Monday, February 4, 2013

ಪಾರಿಜಾತದ ಬಿಕ್ಕಳಿಕೆ…




ಮಧ್ಯರಾತ್ರಿ..ನಾನು ಪಾರಿಜಾತದ ಕಂಪಿನಲ್ಲಿದ್ದೆ.
ನನ್ನ ಬೆಡ್ ರೂಮಿನ ಕಿಟಕಿಯತ್ತ ಬಾಗಿದ ಆ ದೇವಲೋಕದ ವೃಕ್ಷದಲ್ಲಿ ಬಿರಿಯುತ್ತಿದ್ದ ದೇವಪುಷ್ಪದ ಸುಂಗಂಧಲ್ಲಿ ಮೈಮರೆತು ನಿದ್ರೆಯಾಳಕ್ಕೆ ಜಾರುತ್ತಲಿದ್ದೆ..
ಆಗ ನನ್ನ ಮೊಬೈಲ್ ಪೋನ್ ರಿಂಗುಣಿಸಿತು…
ಆತ ರಣರಂಗದಲ್ಲಿದ್ದ.. ನನ್ನ ಹೆಸರನ್ನು ಹೇಳುತ್ತಾ ತಡೆ ತಡೆದು ಬಿಕ್ಕಳಿಸುತ್ತಿದ್ದ..
’ಏನಾಯ್ತು?’ ಎನ್ನುತ್ತಲೇ ತಟ್ಟನೆದ್ದು ಕುಳಿತವಳು, ನನ್ನ ಮಾತಿನಿಂದ ಮನೆಯಲ್ಲಿದ್ದವರಿಗೆ ತೊಂದರೆಯಾಗಬಾರದೆಂದು ಟೆರೇಸ್ ಮೇಲೆ ಹೋದೆ. ಪಾರಿಜಾತದ ಗೆಲ್ಲಿನ ನೆರಳಲ್ಲಿ ಹಾಕಿದ ಕುರ್ಚಿಯಲ್ಲಿ ದೊಪ್ಪನೆ ಕುಳಿತೆ..ಅಲ್ಲಿಗೆ ಬರುವ ತನಕ ’ಹೆದರಬೇಡಿ ನಾನಿದ್ದೇನೆ’ ಎಂದು ಸಮಾಧಾನಿಸುತ್ತಲೇ ಬಂದಿದ್ದೆ.
ಅಂದೇ ಮೊದಲ ಬಾರಿ ಗಂಡಸೊಬ್ಬ..ಅದರಲ್ಲೂ ಬಹಳಷ್ಟು ಜೀವನವನ್ನು ಕಂಡಿದ್ದ, ಮಧ್ಯವಯಸ್ಸನ್ನು ಸಮೀಸುತ್ತಿರುವ ವ್ಯಕ್ತಿಯೊಬ್ಬ ಮಗುವಿನಂತೆ,ಅಸಹಾಯಕನಾಗಿ ಅತ್ತದ್ದನ್ನು ನಾನು ನನ್ನ ಕಿವಿಯಾರೆ ಕೇಳುತ್ತಲಿದ್ದೆ..

ಆತ ನಡುಗಿ, ಜರ್ಜರಿತನಾಗುವುದಕ್ಕೆ ಕಾರಣವಿತ್ತು..ಆತನ ಸಹೋದ್ಯೋಗಿಯಾಗಿದ್ದ, ಆತನ ಜೀವದ ಗೆಳೆಯ ಅವನ ಕಣ್ಣೆದುರಿನಲ್ಲೇ ಬಾಂಬ್ ಸ್ಪೋಟದಿಂದಾಗಿ ಛೀದ್ರ ಛೀದ್ರವಾಗಿ ಸತ್ತು ಬಿದ್ದಿದ್ದ. ನನ್ನನ್ನೂ ಸೇರಿದಂತೆ ಜಗತ್ತಿನಾದ್ಯಂತ ಬಹಳಷ್ಟು ಜನರು ಆ ಸುದ್ದಿಯನ್ನು ಟೆಲಿವಿಶನ್ ನಲ್ಲಿ ವೀಕ್ಷಿಸಿದ್ದರು..…ಆ ಕ್ಷಣದಲ್ಲಿ ಆತನಿಗೆ ನನ್ನ ನೆನಪಾಗಿದೆ..ಪೋನ್ ಮಾಡಿದ್ದಾನೆ..ಅದು ಅಂತರಾಷ್ಟ್ರೀಯ ಕರೆ..ಆದರೂ ಒಂದು ಘಂಟೆಗೂ ಮಿಗಿಲಾಗಿ ಆತ ನನ್ನೊಡನೆ ಮಾತಾಡಿದ..ಆತ ರಣರಂಗದ ಮಾತಾಡುತ್ತಲಿದ್ದರೆ..ನಾನು ಪಾರಿಜಾತದ ಕಂಪಿನೊಡನೆ ಅಲೌಕಿಕತೆಯ ಗಂಧವನ್ನು ಬೆರೆಸಿ ಅವನಿಗೆ ರವಾನಿಸುತ್ತಿದ್ದೆ…

ನಿಮಗೀಗ ಅನ್ನಿಸಬಹುದು..ಆತ ನಿಮ್ಮ ಆತ್ಮೀಯ ಗೆಳೆಯನಾಗಿರಬೇಕೆಂದು. ಖಂಡಿತಾ ಅಲ್ಲ. ಅದೊಂದು ಪೇಸ್ ಬುಕ್ ಗೆಳೆತನ ಅಷ್ಟೇ.. ಅದನ್ನೇ ಆತ ಮಾತಿನ ಮಧ್ಯೆ ಹೇಳಿದ..’ಇಷ್ಟೊಂದು ಗೆಳೆಯ-ಗೆಳತಿಯರಿದ್ದಾರೆ ನನಗೆ.. ಆದರೆ ಈ ಹೊತ್ತಿನಲ್ಲಿ ನನಗೆ ನೀವು ಮಾತ್ರ ಯಾಕೆ ನೆನಪಾದಿರೋ ಗೊತ್ತಿಲ್ಲ’
ಹೌದು…ಆತ ನನಗೆ ಪೇಸ್ ಬುಕ್ ನಲ್ಲಿ ಪರಿಚಿತನಾದವನು..ಯಾವುದೋ ಒಂದು ಮಾಹಿತಿಗಾಗಿ ನನ್ನ ಪತಿಯ ಸಲಹೆಯಂತೆ ನಾನವನನ್ನು ಸಂಪರ್ಕಿಸಿದ್ದೆ. ಹಾಗಾಗಿ ಆತನ ಬಳಿ ನನ್ನ ದೂರವಾಣಿ ನಂಬರ್ ಇತ್ತು..ಮುಂದೆ ಅದು ಒಂದು ಸೌಹಾರ್ಧ ಗೆಳೆತನವಾಗಿ ಮುಂದುವರಿದಿತ್ತು…ಆದರೆ ನಡುವೆ ಒಂದು ಚಿಕ್ಕ ತಪ್ಪು ತಿಳುವಳಿಕೆಯಿಂದಾಗಿ ನಮ್ಮಿಬ್ಬರ ನಡುವಿನ ಸಂಪರ್ಕ ಕೊಂಡಿಗೆ ತುಕ್ಕು ಹಿಡಿದಿತ್ತು..ನಾನವನನ್ನು ಪೇಸ್ ಬುಕ್ ನಲ್ಲಿ ಅನ್ಪ್ರೆಂಡ್ ಮಾಡಿದ್ದೆ.

ಹೀಗಿರುವಾಗಲೇ ಆ ಪೋನ್..ಅದೂ ಮಧ್ಯರಾತ್ರಿಯಲ್ಲಿ ಬಂದಿತ್ತು.
 
ಅಂದು ಹುಣ್ಣಿಮೆಯಾಗಿರಬೇಕು. ಸುತ್ತ ಬೆಳದಿಂಗಳು ಚೆಲ್ಲಿತ್ತು. ಆ ಹಾಲ್ಬೆಳಕಲ್ಲಿ ಮಾಯಾನಗರಿ ಬೆಂಗಳುರು ಹೇಗೆ ನಿಶಬ್ದವಾಗಿ ಮಲಗಿ ನಿಟ್ಟುಸಿರು ಬಿಡುತ್ತಿದೆಯೆಂದು ನಾನವನಿಗೆ ವಿವರಿಸುತ್ತಾ, ತಲೆಯೆತ್ತಿ ಆಕಾಶವನ್ನು ನೋಡುವಂತೆ ಹೇಳಿದೆ. ಆ ಚಂದಿರನ್ನು ನೋಡು..ಅಲ್ಲಿ ನಿನ್ನ ಗೆಳೆಯನಿರಬಹುದು..ಅವನು ಅಲ್ಲಿಂದ ನಿನ್ನನ್ನು ನೋಡುತ್ತಿರಬಹುದು..ನಾನು  ನಿನ್ನ ಮಾತುಗಳಿಂದ ಅವನನ್ನು ಅಲ್ಲಿ ಕಾಣುತ್ತಿದ್ದೇನೆ. ಜಗತ್ತಿಗೆ ತಂಪನ್ನು ತರಲು ಅವನು ಚಂದಿರನಲ್ಲಿ ಸೇರಿ ಹೋಗಿದ್ದಾನೆ…ನಾವಿಬ್ಬರೂ ಏಕಕಾಲದಲ್ಲಿ ಅವನನ್ನು ನೋಡುತ್ತಲಿದ್ದರೆ ಅವನು ನಗದೆ ಇರಲು ಸಾಧ್ಯವೇ?’...

ನಾನು ಅವನೊಡನೆ ಮಾತಾಡುತ್ತಲೇ ಹೋದೆ..ಅವನು ಚಿಕ್ಕ ಮಗುವಿನಂತೆ ಕೇಳುತ್ತಲೇ ಹೋದ.
ಅವನು ಸಹಜಸ್ಥಿತಿಗೆ ಬರುವುದು ನನ್ನ ಅರಿವಿಗೆ ಬರುತ್ತಿತ್ತು. ಹಾಗಾಗಿ ಅವನಿಂದ ಕಳಚಿಕೊಳ್ಳುವುದರ ಬಗ್ಗೆ ಆಲೋಚಿಸುತ್ತಲೇ ಮತ್ತಷ್ಟು ಮಾತು ಮುಂದುವರಿಸುತ್ತಾ ಹೇಳಿದೆ ”ಎರಡು ಪೆಗ್ ವಿಸ್ಕಿ ಕುಡಿದು ಚಂದಿರನ ಜೊತೆ ಸೇರಿರುವ ನಿನ್ನ ಗೆಳೆಯನನ್ನು ನೆನೆಯುತ್ತಾ ಮಲಗು. ನಾಳೆ ಬೆಳಿಗ್ಗೆ ಏಳುವಾಗ ನೀನು ಹೊಸ ಮನುಷ್ಯರಾಗಿರುತ್ತಿ’ ಎಂದು ಅಮ್ಮನಂತೆ ರಮಿಸಿ ನಾನು ಪೋನ್ ದಿಸ್ಕನೆಕ್ಟ್ ಮಾಡಿದೆ.
ನನ್ನನ್ನು ಅತ್ಯಂತ ಕೀಳಾಗಿ ಕಂಡ ಈ ವ್ಯಕ್ತಿಯೊಡನೆ ಇಂತಹ ಅಪರಾತ್ರಿಯಲ್ಲಿ ನಾನು ಯಾಕಾಗಿ ಇಷ್ಟೊಂದು ಮಾರ್ಧವತೆಯಿಂದ ನಡೆದುಕೊಂಡೆ? ಎಂದು ನನ್ನ ಬಗ್ಗೆ ನಾನೇ ಅಚ್ಚರಿಗೊಳ್ಳುತ್ತಾ, ಪಾರಿಜಾತದ ಒಂದೆರಡು ಹೂಗಳನ್ನು ಬಿಡಿಸಿಕೊಂಡು, ಬೊಗಸೆಯಲ್ಲಿ ಹಿಡಿದು ಅದನ್ನು ಅಘ್ರಾಣಿಸುತ್ತಾ ಮೆಟ್ಟಲಿಳಿದು ಮನೆಗೆ ಬಂದೆ.  ರಾತ್ರಿ ಓದಿ ಮಡಚಿಟ್ಟ ಪುಸ್ತಕದ ಮೇಲೆ ಹೂಗಳನ್ನಿಟ್ಟೆ. ಹಾಸಿಗೆಯ ಮೇಲೆ ಒಂದೆರಡು ನಿಮಿಷ ವಜ್ರಾಸನದಲ್ಲಿ ಕಣ್ಮುಚ್ಚಿ ಕುಳಿತೆ. ಆಮೇಲೆ ಸಮಾಧಾನ ಚಿತ್ತದಿಂದ ಮಲಗಿಕೊಂಡೆ.

