ಸ್ಫೂರ್ತಿಯ ಎರಡು ಮಾತಾಡಿ ನೈತಿಕ ಬೆಂಬಲವಿತ್ತು ತೆರಳಬಹುದಾಗಿತ್ತು ಅಲ್ಲೂರಾಜಕೀಯ ತುರುಕಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸರಾವ್ ದೇಶ್ ಮುಖ್ ಘಟನಾ ಸ್ಥಳಕ್ಕೆ ಭೇಟಿ ನೀಡದ್ದಕ್ಕೆ ಆಕ್ಷೇಪಿಸಿದರು. ಮತ್ತೂ ಮುಂದುವರಿದು ಕರ್ಕೆರ ಕುಟುಂಬಕ್ಕೆ ೧ ಕೋಟಿ ರೂಪಾಯಿ ಪರಿಹಾರವನ್ನು ಘೋಶಿಸಿಬಿಟ್ಟರು ಆ ದಾನಶೂರ ಕರ್ಣ!. ನಾಚಿಕೆಯಾಗಬೇಕು ರಾಜಕಾರಣಿಗಳಿಗೆ. ಬಸಿದ ಬಿಸಿ ನೆತ್ತರು ಆರುವ ಮೋದಲೇ ಅದಕ್ಕೆ ಬೆಲೆ ಕಟ್ಟುವ ಅಮಾನವಿಯತೆಗೆ ನಮ್ಮದೊಂದು ಧಿಕ್ಕಾರ.

ಒಂದು ಕೋಟಿ ರೂಪಾಯಿ ಸರಕಾರಿ ನೌಕರನೊಬ್ಬನ ಕುಟುಂಬಕ್ಕೆ ಬಹು ದೊಡ್ಡ ಮೊತ್ತ. ಅದರೂ ಅದನ್ನು ಕರ್ಕೆರ ಪತ್ನಿ ತಿರಸ್ಕರಿಸಿದರು. ಈದೇಶದಲ್ಲಿ ಇನ್ನೂ ದೇಶ ಪ್ರೇಮ, ಸ್ವಾಬಿಮಾನ ಎಂಬುದು ಇಂತವರಿಂದಲೇ ಉಳಿದಿದೆ.

ಇನ್ನು, ಮಹಾರಾಷ್ಟ್ರದ ಮುಖ್ಯಮಂತ್ರಿ ವಿಲಾಸರಾವ್ ದೇಶ್ ಮುಖ್ ನಿಜವಾದ ಅರ್ಥದಲ್ಲಿ ವಿಲಾಸಿಯೇ!. ಬುದವಾರ ರಾತ್ರಿಯಿಂದಲೇ ಉಗ್ರಗಾಮಿಗಳು ತಮ್ಮ ಪೈಶಾಚಿಕ ಕೃತ್ಯ ತೋರಿಸುತ್ತಿದ್ದಾರೆ. ಮನೆಯಲ್ಲಿ ಬೆಚ್ಚಗೆ ಕುಳಿತಿದ್ದ ದೇಶ್ ಮುಖ್, ಎಲ್ಲವೂ ಮುಗಿದ ಮೇಲೆ ಭಾನುವಾರದಂದು ತಮ್ಮ ಪಡೆಯೊಂದಿಗೆ ತಾಜ್ ಹೋಟೇಲ್ ಗೆ ಆಗಮಿಸಿದ್ದಾರೆ. ”ಊರು ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ”

ದೇಶ್ ಮುಖ್ ಪಡೆಯಲಿದ್ದ ಪ್ರಮುಖರು ಯಾರು ಗೊತ್ತೆ? ಅವರ ಪುತ್ರನಾಗಿರುವ ಬಾಲಿವುಡ್ ನಟ ರಿತೇಶ್ ದೇಶ್ ಮುಖ್ ಮತ್ತು ನಿರ್ದೇಶಕ ರಾಮ್ ಗೋಪಾಲ್ ವರ್ಮ. ಅಂದರೆ ದೇಶ್ ಮುಖ್ ತಲೆಯಲ್ಲಿ ಸುಳಿಯುತ್ತಿದ್ದುದೇನು?. ಮುಂಬೈ ಘಟನೆ ಸಿನಿಮಾಕ್ಕೊಂದು ಪ್ಲಾಟ್. ಎಲ್ಲಿಗೆ ಬಂದು ನಿಂತಿದ್ದಾರೆ, ನಮ್ಮ ರಾಜಕಾರಣಿಗಳು. ಧಿಕ್ಕಾರವಿರಲಿ ಅವರ ಬಾಳಿಗೆ.

ಕೇಂದ್ರ ಗೃಹಮಂತ್ರಿ ಶಿವರಾಜ್ ಪಾಟೀಲ್, ಮಹಾರಾಷ್ಟ್ರ ಗೃಹಮಂತ್ರಿ ಅರ್.ಅರ್. ಪಾಟೀಲ್ ತಲೆ ದಂಡ ಆಗಿ ಹೋಗಿದೆ. ಕೆಲವೇ ಘಂಟೆಗಳಲ್ಲಿ ದೇಶ್ ಮುಖ್ ಗಾದಿಯೂ ಉರುಳಲಿದೆ. ಅಂತೂ ಕಾಂಗ್ರೇಸ್ ಎಚ್ಚೆತ್ತುಕೊಳ್ಳುತ್ತಲಿದೆ.