ಬೆಳಗ್ಗಿನ ಜಾವವಿರಬೇಕು. ಎಚ್ಚರವೂ ಅಲ್ಲದ ಕನಸೂ ಅಲ್ಲದ ಸ್ಥಿತಿ. ನನ್ನ ಕೆನ್ನೆಯ ಮೇಲೆ ಸುಕೋಮಲ ಸ್ಪರ್ಶ. ’ನನ್ನ ಮೇಲೆ ನಿನಗೇಕೆ ಇಷ್ಟು ಮೋಹ’ ಕಿವಿಯ ಬಳಿ ಉಲಿದ ಪಿಸುನುಡಿ. ನಾನು ಗಲಿಬಿಲಿಗೊಳ್ಳುತ್ತಿರುವಾಗಲೇ..ಮತ್ತೆ ಅದೇ ಇನಿದನಿ...
 ’ನೀನು ಯಾಕೆ ನನ್ನ ಹಾಗೆ ಆದೆ?
ನಿನ್ನ ಹಾಗೆಯೇ...ಹಾಗೆಂದರೇನು?
ಲಜ್ಜಾಭರಣೆ..!.ನಿನ್ನ ಹಾಗೆ ನನಗೂ ಒಂದು ಕಥೆಯಿದೆ..ಹೇಳಲೇ?
ಕಥೆಯೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಚಕ್ಕಳ-ಪಕ್ಕಳ ಕೂತು ಗಲ್ಲಕ್ಕೆ ಕೈನೆಟ್ಟೆ.
ನಾನೊಬ್ಬಳು ರಾಜಕುಮಾರಿಯಾಗಿದ್ದೆ. ದಿನಾ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಶಸ್ತ್ರಾಭ್ಯಾಸ ಮಾಡುತ್ತಿದ್ದೆ..ಪ್ರತಿಧಿನ ಸೂರ್ಯ ನಮಸ್ಕಾರ ಮಾಡುತ್ತಿದ್ದಾಗ ಅವನನ್ನು ನೋಡುತ್ತಿದ್ದೆ..ಕೆಂಪನೆಯ ಕೆಂಡದುಂಡೆಯಂತಿದ್ದ ಆತ ಬರಬರುತ್ತಾ ಹೊಂಬಣ್ಣದ ರೂಪ ಪಡೆಯುತ್ತದ್ದ; ನನ್ನ ಯೌವನಂತೆಯೇ! ನನ್ನ ಹೆಣ್ತನ ಅರಳುವುದನ್ನು ನೋಡುತ್ತಲೇ ಅವನೂ ಬಣ್ಣಗಾರನಾಗುತ್ತಿದ್ದ. ಅವನು ನನ್ನ ಮೋಹಿಸಿದ. ನಾನವನನ್ನು ಅಚ್ಚರಿಯಿಂದ ನೋಡುತ್ತಿದ್ದೆ. ಪ್ರತಿದಿನ ಸೂರ್ಯ ನಮಸ್ಕಾರಕ್ಕಾಗಿ ಕೈಯೆತ್ತಿದಾಗಲೆಲ್ಲ ಅವನು ನನ್ನ ಬೆರಳುಗಳನ್ನು ಹಿಡಿದೇ ನನ್ನೊಳಗೆ ಇಳಿಯುತ್ತಿದ್ದ.ನಾನವನನ್ನು ಪ್ರೀತಿಸಿಬಿಟ್ಟೆ. ಮುಂಜಾನೆಯಲ್ಲಿ ಪ್ರತಿದಿನ ಅವನೊಡನೆ ಅವನ ಪ್ರಿಯ ಮಡದಿ ಉಷೆಯಿರುತ್ತಿದ್ದಳು ಆದರೂ ಆತ ಜಾರತನದಲ್ಲಿ ನನ್ನೆಡೆಗೆ ಬಾಗಿದ..ನಾವು ಭೂಮ್ಯಾಕಾಶಗಳಲ್ಲಿ ಒಂದಾಗಿ ಬೆರೆಯುತ್ತಿದ್ದೆವು.

ಆದರೆ ಒಂದು ದಿನ ಅವನು ನನ್ನ ನನ್ನ ಬೆರಳುಗಳಿಗೆ ತನ್ನ ಬೆರಳನ್ನು ಜೋಡಿಸಲಿಲ್ಲ. ಮರುದಿನವೂ ಇಲ್ಲ..ಮತ್ತೆಂದೂ ಬರಲಿಲ್ಲ. ನಾನು ಕಾದೇ ಕಾದೆ..ಸೊರಗಿದೆ.. ಕೈಚಾಚಿದರೆ ಅವನು ನನಗೆಟುಕದಷ್ಟುಎತ್ತರದಲ್ಲಿದ್ದ. ಅವನಿಲ್ಲದೆ ನನ್ನೊಳಗೆ ಬೆಳಕಿರಲಿಲ್ಲ. ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಶಸ್ತ್ರಾಭ್ಯಾಸ ಮಾಡುವ ನನ್ನೊಳಗಿನ ರಾಜಕುಮಾರಿ ಕಳೆದುಹೋಗಿದ್ದಳು.ಅದು ಗೊತ್ತಾದ ಒಡನೆ ನನಗೆ ಬದುಕುವುದರಲ್ಲಿ ಅರ್ಥವಿಲ್ಲವೆನಿಸಿತು. ಜಗತ್ತನ್ನೆಲ್ಲಾ ಆ ಸೂರ್ಯದೇವ ಬೆಳಗುತ್ತಾನೆಂದು ನೀವೆಲ್ಲಾ ಅನ್ನುತ್ತೀರಿ. ಆತ ಬೆಳಕಿನೊಡೆಯನಂತೆ. ಆದರೆ ನನ್ನೊಳಗಿನ ಬೆಳಕನ್ನು ಅವನ್ಯಾಕೆ ಕಿತ್ತುಕೊಂಡ? ’ಸಾವಿರಾರು ಕರ ಚಾಚಿ ಕಮಲೆಯರ ಕಣ್ಣ ನೀರ ಒರೆಸುವವನು ಎಂದೆಲ್ಲ ಅನ್ನುತ್ತೀರಿ..ನನ್ನ ಕಣ್ಣೀರು ಅವನಿಗೆ ಕಾಣದಾಯಿತೆ?

 ಮತ್ತೆ ಬದುಕಬೇಕೆನಿಸಲಿಲ್ಲ. ಕಠಾರಿಯಿಂದ ಇರಿದುಕೊಂಡು ಸತ್ತು ಹೋದೆ. ದೇಹವನ್ನು ನಾಶಪಡಿಸಿಕೊಂಡರೇನು ಆತ್ಮ ಅವಿನಾಶಿನಿಯಲ್ಲವೇ? ನನ್ನನ್ನು ಸುಟ್ಟ ಬೂದಿಯೇ ಬೀಜವಾಗಿ ರೂಪುವಡೆದು ಸಸಿಯಾಗಿ ಭೂಮಿಯನ್ನು ಸೀಳಿ ನಿಂತೆ. ಹೂವಾಗಿ ಅರಳಿದೆ. ಯಾರಾದರೂ ಮುಟ್ಟಿದರೆ ಬಾಡಿ ಹೋಗುವ ಭಯ. ಅದಕ್ಕಾಗಿ ಸುತ್ತ ಒರಟು ಎಲೆಯನ್ನು ಹೊದ್ದೆ.  ಅದರ ಆಕಾರವನ್ನು ನೋಡಿದೆಯಾ?.  ಅದು ನನದೇ ಹ್ರುದಯ. ಪೂರ್ವ ಜನ್ಮದ ಸೆಳೆತ. ದೇಹ ನಶ್ವರವಾದರೂ ಪ್ರೀತಿ ಅವಿನಾಶಿಯಲ್ಲವೇ? . ನನ್ನನ್ನು ದೂರದಲ್ಲಿ ನಿಂತು ಜನರು ನೋಡಿ ಆನಂದಿಸಲಿ. ನಾನೆಂದೂ ಅವನನ್ನು ತಲೆಯೆತ್ತಿ ನೋಡಲಾರೆ. ನಾನು ಕತ್ತಲಲ್ಲಿಯೇ ಅರಳುತ್ತೇನೆ. ನೊಂದ ಮನಸ್ಸುಗಳಿಗೆ ತಂಪನ್ನಿಯುತ್ತೇನೆ; ಕಂಪನ್ನು ತುಂಬುತ್ತೇನೆ. ತೊರೆದು ಹೋದವರಿಗಾಗಿ ದುಃಖಿಸುವುದರಲ್ಲಿ ಅರ್ಥವಿಲ್ಲ. ಅವರು ಆಕಾಶದಲ್ಲೇ ಇರಲಿ..ನಾವು ಭೂಮಿಯಲ್ಲೇ ಇರೋಣ..ಅಲ್ಲವೇ ನನ್ನ ಪ್ರಿಯ ಸಖಿ...?


ಇಷ್ಟನ್ನು ಹೇಳಿದವಳೇ...ತನ್ನ ಹವಳದ ಬೆರಳುಗಳಿಂದ ನನ್ನ ಗಲ್ಲವನ್ನು ಹಿಡಿದೆತ್ತಿ ನನ್ನ ಕಣ್ಣುಗಳನ್ನೆ ದಿಟ್ಟಿಸುತ್ತಾ..’ನನ್ನ ಹಾಗೆ ನೀನಾಗಬೇಡ.. ದಿನಾ ನನ್ನನ್ನು ಬೊಗಸೆಯಲ್ಲಿ ತುಂಬಿಕೊಂಡು ನಿನ್ನ ಮನೆಯೊಳಗೆ ಬರಮಾಡಿಕೊಳ್ಳುತ್ತಿಯಲ್ಲಾ... ಆಗ ನಿನ್ನ ನಿಟ್ಟುಸಿರ ಬೇಗೆಗೆ ನಾನು ಬಾಡಿ ಹೋಗುತ್ತೇನೆ. ಅದಕ್ಕೆ ಕಾರಣ ನನಗೆ ಗೊತ್ತು..ನನ್ನವನು ನನಗೆ ಕೈಗೆಟುಕದಷ್ಟು ದೂರದಲ್ಲಿದ್ದ. ಆದರೆ ನಿನಗಾಗಿ ಹಂಬಲಿಸುವವನು ಇಲ್ಲೇ ಹತ್ತಿರದಲ್ಲಿದ್ದಾನೆ..ನಾನು ನಿನ್ನ ಅಂತರಂಗದ ಗೆಳತಿಯಲ್ಲವೇ? ನನಗಾಗಿಯಾದರೂ
ಇವತ್ತಿನ ಒಂದು ದಿನದ ಮಟ್ಟಿಗೆ ನೀ ಅಭಿಸಾರಿಕೆಯಾಗು. ನಿನ್ನ ಜೊತೆಗೆ ನಾನಿರುತ್ತೇನೆ..ಅವನೆದುರಲ್ಲಿ ನೀನೇನೂ ಮಾತೇ ಆಡಬೇಕಿಲ್ಲ. ಅವನ ಕೈಗೆ ನನ್ನನ್ನು ಹಸ್ತಾಂತರಿಸು..ಮತ್ತೆ ಬರುವುದೆಲ್ಲಾ ಮೇಘಸಂದೇಶವೇ...ನೀನು ಕಾಣುವುದೆಲ್ಲಾ ಯಕ್ಷ-ಕಿನ್ನರ ಲೋಕವೇ...!’

ಹಾಗೇ ಹೇಳುತ್ತಲೇ ಆ ದ್ವನಿ ಬಣ್ಣ-ಬಣ್ಣಗಳ ಸುಂದರವಾದ ಬೆಳಕಿನ ರೇಖೆಗಳಾಗಿ, ನೋಡ ನೋಡುತ್ತಲೇ ಬಣ್ಣದ ಗೋಲವಾಗಿ. ನನ್ನನ್ನು ನುಂಗಲೋ ಎಂಬಂತೆ ನನ್ನತ್ತ ಶರವೇಗದಲ್ಲಿ ಬರತೊಡಗಿತು. ನಾನು ಜೋರಾಗಿ ಕಿರುಚಿ, ದಡಕ್ಕನೆ ಎದ್ದು ಕುಳಿತೆ. ಕೆನ್ನೆ ಮುಟ್ಟಿ ನೋಡಿಕೊಂಡೆ. ಒದ್ದೆಯಾಗಿತ್ತು. ಅಚ್ಚರಿಗೊಳ್ಳುತ್ತಾ ಪುಸ್ತಕದತ್ತ ನೋಡಿದೆ. ಪಾರಿಜಾತದ ಹೂಗಳು ನಗುತ್ತಿದ್ದವು. ಎದುರಿಗಿದ್ದ ಕನ್ನಡಿಯತ್ತ ದಿಟ್ಟಿ ಹಾಯಿಸಿದೆ.. ಪಾರಿಜಾತದ ಕಂಪಿನಲ್ಲಿ ನನ್ನ ಬಿಂಬ ಮಸುಕು ಮಸುಕಾಗಿ ಕಂಡಿತು.

[ 'ಪದ ಪಾರಿಜಾತ’ದಲ್ಲಿ ಪ್ರಕಟವಾದ ಕಥೆ ]
.

Tuesday, January 29, 2013

’ಯಾಕೆ ನನ್ನನ್ನು ತಿರಸ್ಕರಿಸಿದೆ?’