ಇವತ್ತು ಕರ್ನಾಟಕದ ಕಾಂಗ್ರೇಸಿನ ಕಾರ್ಯಕಾರಿ ಸಮಿತಿಯ ಸಭೆ ನಡೆದಿತ್ತು. ಅದರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ತಂಡದ ಮುಖ್ಯಸ್ಥ ಅಪ್ಝಲ್ ಗುರುವಿನ ಗಲ್ಲು ಶಿಕ್ಷೆಯನ್ನು ತಕ್ಷಣವೇ ಜಾರಿಗೊಳಿಸಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಲಾಗಿದೆ. ಇದು ನಿಜಕ್ಕೂ ಬದಲಾವಣೆಯ ಮುನ್ಸೂಚನೆಯಾಗಿದ್ದರೆ ಚೆನ್ನ. ಆದರೆ ಇದರಲ್ಲೂ ರಾಜಕೀಯ ದುರುದ್ದೇಶಗಳಿದ್ದರೆ..? ಯಾಕೆಂದರೆ ಸಧ್ಯದಲ್ಲೆ ಉಪಚುನಾವಣೆಯಿದೆ ಅದರ ಹಿಂದೆಯೇ ಲೋಕಸಭಾ ಚುನಾವಣೆ ಬರುತ್ತಲಿದೆ.

ಅಂತೂ ಅಫ್ಝಲ್ ಗುರುವನ್ನು ಗಲ್ಲಿಗೇರಿಸುವುದು ಈಗ ಕಾಂಗೇಸ್ಸಿಗೂ ಬೇಕು. ಅದು ಜನರ ಆಕ್ರೋಶವನ್ನು ಬೇರೆಡೆಗೆ ತಿರುಗಿಸಲು ಏನೆಲ್ಲಾ ಕಸರತ್ತು ಮಾಡಬೇಕಾಗಿದೆ. ಬಿಜೆಪಿಗೂ ಮುಸ್ಲಿಂ ಭಯೋತ್ಪಾದಕರಿಗೊಂದು ಛಡಿಯೇಟು ನೀಡಬೇಕಾಗಿದೆ.
ರಾಜಕೀಯ ಪಕ್ಷಗಳು ತಮ್ಮ ಇಚ್ಚಾಶಕ್ತಿಯನ್ನು ಪ್ರದರ್ಶಿಸಲೇಬೇಕಾದ ಕಾಲಘಟ್ಟವಿದು.

ಬೇಕಾದರೆ ಕೋಮುಸೌಹಾರ್ದ ವೇದಿಕೆಯ ಮುಖಂಡರು ತಮ್ಮ ’ಬ್ರದರ್’ನ್ನು ರಕ್ಷಿಸಿಕೊಳ್ಳಲಿ.
ಇನ್ನೊಂದು ಮಾತನ್ನು ಹೇಳಲೇಬೇಕು; ಪೇಜಾವರ ಮಠಾದೀಶರಂತ ಸ್ವಾಮೀಜಿಗಳು ತಮ್ಮ ಮಿತಿಯಲ್ಲಿ ಕೆಲವೊಂದು ಸಮಾಜ ಪರಿವರ್ತನೆಯ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾದೆ. ಅದನ್ಯಾಕೆ ಮುಸ್ಲಿಂ ಧರ್ಮ ಗುರುಗಳು ಮಾಡಬಾರದು? ದೆಹಲಿಯ ಜಾಮ ಮಸೀದಿಯಲ್ಲಿ ಇಂಥ ದಿನ ಚಂದ್ರ ದರ್ಶನವೆಂದರೆ ಅದನ್ನು ಭಾರತದ ಸಮಸ್ತ ಮುಸ್ಲಿಮರೂ ಅನುಸರಿಸುತ್ತಾರೆ. ಧಾರ್ಮಿಕ ಮುಖಂಡರು ಹೊರಡಿಸುವ ’ಪತ್ವಾ’ ವನ್ನು ಎಲ್ಲರೂ ಅನುಕರಿಸುತ್ತಾರೆ. ಭಯೋತ್ಪಾದನೆಯಂತ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೋಡಿರುವ ಯುವಕರನ್ನು ಇವರೇಕೆ ನಿರ್ಭಂದಿಸಬಾರದು?

ಇಸ್ರೇಲಿನಂತ ಪುಟ್ಟ ಸ್ವಾಭಿಮಾನಿ ರಾಷ್ಟ್ರ ನಮ್ಮ ಬದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಜಗತ್ತಿನೆದುರು ಇಷ್ಟು ದೊಡ್ಡ ರಾಷ್ಟ್ರ ಬೆತ್ತಲಾಗಿ ನಿಲ್ಲಬೇಕೆ..?