ಚಿತ್ರಕೃಪೆ; ಅಂತರ್ಜಾಲ.
ಅದೊಂದು ಸರ್ಕಾರಿ ಬಂಗಲೆ. ಅವನೊಬ್ಬನೇ ಇದ್ದಾನೆ. ಅವನ ಹೆಂಡತಿ ಮಕ್ಕಳು ದೂರದ ಊರಿನಲ್ಲಿದ್ದಾರೆ. ರಾತ್ರಿಯ ನೀರವತೆ. ನಗರ ಮೆಲ್ಲ ಮೆಲ್ಲನೆ ಸದ್ದು ಕಳೆದುಕೊಳ್ಳುತ್ತದೆ. ಒಂಟಿತನ ಅವನೊಳಕ್ಕೆ ಇಳಿಯುತ್ತಿದೆ. ಜ್ವರದ ಕಾವು ಇನ್ನೂ ಇದೆ. ಫೋನ್ ಎತ್ತಿಕೊಂಡು ಅವಳೊಡನೆ ಮಾತಾಡುತ್ತಾನೆ. ಇಪ್ಪತ್ತು ವರ್ಷಗಳ ಹಿಂದಿನ ನೆನಪುಗಳಿಗೆ ಮೆಲ್ಲ ಮೆಲ್ಲನೆ ಜಾರುತ್ತಾನೆ. “ಯಾಕೆ ನನ್ನನ್ನು ತಿರಸ್ಕರಿದೆ?” ಎಂದು ಬಿಕ್ಕಳಿಸುತ್ತಾನೆ. ಅವಳಿಗಿಲ್ಲಿ ಮೈಯ್ಯೆಲ್ಲ ಬಿಸಿಯಾಗುತ್ತದೆ. ತಲೆ ಭಾರವಾಗುತ್ತದೆ. ಅವನನ್ನು ಹೇಗೆ ಸಂತೈಸುವುದೆಂದು ಗೊತ್ತಾಗದೆ ಕುಸಿದು ಕುಳಿತವಳಿಗೆ….ಮುಂದೇನೂ ಕಾಣಿಸುತ್ತಿಲ್ಲ…..
ಅವನಂದ ಎರಡು ಮಾತುಗಳು ಆಕೆಯನ್ನು ಚೂರಿಯಂತೆ ಇರಿದವು; ಕ್ಷಮಿಸಿ, “ಆಕೆ” ಎಂದು ನಾನೇಕೆ ನನ್ನನ್ನು ವಂಚಿಸಿಕೊಳ್ಳಲಿ? ಈ ಕಥೆಯ ನಾಯಕಿ ನಾನೇ..! ಅವನು ಮಾತಾಡಿದ್ದು ನನ್ನೊಡನೆಯೇ…
“ನಾನು ಕಪ್ಪಗಿದ್ದೆ, ಕೆಳಜಾತಿಯವನಾಗಿದ್ದೆ, ಬಡವನಾಗಿದ್ದೆ. ಹಾಗಾಗಿ ನನ್ನನ್ನು ತಿರಸ್ಕರಿದ್ದೆ ಅಲ್ವಾ?”
ಹೌದಾ..ನಾನಂದು ಹಾಗೆ ಯೋಚಿಸಿದ್ದೆನಾ? ನನಗೆ ಬುದ್ಧಿ ಬಂದಾಗಿನಿಂದ, ಬದುಕಿನುದ್ದಕ್ಕೂ ಜಾತಿ ಭೇದದ ಬಗ್ಗೆ ಯೋಚಿಸಿದವಳೇ ಅಲ್ಲ. ಅರೇ ಈಗ ತಾನೇ ಹೊಳೆದದ್ದು. ನನಗಿಂದಿಗೂ ಅವನ ಜಾತಿ ಯಾವುದೆಂದೂ ಗೊತ್ತಿಲ್ವಲ್ಲಾ..! ಕಪ್ಪಗಿದ್ದಾನೆ, ಜೊತೆಗೆ ನಡೆ-ನುಡಿಯಲ್ಲಿ ನಾಜೂಕುತನವಿಲ್ಲ. ಹಾಗಾಗಿ ಆತ ಬ್ರಾಹ್ಮಣನಾಗಿರಲಾರ. ಗೌಡರ ಗತ್ತು ಅವನಲಿಲ್ಲ. ಪರ ಊರಿನವನಾಗಿರುವ ಕಾರಣ ಬಂಟನಾಗಿರಲಾರ. ಲಿಂಗಾಯಿತ ಎಂಬ ಜಾತಿ ಇದೆ ಎಂಬುದರ ಬಗ್ಗೆ ಆಗ ನನಗೆ ಗೊತ್ತೇ ಇರಲಿಲ್ಲ. ದ.ಕ ದ ಹಳ್ಳಿಯೊಂದರಲ್ಲಿ ಹುಟ್ಟಿದ ನನಗೆ ಜಾತಿಯ ಬಗ್ಗೆ ಯಾವುದೇ ಪೂರ್ವಾಗ್ರಹಗಳಿರಲಿಲ್ಲ. ಬಡವನಾಗಿದ್ದನೇ ಆತ…? ಇಲ್ವಲ್ಲ. ನನಗೆ ತಿಳಿದಂತೆ ಆತನ ಅಪ್ಪ ಸರಕಾರದ ಒಳ್ಳೆಯ ಹುದ್ದೆಯಲ್ಲಿದ್ದರು. ಅಣ್ಣ ಇಂಜಿನಿಯರಿಂಗ್ ಓದುತ್ತಿದ್ದ. ಅವನ ತಂಗಿಯರಿಬ್ಬರು ಸುಂದರಿಯರು; ಓದಿನಲ್ಲಿ ಜಾಣೆಯರು. ನಾನು ಬಡವಳಾಗಿದ್ದೆ, ಕಪ್ಪಗಿದ್ದೆ ಎಂಬುದು ಸತ್ಯ….ಮತ್ತೆ..?
ನನ್ನ, ಅವನ ಪ್ರಥಮ ಭೇಟಿಯನ್ನು ನೆನಪಿಸಿಕೊಂಡೆ. ನನ್ನ ಅಣ್ಣನ ಮುಖಾಂತರ ಪರಿಚಯವಾದವನು ಅವನು. ನಂತರ ಪತ್ರಗಳ ಮುಖಾಂತರ ಅಭಿರುಚಿಗಳ ವಿನಿಮಯವಾಯ್ತು. ಒಂದು ದಿನ ನನ್ನನ್ನು ಭೇಟಿಯಾಗಬೇಕೆಂದು ಪಕ್ಕದ ಜಿಲ್ಲೆಯಿಂದ ನನ್ನ ಕಾಲೇಜಿಗೆ ಬಂದ. ನನಗೆ ಹುಡುಗರನ್ನು ಭೇಟಿಯಾಗುವುದು ಹೊಸತೇನೂ ಅಲ್ಲ. ಅದಾಗಲೇ ನನ್ನ ನೇರ ನಡೆ ನುಡಿಗಳಿಂದ ನನ್ನ ಮನೆಯವರಿಂದ, ಬಂಧು ಬಾಂಧವರಿಂದ, ಕೊನೆಗೆ ಕಾಲೇಜಿನಲ್ಲಿಯೂ “ಗಂಡುಬೀರಿ” ಎಂದು ಹೆಸರು ಪಡೆದಿದ್ದೆ.
ಚಿತ್ರಕೃಪೆ; ಅಂತರ್ಜಾಲ.
ಆಗೆಲ್ಲಾ ಭೇಟಿ ಹೋಟೇಲಿನಲ್ಲಿ ತಾನೇ? ಹೋಟೇಲ್ ಅಂದ್ರೆ ಈಗ ಬೇರೆಯೇ ಅರ್ಥ ಬರುತ್ತೆ..! ಅದು ಆ ಕಾಲ. ಬಸ್ ಸ್ಟ್ಯಾಂಡಿನಲ್ಲಿ ನಾನು ಕಾದಿದ್ದೆ. ಪೇಟೆಯ ಯಾವುದೋ ಹೋಟೇಲಿನಲ್ಲಿ ಎದುರಾ ಬದುರಾ ಕೂತು ಅವನು ಅವನು ಚಹಾ-ತಿಂಡಿಗೆ ಆರ್ಡರ್ ಮಾಡಿದ.. ನನಗೆ ಬರೀ ಚಾ ಮಾತ್ರ ಸಾಕು ಅಂದೆ. ಅವನು ತಾನು ಇತ್ತೀಚೆಗೆ ಬರೆದ ಕವನಗಳ ಬಗ್ಗೆ ಮಾತಾಡುತ್ತಿದ್ದ. ಬೆಳದಿಂಗಳ ರಾತ್ರಿಯಲ್ಲಿ ತನ್ನ ಪ್ರಿಯತಮೆಯ ಜೊತೆ ಕಳೆಯಲಿರುವ ರಮ್ಯ ಕಲ್ಪನೆಯ ಬಗ್ಗೆ ಹೇಳುತ್ತಿದ್ದ….
ಅವನು ತಿಂಡಿ ತಿನ್ನುತ್ತಿದ್ದ..ಆದರಲ್ಲಿ ನಾಜೂಕು ಇರಲಿಲ್ಲ; ಒರಟುತನವಿತ್ತು. ಕೊನೆಗೆ ತಟ್ಟೆಯಲ್ಲೇ ಕೈ ತೊಳೆದುಕೊಂಡ. (ನನ್ನ ಗಂಡನೂ ಹೀಗೇ ಮಾಡುತ್ತಾನೆ.) ನನಗೆ ತಟ್ಟೆಯಲ್ಲೇ ಕೈ ತೊಳೆದುಕೊಳ್ಳುವವರ ಬಗ್ಗೆ ಕೊಂಚ ಅಸಹನೆಯಿದೆ. ನನ್ನ ಮನೆಯಲ್ಲಿ ಊಟ ಮಾಡಿದವರು ತಟ್ಟೆಯಲ್ಲೇ ಕೈ ತೊಳೆದುಕೊಂಡರೆ ಇನ್ನೊಮ್ಮೆ ಅವರನ್ನು ಊಟ ಮಾಡಿ ಎನ್ನಲು ನಾನು ಸ್ವಲ್ಪ ಹಿಂದೆ ಮುಂದೆ ನೋಡುತ್ತೇನೆ.
ಸ್ವಲ್ಪ ಹೊತ್ತು ಅದೂ-ಇದೂ ಮಾತಾಡಿ ಅವನು ತನ್ನೂರಿಗೆ ಹೊರಡಲು ಸಿದ್ಧನಾದ. ನಾನು ಬಸ್ಟ್ಯಾಂಡ್ ತನಕ ಹೋಗಿ, ಅವನನ್ನು ಬಸ್ ಹತ್ತಿಸಿ, ಬಸ್ ಹೊರಟ ಮೇಲೆ ಕೈ ಬೀಸಿ ಹಾಸ್ಟೇಲಿಗೆ ಬಂದೆ…
ಅವನು ಆಗಾಗ ಕಾಗದ ಬರೆಯುತ್ತಿದ್ದ. ನೀವು ನಂಬುತ್ತೀರೋ ಇಲ್ಲವೋ…ಅವನೊಮ್ಮೆ ಫುಲ್ ಸ್ಕೇಪ್ ಹಾಳೆಯಲ್ಲಿ ಮೂವತ್ತೈದು ಪುಟಗಳ ಕಾಗದ ಬರೆದಿದ್ದ. ಅದರಲ್ಲಿ ಏನು ಬರೆದಿದ್ದ ಎಂಬುದು ನನಗೀಗ ನೆನಪಿಲ್ಲವಾದರೂ ಅದರಲ್ಲಿ “ರಾಜಾ ಪಾರ್ವೈ” ಎಂಬ ತಮಿಳು ಸಿನೇಮಾದ ಬಗ್ಗೆ ಪುಟಗಟ್ಟಲೆ ಬರೆದಿದ್ದ. ಅದರಲ್ಲಿ ಕಮಲ್ ಹಾಸನ್ ಒಬ್ಬ ಅಂಧ ವಯಲಿನ್ ವಾದಕ. ಮಾಧವಿ ಒಬ್ಬಳು ಶ್ರೀಮಂತಳಾದ ಚೆಲುವೆ. ಎಲ್ಲರ ವಿರೋಧದ ನಡುವೆ ಅವರ ಪ್ರೇಮ ಗೆಲ್ಲುವ ಪರಿಯನ್ನು ವಿವರವಾಗಿ ಬರೆದಿದ್ದ..
ಚಿತ್ರಕೃಪೆ; ಅಂತರ್ಜಾಲ.
ಅವನೊಮ್ಮೆ ನನ್ನನ್ನು ಹುಡುಕಿಕೊಂಡು ನಮ್ಮ ಮನೆಗೂ ಬಂದಿದ್ದ. ನಮ್ಮ ಮನೆಗೆ ಯಾರೇ ಬಂದರೂ, ಅವರು ಅಪರಿಚಿತರಾದರೂ ಆತ್ಮೀಯವಾದ ಆತಿಥ್ಯವಿರುತ್ತದೆ. ನಿನ್ನೆ ಕೂಡಾ ಅದನ್ನು ಫೋನಿನಲ್ಲಿ ನೆನಪಿಸಿಕೊಂಡ. “ನಿನ್ನಮ್ಮ..ಆ ತಾಯಿ ಮಾಡಿದ ಕೋಳಿ ಪದಾರ್ಥ, ಅವರು ಪ್ರೀತಿಯಿಂದ ಮಾಡಿ ಬಡಿಸಿದ ಆ ರೊಟ್ಟಿಯ ಸ್ವಾದ ಇವತ್ತಿಗೂ ನನ್ನ ನಾಲಗೆಯಲ್ಲಿ ಇದೆ…ಆದರೆ ನೀನು ಮಾತ್ರ…” ಎಂದು ಮೌನವಾಗಿದ್ದ.
ಹೌದು. ನನಗೆ ಆತ ಯಾಕೆ ಇಷ್ಟವಾಗಲಿಲ್ಲ.? ನನ್ನ ಮುಂದೆ ಒಂದು ಅಸ್ಪಷ್ಟ ಗುರಿಯಿತ್ತು. ಅದನ್ನು ನಾನು ಸಾಧಿಸಬೇಕಾಗಿತ್ತು. ಅಷ್ಟು ಬೇಗನೆ ನನಗೆ ಪ್ರೇಮದಲ್ಲಿ ಬೀಳುವುದು ಬೇಕಾಗಿರಲಿಲ್ಲ. “ದ್ವಂದ್ವಮಾನ- ಭೌತಿಕವಾದ”ದ ಓದು ಹೃದಯದ ಮಾತಿಗಿಂತ ಬುದ್ಧಿಯ ಮಾತಿಗೆ ಹೆಚ್ಚು ಒತ್ತು ಕೊಡುತ್ತಿತ್ತು. ಹಾಗಾಗಿಯೇ ಮುಂದೆ ಗಂಗೋತ್ರಿಯ ಕ್ಯಾಂಪಸ್ಸಿನಲ್ಲಿ ನಾವು ಎರಡು ವರ್ಷ ಜೊತೆಯಾಗಿಯೇ ಇದ್ದರೂ “ಹಲೋ” “ಹಾಯ್” ಬಿಟ್ಟರೆ ಒಂದು ಟೀ ಗೂ ನಾವು ಜೊತೆಯಾಗಲಿಲ್ಲ.
ಆಮೇಲೆ ಹದಿನೆಂಟು ವರ್ಷ ಹಾಗೊಬ್ಬ ಪರಿಚಿತ ನನಗಿದ್ದ ಎಂಬುದನ್ನು ಮರೆತು ನಾನು ಬದುಕಿದ್ದೆ.
ಅದೊಂದು ಸಂಜೆ ನನಗೊಂದು ಫೋನ್ ಬಂದಿತ್ತು. ನಾನು ಆಫೀಸಿನಲ್ಲಿದ್ದೆ. ಅವನು ಸಂಭ್ರಮದಿಂದ ತನ್ನನ್ನು ಪರಿಚಯಿಸಿಕೊಂಡಿದ್ದ. ತಾನು ಬೆಂಗಳೂರಿನ ಹೊರವಲಯದಲ್ಲಿ ಒಂದು ಮನೆ ಕಟ್ಟಿರುವುದಾಗಿ ಅದರ ಗೃಹ ಪ್ರವೇಶ ದಿನಾಂಕ ತಿಳಿಸಿ, ತನ್ನ ಪತ್ನಿಯ ಕೈಗೂ ಫೋನ್ ಕೊಟ್ಟು ಅವಳ ಕೈಯ್ಯಿಂದಲೂ ಆಮಂತ್ರಿಸಿದ್ದ.  ಕಾಲೇಜು ಗೆಳೆಯನೊಬ್ಬ ಈ ಮಹಾನಗರದಲ್ಲಿ ಸಿಕ್ಕಿದ್ದು ನನಗೆ ನಿಜಕ್ಕೂ ಖುಷಿಯಾಗಿತ್ತು.
ಆಫೀಸಿಗೆ ರಜೆ ಹಾಕಿ, ಒಂದು ಸುಂದರವಾದ ಬುದ್ಧನ ವಿಗ್ರಹವನ್ನು ಖರೀದಿಸಿ ಅವನ ಮನೆಗೆ ಹೋಗಿದ್ದೆ. ಅವನ ಮನೆಯವರೆಲ್ಲಾ ತುಂಬಾ ಆದರದಿಂದ ನನ್ನನ್ನು ಬರಮಾಡಿಕೊಂಡರು. ಅವನ ಪತ್ನಿ ಅಪ್ರತಿಮ ಚೆಲುವೆಯಾಗಿದ್ದಳು. ಅವನ ಮಗನಂತೂ ನನ್ನನ್ನು ನೋಡಿ “ಅಪ್ಪನ ಗರ್ಲ್ ಫ್ರೆಂಡ್ ನೀವೇನಾ?” ಎಂದು ನನ್ನಲ್ಲಿ ಅಚ್ಚರಿ ಮೂಡಿಸಿದ. ಆತನ ಪತ್ನಿಯ ಮೊಗದಲ್ಲೂ ಮೂಡಿದ ಮಂದಹಾಸ ನನ್ನನ್ನು ನಿರಾಳವಾಗಿಸಿತ್ತು.  ಅವನ ತಂದೆ ಮತ್ತು ಅಣ್ಣ ನನ್ನನ್ನು ನೋಡಿ ತುಂಬಾ ಸಂತಸಪಟ್ಟರು. ನಮ್ಮೂರಿನ ಬಗ್ಗೆ ನಾವು ಪರಸ್ಪರ ತುಂಬಾ ಮಾತಾಡಿಕೊಂಡೆವು.  ಬ್ಲಡ್ ಕ್ಯಾನ್ಸರಿನಿಂದ ಒಬ್ಬ ಮಗಳನ್ನು ಕಳೆದುಕೊಂಡ ಸಂಗತಿಯನ್ನು ಹೇಳುತ್ತಲೇ ಆ ತಂದೆ ಕಣ್ಣೀರಾಗುತ್ತಾ ನನ್ನನ್ನೂ ಭಾವುಕರನ್ನಾಗಿಸಿದರು.
ಆಮೇಲೆ ನಾವೆಲ್ಲ ಆಗಾಗ ಫೋನಿನಲ್ಲಿ ಮಾತಾಡಿಕೊಳ್ಳುತ್ತಿದ್ದೆವು. ಆದರೆ ನಾನು ಅವನ ಮನೆಗೆ ಹೋಗಲಿಲ್ಲ. ಒಂದೆರಡು ಸಾರಿ ಆತ ನಮ್ಮ ಮನೆಗೆ ಬಂದಿದ್ದ. ಒಂದೆರಡು ಪುಸ್ತಕಗಳನ್ನು ಕೊಂಡು ಹೋಗಿದ್ದ.
ಒಂದು ಇಳಿಸಂಜೆ ನನಗವನ ಪತ್ನಿ ಫೋನ್ ಮಾಡಿದ್ದಳು. “ಅವರ ಸ್ಥಿತಿ ಚಿಂತಾಜನಕವಾಗಿದೆ. ನಿಮ್ಮನ್ನು ನೋಡಬೇಕೆಂದು ಹಂಬಲಿಸುತ್ತಿದ್ದಾರೆ. ನೀವು ಅವರಿಗಿರುವ ಏಕೈಕ ಫ್ರೆಂಡ್ ಅಂತೆ. ದಯಮಾಡಿ ಒಮ್ಮೆ ಮನೆಗೆ ಬರ್ತೀರಾ?”  ಹೇಳುತ್ತಲೇ ಆಕೆ ಬಿಕ್ಕಳಿಸಿದಳು.
ಚಿತ್ರಕೃಪೆ; ಅಂತರ್ಜಾಲ.
ನಾನು ತಕ್ಷಣ ನಮ್ಮ ಡ್ರೈವರನ್ನು ಕರೆದು ಅವನ ಮನೆಗೆ ಧಾವಿಸಿದ್ದೆ. ಅದ್ಯಾವುದೋ ವಿಚಿತ್ರ ಹೆಸರಿನ ಮಾರಣಾಂತಿಕ ಕಾಯಿಲೆಯಿಂದ ಆತ ನರಳುತ್ತಿದ್ದ. ನಾನು ತಡರಾತ್ರಿಯವರೆಗೂ ಅಲ್ಲಿದ್ದು ನಂತರ ಮನೆಗೆ ಬಂದಿದ್ದೆ. ಆಮೇಲೆ ಬಹು ಸಮಯ ಆ ಕುಟುಂಬದೊಡನೆ ನಿರಂತರ ಸಂಪರ್ಕದಲ್ಲಿದ್ದೆ. ನಾನು ಫೋನ್ ಮಾಡಿದಾಗಲೆಲ್ಲ “ಅಪ್ಪಾ.. ನಿನ್ನ ಗರ್ಲ್ ಫ್ರೆಂಡ್ ಫೋನ್..” ಎಂದು ಆತನ ಮಗ ರಾಗ ಎಳೆಯುತ್ತಾ ತನ್ನಪ್ಪನನ್ನು ಕರೆಯುತ್ತಿದ್ದುದು ನಮ್ಮ ಸಹಜ ಮಾತುಕತೆಗೆ ಮುನ್ನುಡಿಯಾಗುತ್ತಿತ್ತು. ಆತ ಕ್ರಮೇಣ ಚೇತರಿಸಿಕೊಂಡ. ಆತನ ಪತ್ನಿ ಅವನನ್ನು ಉಳಿಸಿಕೊಂಡಳು.
ಈಗ ಒಂದೆರಡು ವರ್ಷಗಳಿಂದ ಮತ್ತೆ ಅವನ ಸಂಪರ್ಕ ಕಡಿದು ಹೋಗಿತ್ತು. ಈಗ ಫೋನ್ ಮಾಡಿ ಈ ರೀತಿ ಪ್ರಶ್ನಿಸಿದ್ದಾನೆ.
ನಾನು ಏನೆಂದು ಉತ್ತರಿಸಲಿ?
ಅವನಿಗೆ ನನ್ನಲ್ಲಿ ಪ್ರೀತಿ ಮೂಡಿರಬಹುದು. ನನಗೂ ಹಾಗೆ ಅನ್ನಿಸಬೇಕಲ್ಲವೇ? ಪ್ರೀತಿ ಎಂಬುದು ಒಳಗಿನಿಂದ ಕಾರಂಜಿಯಂತೆ ಚಿಮ್ಮಬೇಕು. ಬೆಂಕಿಯ ಹಾಗೆ ಸುಡಬೇಕು. ಪ್ರತಿಕೂಲ ಸಂದರ್ಭ ಬಂದರೆ ಜ್ವಾಲಾಮುಖಿಯಂತೆ ಸ್ಫೋಟಿಸಬೇಕು. ನನಗೆ ಹಾಗೆ ಆಗಿಲ್ವೆ? ನಾನೇನು ಮಾಡಲಿ?
[ ಕಥೆಗಳ ಮಾರಾಣಿ ಎಂಬ ಟ್ಯಾಗ್ ಲೈನ್ ಹೊತ್ತಿರುವ ”ಐರಾವತಿ’ ಬ್ಲಾಗ್ ನಲ್ಲಿ ನನ್ನ ಕಾಲಂ ’ ಪದ ಪಾರಿಜಾತ’ ಕ್ಕಾಗಿ ಬರೆದ ಮೊದಲ ಕಥೆಯಿದು ]

Thursday, January 3, 2013

ಶಂಕೆಯೆನಗೀಗ; ಈತನೊಳಗೊಬ್ಬ ಅತ್ಯಚಾರಿ ಅಡಗಿರಬಹುದೇ?

ಚಿತ್ರಕೃಪೆ; ಅಂತರ್ಜಾಲ


 ಒಂದು ವೈಯಕ್ತಿಕ ಅನುಭವದಿಂದ ನಾನೀ ಲೇಖನವನ್ನು ಆರಂಭಿಸುತ್ತೇನೆ;

ಇದು ಎರಡು ದಶಕಗಳ ಹಿಂದಿನ ಮಾತು. ನಾನು ಆಗತಾನೇ ಕನ್ನಡ ಎಂ.ಎ ಮುಗಿಸಿದ್ದೆ. ಉಡುಪಿಯಲ್ಲಿ ಕನ್ನಡ ಉಪನ್ಯಾಸಕ ಹುದ್ದೆಯೊಂದರ ಸಂದರ್ಶನಕ್ಕೆ ಹೋದವಳು ಅದನ್ನು ಮುಗಿಸಿಕೊಂಡು ಮಂಗಳೂರಿಗೆ ಬರುವಾಗ ನಾನು ನಮ್ಮೂರಿಗೆ ಹೋಗಬೇಕಾದ ಬಸ್ಸು ಹೊರಟು ಹೋಗಿಯಾಗಿತ್ತು. ಹೇಗಿದ್ದರೂ ಕೊಣಾಜೆಯಲ್ಲಿ ಅಣ್ಣನ ರೂಂ ಇದೆಯೆಲ್ಲಾ ಎಂದುಕೊಂಡು ಬಂದರೆ ಆತ ಅಂದೇ ಯಾವುದೋ ಕಾರ್ಯನಿಮಿತ್ತವಾಗಿ ಇನ್ನೊಂದು ಊರಿಗೆ ಹೊರಟು ಹೋಗಿದ್ದ. ಆಗಲೇ ಕತ್ತಲೆಯಾಗತೊಡಗಿತು. ಏನು ಮಾಡುವುದೆಂದು ಯೋಚಿಸುತ್ತಿದ್ದಾಗ ಅಲ್ಲೇ ಪಕ್ಕದ ರೂಂನಲ್ಲಿ ನಮ್ಮ ಡಿಪಾರ್ಟ್ ಮೆಂಟಿನಲ್ಲಿ ರಿಸರ್ಚ್ ಅಸಿಸ್ಟಂಟ್ ಆಗಿ ಕೆಲಸ ಮಾಡುತ್ತಿದ್ದ ಕಾರಣದಿಂದಾಗಿ ನನಗೆ ಪಾಠ ಮಾಡಿದ ಗುರುಗಳೂ ಆದ ನನ್ನ ಗೆಳೆಯನಂತಿರುವ ಆತನ ರೂಂನ ಬಾಗಿಲು ತಟ್ಟಿದೆ. ಆತನ ಪುಟ್ಟ ರೂಂನಲ್ಲಿ ಅಂದು ನಾನು ತಂಗಿದೆ.

ಅದನ್ನು ನಾನು  ಮರೆತೆ. ಆತ ಇತ್ತೀಚೆಗೆ ಕಾದಂಬರಿಯೊಂದನ್ನು ಬರೆದ. ಅದರಲ್ಲಿ  ಈ ಘಟನೆಯನ್ನು ಉಲ್ಲೇಖಿಸಿದ. ಮಾತ್ರವಲ್ಲ ಪೋನ್ ಮಾಡಿ ಕಾದಂಬರಿ ಬಗ್ಗೆ ಹೇಳುತ್ತಾ ; ’ಅಂದು ನಿನ್ನನ್ನು ನಾನು ಹಾಗೇ ಯಾಕೆ ಬಿಟ್ಟೆ? ನೀನಾದರೂ ನನ್ನನ್ನು ಹಾಳು ಮಾಡಬಾರದಿತ್ತೇ? ಈಗ ಬಾ ನೋಡೋಣ’ ಅಂದುಬಿಟ್ಟ.

ಆ ಘಟನೆಯನ್ನು ಈಗಿನ ಸಂದರ್ಭದಲ್ಲಿಟ್ಟು ನಾನು ನೋಡಬಯಸಿದರೆ....

ಇಂದು ನನಗೆ ಭುಜದೆತ್ತರ ಬೆಳೆದು ನಿಂತ ಮಗಳಿದ್ದಾಳೆ. ಆದರೂ ಒಬ್ಬಂಟಿ ಪುರುಷನಿರುವೆಡೆ, ಆತ ಪರಿಚಿತನಾಗಿದ್ದರೂ ನಾನು ಹೋಗಲಾರೆ. ಆತನನ್ನು ನಾನು ನಂಬಲಾರೆ ಎನ್ನುವುದಕ್ಕಿಂತಲೂ ನನ್ನನ್ನು ನಾನೇ ನಂಬದಿರುವಂತ  ಸ್ಥಿತಿ ನನ್ನದು. ಅದಕ್ಕೆ ಕಾರಣ ಬದಲಾದ ಸಾಮಾಜಿಕ ಸ್ಥಿತ್ಯಂತರಗಳು.  ಈಗ ನೋಡಿ, ದೆಹಲಿಯ ಘಟನೆ ನಡೆದ ನಂತರ ಪತ್ರಿಕೆಗಳಲ್ಲಿ ವರದಿಯಾಗುತ್ತಿರುವ ಅತ್ಯಚಾರದ ವರದಿಗಳನ್ನು ಓದುತ್ತಿದ್ದರೆ ನಮ್ಮ ಮಹಿಳೆಯರು ಎಂತಹ ದುರ್ಭರ ಬದುಕನ್ನು ಬದುಕುತ್ತಿದ್ದಾರೆ ಎಂಬ ಝಳಕ್ ಸಿಕ್ಕಿಬಿಡುತ್ತದೆ. ನಮ್ಮ ನಡುವೆಯೇ, ನಮ್ಮ ಅಪ್ಪ, ಅಣ್ಣ-ತಮ್ಮ, ಗಂಡ ಸೇರಿದಂತೆ ನಮ್ಮ ಸ್ನೇಹ ಸಂಬಂಧಗಳಲ್ಲೇ ಅತ್ಯಚಾರಿಯೊಬ್ಬ ಹೊಂಚು ಹಾಕುತ್ತಾ ಕಾಯುತ್ತಿರಬಹುದೇ ಎಂಬ ಆತಂಕ ಮೂಡುತ್ತದೆ. ಯಾರನ್ನೂ ನಂಬಲಾಗದಂತಹ ಭಯದ ವಾತಾವರಣದಲ್ಲಿ ನಾವಿಂದು ಬದುಕುತ್ತಿದ್ದೇವೆ.

 ಮಹಿಳೆಯೊಬ್ಬಳ ಮೇಲೆ ಲೈಂಗಿಕ ಅತ್ಯಚಾರ ನಡೆದಾಗ ಪುರುಷರಂತೆ ಯೋಚಿಸುವ ಮಹಿಳೆಯರನ್ನೂ ಒಳಗೊಂಡಂತೆ, ಇಡೀ ಪುರುಷ ಜಗತ್ತು ಅದನ್ನು ಬಣ್ಣಿಸುವುದು ’ಶೀಲ ಕಳೆದುಕೊಳ್ಳುವುದು’ ಆದರೆ ಸ್ತ್ರೀ ಮನಸ್ಸು ಗ್ರಹಿಸುವುದು ’ಬದುಕು ಕಳೆದುಕೊಳ್ಳುವುದು’ ಗಂಡಿನ ದೃಷ್ಟಿಯಲ್ಲಿ ಕಳೆದುಕೊಂಡದ್ದನ್ನು ಮತ್ತೆ ಪಡೆಯಲಾಗದು. ಆದರೆ ಹೆಣ್ಣಿನ ದೃಷ್ಟಿಯಲ್ಲಿ ಮತ್ತೆ ಬದುಕನ್ನು ಕಟ್ಟಿಕೊಳ್ಳಬಹುದು.

ಡಿಸೆಂಬರ್ ೧೬ರ ಭಾನುವಾರ ರಾತ್ರಿ ಕಾಮಾಂಧರ ಪೈಶಾಚಿಕ ಕ್ರೌಯಕ್ಕೆ ತುತ್ತಾಗಿ ಜೀವಚ್ಛವವಾಗಿ ಸಪ್ತರ್ ಜಂಗ್ ಆಸ್ಪತ್ರೆಯಲ್ಲಿ ಮಲಗಿದ್ದಾಗ ಆ ವಿದ್ಯಾರ್ಥಿನಿ ಮತ್ತೆ ಬದುಕಿನ ಬಗ್ಗೆ ಆಶಾವಾದಿಯಾಗಲು ಕಾರಣವೇ ಆಕೆಯಲ್ಲಿನ ”ಬದುಕನ್ನು ಕಟ್ಟಿಕೊಳ್ಳುವ’ ಛಲ. ಅದನ್ನಾಕೆ ಪೋಲಿಸರಿಗೆ ನೀಡಿದ ಹೇಳಿಕೆಯಲ್ಲೇ ಗೊತ್ತಾಗಿದೆ. ’ನನ್ನನ್ನು ಈ ಸ್ಥಿತಿಗೆ ತಂದವರಿಗೆ ಶಿಕ್ಷೆಯಾಗುತ್ತದೆಯಲ್ಲವೇ?’  ಆಸ್ಪತ್ರೆಯ ವೈದ್ಯಾಧಿಕಾರಿಗಳು ಆಕೆಯ ದೈಹಿಕ ಮತ್ತು ಮಾನಸಿಕ ಸ್ಥಿತಿಯ ಬಗ್ಗೆ ಪತ್ರಿಕಾ ಗೋಷ್ಟಿಯಲ್ಲಿ ವಿವರಿಸಿದ್ದರು. ಆಕೆಯ ಮಾನಸಿಕ ಸ್ಥಿಮಿತ ಮತ್ತು ಜೀವನ ಪ್ರೀತಿಗೆ ಅಚ್ಚರಿ ವ್ಯಕ್ತಪಡಿಸಿದ್ದರು. ಆದರೆ ಮನುಷ್ಯ ಪ್ರಯತ್ನಗಳ್ಯಾವುದೂ ಅವಳನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಆಕೆ ಮರಣಶಯ್ಯೆಯಲ್ಲಿ ಕೇಳಿದ ಪ್ರಶ್ನೆಗೆ ಇಂದು ಸಮಸ್ತ ಭಾರತವೇ ದನಿಗೂಡಿಸುತ್ತಿದೆ. ಪ್ರತಿಭಟನೆ ಆಂದೋಲದ ಸ್ವರೂಪ ಪಡೆದುಕೊಂಡಿದೆ. ಇದು ಇತರ ಪ್ರತಿಭಟನೆಗಳಂತೆ ಪ್ರಾಯೋಜಿತ ಕಾರ್ಯಕ್ರಮ ಅಲ್ಲ ಎಂಬುದಕ್ಕೇ ಇದರ ಫಲಶ್ರುತಿಯ ಬಗ್ಗೆ ದೇಶಕ್ಕೆ ದೇಶವೇ ಕಾತರದಿಂದ ಕಾದಿದೆ.
ಚಿತ್ರ ಕೃಪೆ; ಅಂತರ್ಜಾಲ
ನಮಗೆ ಗೊತ್ತಿದೆ; ಅತ್ಯಾಚಾರ ಪ್ರಕರಣಗಳಲ್ಲಿ ಅದು ಬಲತ್ಕಾರದ ದೈಹಿಕ ಸಂಪರ್ಕವೋ ಅಥವಾ ಒಪ್ಪಿತ ಲೈಂಗಿಕ ಕ್ರಿಯೆಯೋ ಎಂದು ನಿರ್ಧರಿಸುವುದು ಕಷ್ಟ ಸಾಧ್ಯ. ಹಾಗಾಗಿ ಅದರ ವಿಚಾರಣೆಯ ಪ್ರಕ್ರಿಯೆ ದೀರ್ಘವಾಗಿರುತ್ತದೆ. ಆದರೆ ಸಾಮೂಹಿಕ ಅತ್ಯಾಚಾರದಲ್ಲಿ ಘಟನೆ ಸ್ಪಷ್ಟವಿರುತ್ತದೆ. ಅಲ್ಲಿ ನಿಸ್ಸಂದೇಹವಾಗಿ ಹೆಣ್ಣು ಬಲಿಪಶುವಾಗಿರುತ್ತಾಳೆ. ಅಲ್ಲೊಂದು ಮೃಗೀಯ ವರ್ತನೆ ನಡೆದಿರುತ್ತದೆ.

ಪುರುಷಪುಂಗವನೆಂದು ತನ್ನನ್ನು ತಾನು ಹೆಮ್ಮೆಯಿಂದ ಕರೆದುಕೊಳ್ಳುವ ಗಂಡಸಿನ ಆಯುಧವೇ ’ಅದು’. ಅದೇ ಇಲ್ಲದಿದ್ದರೆ ಅವನೊಂದು ಹುಳು.ಕಾಲಲ್ಲಿ ಹೊಸಕಿ ಹಾಕಬಹುದಾದ ಜಂತು.ಸೆಕ್ಸ್ ವಿಚಾರದಲ್ಲಿ ಆತನಿಗೆ ವಿವೇಚನೆಯಿಲ್ಲ. ಕಂಡಲ್ಲಿ ನುಗ್ಗುವ ಗೂಳಿ ಅವನು.ಹೆಣ್ಣು ಸಿಗದಿದ್ದರೆ ಅವನಿಗೆ ಇನ್ನೊಂದು ಗಂಡೂ ಆದೀತು..ಕೊನೆಗೆ ಪ್ರಾಣಿಯಾದರೂ ಓಕೆ. ಅದಕ್ಕಾಗಿ ಅತ್ಯಚಾರ ಪ್ರಕರಣಗಳಲ್ಲಿ ಶಿಕ್ಷೆ ವಿಧಿಸುವ ಬಗ್ಗೆ ಈಗಿರುವ ಕಾನೂನಿಗೆ ತಿದ್ದುಪಡಿಯಾಗಬೇಕು. ಇದರ ವಿಚಾರಣೆ ಅತೀ ಕ್ಷಿಪ್ರವಾಗಿ ನಡೆದು ಶಿಕ್ಷೆ ಶೀಘ್ರವೇ ಜಾರಿಯಾಗಬೇಕು. ಇಂಥ ಕ್ರೂರಿಗಳಿಗೆ ಗಲ್ಲು ಶಿಕ್ಷೆಯಂತ ಶಿಕ್ಷೆಯನ್ನು ನೀಡಿ ಅವರಿಗೆ ಮುಕ್ತಿ ನೀಡಬಾರದು ಅವರು ಬದುಕಿದ್ದೂ ಸತ್ತಂತಿರಬೇಕು.  ”ಇಂತವರು ನೀವು’ ಎಂದು ಸಮಾಜ ಅವರನ್ನು ಪ್ರತಿಕ್ಷಣವೂ ಚುಚ್ಚಿ ಚುಚ್ಚಿ ಸಾಯುಸುತ್ತಲಿರಬೇಕು. ಹಾಗಾಗಿ ಅವರಿಗೆ ಪುರುಷತ್ವ ಹರಣದ ಶಿಕ್ಷೆಯನ್ನೇ ಜಾರಿಗೆ ತರಬೇಕು.

ನಾನು ಮತ್ತೆ ಮತ್ತೆ ನಂಬುವುದು ’ಪರಿಸರ ವ್ಯಕ್ತಿತ್ವವನ್ನು ರೂಪಿಸುತ್ತದೆ’ ಎಂಬುದನ್ನು. ನಾವು ನಮ್ಮ ಮಕ್ಕಳನ್ನು ಅವರ ಹದಿಹರೆಯದ ತನಕ ಯಾವ ಪರಿಸರದಲ್ಲಿ, ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಪೋಷಕರು ಸ್ವತಃ ಮಾದರಿಯಾಗಿರದಿದ್ದಲ್ಲಿ ಮಕ್ಕಳಲ್ಲಿ ಆರೋಗ್ಯವಂತ ಮನಸ್ಸು ರೂಪುಗೊಳ್ಳಲು ಸಾಧ್ಯವಿಲ್ಲ. ಮಕ್ಕಳು ಬಹುಬೇಗನೆ ಎಲ್ಲವನ್ನೂ ಗ್ರಹಿಸಿಕೊಳ್ಳುತ್ತಾರೆ. ತಮ್ಮ ಮನೆಯ ಹೆಣ್ಣುಮಕ್ಕಳಿಗೆ ಸ್ವಾಭಿಮಾನದ ಜೊತೆಗೆ ಸ್ವರಕ್ಷಣೆಯ ಕಲೆಯನ್ನು ಸಂದರ್ಭಕ್ಕನುಗುಣವಾಗಿ ಹೇಳಿಕೊಡಬೇಕು. ಹಾಗೆಯೇ ಗಂಡು ಮಕ್ಕಳಿಗೂ ಸ್ತ್ರೀಯರನ್ನು ಗೌರವದಿಂದ ಕಾಣುವುದನ್ನು ಅವರಿಗೆ ಅರಿವಿಲ್ಲದಂತೆ ಮನಗಾಣಿಸುತ್ತಿರಬೇಕು. ಯಾಕೆಂದರೆ ಪುರುಷ ಪ್ರಧಾನ ಯೋಚನೆಯನ್ನು ಅಷ್ಟು ಸುಲಭದಲ್ಲಿ ಬದಲಾಯಿಸುವುದು ಸಾಧ್ಯವಿಲ್ಲ.

ನನಗೀಗಲೂ ನೆನಪಿದೆ. ನನ್ನ ಮಗನೊಮ್ಮೆ ಮಾತಿನ ಮಧ್ಯೆ ”ಹೆಂಗಸು’ ಎಂಬ ಪದವನ್ನು ಉಪಯೋಗಿಸಿದ. ನನಗೆ ಆ ಪದವನ್ನು ಕೇಳಿದರಾಗದು. ನಾನು ಎಂದೂ ಆ ಪದವನ್ನು ಉಪಯೋಗಿಸುವುದಿಲ್ಲ. ಹೆಂಗಸು ಅಂದರೆ ಹೆಣ್ಣು ಕೂಸು. ಹೆರುವವಳು ಎಂಬ ಅರ್ಥ ಅದರಿಂದ ಸ್ಫುರಿಸುತ್ತದೆಯೆಂಬುದು ನನ್ನ ಭಾವನೆ., ಮಹಿಳೆಯ ಅಸ್ತಿತ್ವವನ್ನು ಅದು ಸೀಮಿತಗೊಳಿಸುತ್ತದೆಯೆಂಬುದು ನನ್ನ ಗ್ರಹಿಕೆ. ನನ್ನನ್ನು ಯಾರಾದರೂ ’ಆಯಮ್ಮ’ ಎಂದು ಸಂಭೋದಿಸಿದರೆ ನನ್ನ ಸಿಟ್ಟು ನೆತ್ತಿಗೇರುತ್ತದೆ!  ನನ್ನ ಮಗನಿನ್ನೂ ತುಂಬಾ ಚಿಕ್ಕವನು, ಆದರೂ ನಾನವನಿಗೆ ಹೇಳಿದೆ ’ಹೆಂಗಸು ಅನ್ನಬಾರದು, ಮಹಿಳೆ ಅನ್ನು’ ಅಂತ ಆಮೇಲೆ ನಾನದನ್ನು ಮರೆತು ಬಿಟೆ. ಆದರೆ ಒಂದೆರಡು ವರ್ಷಗಳ ಹಿಂದೆ ನಾನೇ ಬಾಯಿತಪ್ಪಿ ’ಆ ಹೆಂಗಸು..’ ಅಂದುಬಿಟ್ಟೆ. ಆಗ ಅಲ್ಲೇ ಇದ್ದ ನನ್ನ ಮಗ ’ ಅಮ್ಮಾ ಗೌರವ..ಮಹಿಳೆ ಅನ್ನು’ ಅಂದುಬಿಟ್ಟ..ನಾನು ಒಂದು ಕ್ಷಣ ಅವಕ್ಕಾಗಿ ನಿಂತು ಬಿಟ್ಟೆ!

 ಟೈಮ್ಸ್ ನೌ ಚಾನಲ್ಲಿನ ವರದಿಗಾರ ಹೇಳುತ್ತಿದ್ದ, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಕಾರರ ಸರಾಸರಿ ವಯಸ್ಸು ೨೨. ಅಂದರೆ ಅದು ಲೈಂಗಿಕ ಪರ್ವಕಾಲ. ಶರೀರದಲ್ಲಿ ಲೈಂಗಿಕ ಹಾರ್ಮೋನ್ ಗಳು ಅತ್ಯಧಿಕವಾಗಿ ಸ್ರವಿಸುವ ಕಾಲಘಟ್ಟ.ಆದರೂ ಮನುಷ್ಯನ ಮೂಲಭೂತ ಅವಶ್ಯಕತೆಯಲ್ಲಿ ಒಂದಾದ ಸೆಕ್ಸ್ ಅನ್ನು ನಿಯಂತ್ರಣ್ದಲ್ಲಿ ಇಟ್ಟುಕೊಳ್ಳಲು ಇವರಿಗೆಲ್ಲಾ ಹೇಗೆ ಸಾಧ್ಯವಾಯಿತು? ಅದು ಸಂಸ್ಕಾರದಿಂದ, ಶಿಕ್ಷಣದಿಂದ, ವೈಯಕ್ತಿಕ ಬದುಕಿನಲ್ಲಿ ನೈತಿಕ ಮೊಲ್ಯಗಳನ್ನು ಅಳವಡಿಕೊಂಡಿರುವುದರಿಂದ ಸಾಧ್ಯವಾಗಿದೆ. ಅಲ್ಲಿ ಅವರೆಲ್ಲಾ ಸೇರಿ ಸಮಾಜಮುಖಿ ಹೋರಾಟವೊಂದರಲ್ಲಿ ತೊಡಗಿಕೊಂಡಿರುವುದನ್ನು ನೋಡಿದಾಗ ಭವಿಷ್ಯದ ಬಗ್ಗೆ ಆಶಾವಾದ ಮೂಡುತ್ತದೆ. ಇಂತಹ ಮನಸ್ಸುಗಳು ರಾಜಕೀಯಕ್ಕೆ ಬರಬೇಕು; ಕಾನೂನು ರಚನೆಯಲ್ಲಿ ಭಾಗಿಯಾಗಬೇಕು.ಆರೋಗ್ಯವಂತ ಸಮಾಜವನ್ನು ಕಟ್ಟಬೇಕು. ಆದರೆ ಅದು ಸಾಧ್ಯವೇ?

ನಮ್ಮ ಕೆಲವು ಜನಪ್ರತಿನಿಧಿಗಳನ್ನು ನೋಡಿದರೆ ಕಾನೂನನ್ನು ರೂಪಿಸುವವರೇ ಕಾನೂನನ್ನು ಉಲ್ಲಂಘಿಸುವವರೂ ಆಗಿರುತ್ತಾರೆ ಎಂಬುದು ಗೊತ್ತಾಗುತ್ತದೆ. ನಮ್ಮ ಜನಪ್ರತಿನಿಧಿಗಳಲ್ಲೇ ಎಷ್ಟೋ ಜನರು ಹಲವಾರು ಮಹಿಳೆಯರೊಡನೆ ವಿವಾಹಬಾಹಿರ ಸಂಬಂಧಗಳನ್ನು ಇಟ್ಟುಕೊಂಡಿದ್ದಾರೆ. ಇನ್ನು ಕೆಲವರು ಅತ್ಯಚಾರ ಪ್ರಕರಣ್ಗಳಲ್ಲಿ ಭಾಗಿಯಾಗಿದ್ದಾರೆ. ಅಷ್ಟೆಲ್ಲ ಯಾಕೆ ಪ್ರಜಾಪ್ರಭುತ್ವದ ದೇಗುಲದಂತಿರುವ ವಿಧಾನಸೌಧದಲ್ಲೇ ಬ್ಲೂಪಿಲಂ ನೋಡಿದ ಚಪಲಚೆನ್ನಿಗರಾಯರಿದ್ದಾರೆ. ಇಂತವರಿಂದ ಯಾವ ಕಾನೂನು ರಚನೆಯನ್ನು ನಾವು ನಿರೀಕ್ಷಿಸಬಹುದು?

ಚಿತ್ರ ಕೃಪೆ; ಅಂತರ್ಜಾಲ
 ಇದರ ಜೊತೆಗೆ ಮೀಡಿಯಾಗಳು, ಸಿನೇಮಾಗಳು,ಜಾಹೀರಾತುಗಳು, ಟೀವಿ ಧಾರಾವಾಹಿಗಳು, ರಿಯಾಲಿಟಿ ಶೋಗಳು ಹೆಣ್ಣನು ಭೋಗದ ವಸ್ತುಗಳಾಗಿ, ಮಾರುಕಟ್ಟೆಯ ಸರಕುಗಳಾಗಿ ಕಾಣುತ್ತವೆ. ಹೆಣ್ಣಿನ ಕೊಬ್ಬು ಇಳಿಸಬೇಕಾದರೆ ಆಕೆಯ ಮೇಲೆ ಅತ್ಯಚಾರ ಮಾಡಬೇಕೆಂಬುದು ಸಿನೇಮಾರಂಗ ಒಪ್ಪಿಕೊಂಡ ಮೌಲ್ಯಗಳಲ್ಲಿ ಒಂದು. ನನಗೆ ಈಗಲೂ ನೆನಪಿದೆ. ಬಹುಶಃ ಅದು ಸುನಿಲ್ ಕುಮಾರ್ ದೇಸಾಯಿ ನಿರ್ದೇಶಿಸಿದ ಸಿನೇಮಾವಿರಬೇಕು. ಒಂದು ಬ್ಯಾಂಕ್ ದರೋಡೆ ನಡೆಯುತ್ತದೆ. ಬ್ಯಾಂಕಿನೊಳಗಿದ್ದ ಸುಮನ್ ನಗರ್ ಕರ್ ಅದನ್ನು ಪ್ರತಿಭಟಿಸುತ್ತಾಳೆ.”ಅವಳ ಕೊಬ್ಬು ಇಳಿಸು’ ಎಂದು ಖಳ ನಾಯಕ ತನ್ನ ಸಹಚರನಿಗೆ ಹೇಳುತ್ತಾನೆ. ಆಗ ದಡಿಯನೊಬ್ಬ ಎಲ್ಲರ ಎದುರಿನಲ್ಲೇ ಅವಳ ಮೇಲೆ ಅತ್ಯಚಾರ ಎಸಗುತ್ತಾನೆ. ನನ್ನ ದೃಷ್ಟಿಯಲ್ಲಿ ಹೆಣ್ಣನ್ನು ಶೋಷಣೆ ಮಾಡುತ್ತಿರುವವರಲ್ಲಿ ಚಿತ್ರರಂಗ ಮತ್ತು ಮೀಡಿಯಾಗಳು ಮೊದಲ ಸಾಲಿನಲ್ಲಿ ಬರುತ್ತವೆ. ಹೆಣ್ಣನ್ನು ಸೂಕ್ಷ್ಮಸಂವೇದನೆಯಿಂದ ಕಾಣುವ ಮಾಧ್ಯಮವಿದ್ದರೆ ಅದು ರಂಗಭೂಮಿ ಮಾತ್ರ. ಅತ್ಯಾಚಾರಕ್ಕೆ ಒಳಗಾಗದ ಮಹಿಳೆಯೊಬ್ಬಳು ಆತನ ಮರ್ಮಾಂಗವನ್ನು ಕತ್ತರಿಸಿ ಸೇಡು ತೀರಿಕೊಳ್ಳವ ವಸ್ತುವುಳ್ಳ ’ಪುರುಷ’ ನಾಟ್ಕವನ್ನು ಕೆಲವು ತಿಂಗಳುಗಳ ಹೀದೆ ನಾನು ಬೆಂಗಳೂರಿನ ಕಲಾಕ್ಷೇತ್ರದಲ್ಲಿ ನೋಡಿದ್ದೆ. ಇದು ಸಮಕಾಲೀನ ಸಮಸ್ಯೆಯೊಂದಕ್ಕೆ ಕಲಾ ಮಾಧ್ಯಮವೊಂದು ಪ್ರತಿಕ್ರಿಯಿಸಿದ ರೀತಿ. ಆ ರೀತಿಯ ಗುಣಾತ್ಮಕವಾದ ಪ್ರತಿಕ್ರಿಯೆಯನ್ನು ನಾವು ಮಾಧ್ಯಮದಿಂದ ನಿರೀಕ್ಷಿಸುತ್ತೇವೆ.

ಪ್ರತಿ ಮಹಿಳೆಯೂ ಒಂದಲ್ಲ ಒಂದು ರೀತಿಯಲ್ಲಿ ಲೈಂಗಿಕ ಅತ್ಯಚಾರಕ್ಕೆ ಒಳಗಾಗಿಯೇ ಆಗಿರುತ್ತಾಳೆ. ಅದು ಮಾನಸಿಕವಾಗಿ ಆಗಿರಬಹುದು, ಇಲ್ಲವೇ ದೈಹಿಕವಾಗಿ ಆಗಿರಬಹುದು. ಅದು ಕುಟುಂಬದ ಒಳಗೇ ಆಗಿರಬಹುದು ಅಥವ ಹೊರಗೇ ಅಗಿರಬಹುದು. ಆದರೆ ಆಕೆ ಲೈಂಗಿಕ ಆಟಿಕೆಯಾಗಿರುವುದು ಸತ್ಯ. ಅದನ್ನು ನಾವು ಬಹಿರಂಗವಾಗಿ ಹೇಳಿಕೊಳ್ಳಲಾರೆವು. ಒಂದು ವೇಳೆ ಯಾರದರೂ ಅದನ್ನು ಹೇಳಿಕೊಳ್ಳುವ ದೈರ್ಯ ಮಾಡಿದರೆ ಆಕೆಯನ್ನು ಸಮಾಜ ನೋಡುವ ದೃಷ್ಟಿಯೇ ಬದಲಾಗುತ್ತದೆ. ಆಗ ನಡೆಯುವುದೇ ನಿಜವಾದ ಅತ್ಯಚಾರವಾಗುತ್ತದೆ. ಹಾಗಾಗಿ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬರುವುದೇ ಇಲ್ಲ. ಅಲ್ಲಿ ಕ್ರೌರ್ಯ ಇತ್ತೋ ಇಲ್ಲವೋ ಗೊತ್ತಾಗುವುದಿಲ್ಲ. ಆದರೆ ಲೈಂಗಿಕ ಲಾಲಸೆಯೇ ಪರಾಕಾಷ್ಠೆಯಲ್ಲಿರುತ್ತದೆ ಎಂಬುದು ಸತ್ಯ. ಹಾಗಾಗಿ ಪುಟ್ಟ ಕಂದಮ್ಮಗಳ ಮೇಲೂ, ಇಳಿ ವಯಸ್ಸಿನವರ ಮೇಲೂ ಅತ್ಯಚಾರ ನಡೆಯುತ್ತದೆ. ಆದರೆ ಸಾಮೂಹಿಕ ಅತ್ಯಚಾರ ನಡೆದಾಗ ಅಲ್ಲಿ ವಿಜೃಂಭಿಸುವುದೇ ಕೌರ್ಯ. ಹಾಗಾಗಿ ಅಲ್ಲಿ ಮೃಗೀಯ ವರ್ತನೆಯಿರುತ್ತದೆ. ತಾವು ಧಾಳಿ ಮಾಡುತ್ತಿರುವುದು ಒಂದು ಜೀವಂತ ಹೆಣ್ಣಿನ ದೇಹದ ಮೇಲೆ, ಅದರಲ್ಲಿಯೂ ಮಿಡಿತವಿದೆ ಎಂಬುದನ್ನವರು ಮರೆತುಬಿಡುತ್ತಾರೆ. ಹಾಗಿಯೇ ಅವಳನ್ನು ಸಾರ್ವಜನಿಕವಾಗಿ ಬೆತ್ತಲೆ ಮಾಡುತ್ತಾರೆ, ಅವಳ ಜನನೇಂದ್ರಿಯಕ್ಕೆ ಕಬ್ಬಿಣದ ಸಲಾಕೆಯನ್ನು ತೂರಿಸುತ್ತಾರೆ. ಹಿಂದೊಮ್ಮೆ ಅಲ್ಲಿಂದಲೇ ತಾವು ಮಾಂಸದ ಮುದ್ದೆಯಂತೆ ಈ ಜಗತ್ತಿಗೆ ಅವತರಿಸಿದ್ದೆವು ಎಂಬುದನ್ನು ಅವರಿಗೆ ತಿಳಿಸಿ ಹೇಳುವವರು ಯಾರು? ಪುರುಷಪ್ರಧಾನವಾದ, ಪುರುಷ ಮನಸ್ಥಿತಿಯ ಪೋಲಿಸ್ ಇಲಾಖೆಯಲ್ಲಿ ಈ ಕಾರ್ಯಕ್ಕೆ ಲಾಠಿಯ ಬಳಕೆಯಾಗುತ್ತದೆ ಅಷ್ಟೇ. ಕ್ರಿಮಿನಲ್ ಕೇಸ್ ಗಳಲ್ಲಿ ಪೋಲಿಸ್ ಠಾಣೆಯಲ್ಲಿ ಅತೀಥ್ಯ ಪಡೆದು ಬಂದ ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆತ್ಮೀಯವಾಗಿ ಮಾತಾಡಿಸಿ ನೋಡಿ, ಭೀಕರ ಸತ್ಯಗಳು ಹೊರಬರುತ್ತವೆ!.

ಆದರೆ ಲೈಂಗಿಕ ತಜ್ನರು ಹೇಳುವ ಸತ್ಯ ಬೇರೆಯದೇ ಆಗಿರುತ್ತದೆ. ಅವರು ಹೇಳುತ್ತಾರೆ. ಪುರಷನಿಗಿಂತಲೂ ಸ್ತ್ರೀಯ ಲೈಂಗಿಕ ಕಾಮನೆಗಳು ದುಪ್ಪಟ್ಟಾಗಿರುತ್ತವೆ. ಓಶೋ ತಮ್ಮ ’ಸ್ತ್ರೀ’ ಪುಸ್ತಕದಲ್ಲಿ ಇದಕ್ಕೆ ಸಮರ್ಥನೆಗಳನ್ನು ನೀಡುತ್ತರೆ. ಇದಕ್ಕೆ ವರ್ತಮಾನದಲ್ಲಿ ಪುರಾವೆಗಳು ಸಿಗುತ್ತವೆ. ಒಬ್ಬಳು ವೇಶ್ಯ ದಿನವೊಂದರಲ್ಲಿ ಹತ್ತು ಗಿರಾಕಿಗಳನ್ನಾದರೂ ತೃಪ್ತಿ ಪಡಿಸಬಲ್ಲಳು. ಆದರೆ ಒಬ್ಬ ಗಂಡಸು ಎಷ್ಟು ಜನರನ್ನು ಹಾಸಿಗೆಯಲ್ಲಿ ಗೆಲ್ಲಬಲ್ಲ ಹೇಳಿ? ಆಗ ಅವನಿಗೆ ನೆನಪಾಗುವುದೇ  ರಾಡ್, ಲಾಠಿಗಳು...

ಮೊನ್ನೆ ನನ್ನ ಸ್ನೇಹಿತರೊಬ್ಬರೊಡನೆ ದೆಹಲಿ ಘಟನೆ ಬಗ್ಗೆ ಮಾತಾಡುತ್ತಿದ್ದೆ. ಮಾತಿನ ಮಧ್ಯೆ ಅವರಲ್ಲಿ ಹೇಳಿದೆ. ನೀವು ಗಂಡಸರು ಮಾಡಿದ ಹಾಗೆ ಹುಡುಗಿಯರು ಕೂಡಾ ಮಾಡಿದರೆ ಹೇಗಿರುತ್ತೆ ಸ್ವಲ್ಪ ಕಲ್ಪ್ಪಿಸಿಕೊಳ್ಳಿ; ಒಂದು ಆರೇಳು ಹುಡುಗಿಯರು ಹುಡುಗನೊಭ್ಭನನ್ನು ಅಪಹರಿಸಿ ಅವನ ಬಾಯಿಗೆ ಒಂದೆರಡು ವಯಾಗ್ರ ಮಾತ್ರೆ ತುರುಕಿಸಿ ಅವನನ್ನು ಕಬ್ಬಿನ ರಸ ಹೀರಿದಂತೆ ಹೀರಿ ಬಿಟ್ಟರೆ ಹೇಗಿರುತ್ತೆ? ಎಂದೆ. ಬಿಟ್ಟ ಬಾಯಿ ಬಿಟ್ಟಂತೆ ನಿಂತ ಅವರನ್ನು ನಾನು ಮೈ ಮುಟ್ಟಿ ಎಚ್ಚರಿಸಬೇಕಾಯ್ತು. ವಿದೇಶದಲ್ಲಿ ಎಲ್ಲಿಯೋ ಒಂದು ಪ್ರಕರಣ ಈ ರೀತಿ ನಡೆದದ್ದು ವರದಿಯಾಗಿದ್ದು ಬಿಟ್ಟರೆ ಇನ್ನೆಲ್ಲೂ ನಡೆದಂತಿಲ್ಲ. ಆದ್ರೆ ಮುಂದೆ ನಡೆಯಲಾರದು ಎಂದು ಹೇಳುವುದು ಹೇಗೆ?.ಹಾಗಾಗಿ ನನ್ನ ಪುರುಷ ಸಂಗಾತಿಗಳಲ್ಲಿ ಕೇಳಿಕೊಳ್ಳುವುದಿಷ್ಟೇ; ನಿಮ್ಮ ಉಳಿವಿಗಾಗಿಯಾದರೂ ನಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳಿ.......

[’ಅಗ್ನಿ’ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ ]









·          
·          


Thursday, December 27, 2012

ಪೂರ್ಣಾಹುತಿಯ ಸಮಯದಲ್ಲೇಕೆ ಬಂತು ವಿಶ್ವಾಮಿತ್ರ ಹಸ್ತ..?!



ಅಂದು ನಾನಿನ್ನೂ ಪುಟ್ಟ ಬಾಲೆ. ಕನಸಿನ ಕೋಟೆಗೆ ಲಗ್ಗೆಯಿಡುವ ಕಾಲ. ಆಕಾಶದಿಂದ ಇಳಿಬಿಟ್ಟ ಹೂವಿನುಯ್ಯಾಲೆಯಲ್ಲಿ ಕುಳಿತಿದ್ದೆ. ಅರೆಗಣ್ಣು ಮುಚ್ಚಿತ್ತು. ಸಪ್ತ ಸಮುದ್ರದಾಚೆಯಿಂದ ಬಿಳಿಯ ಕುದುರೆಯನ್ನೇರಿ ನೀನು ಬಂದೆ. ಕಯ್ಯಲ್ಲಿ ಕುಂಚವಿತ್ತು. ಕಣ್ಣುಗಳಲ್ಲಿ ತುಂಟತನವಿತ್ತು. ನಿರಂತರ ನಾಲ್ಕು ವರ್ಷಗಳ ಕಾಲ ನನ್ನ ಹೃದಯವನ್ನೇ ನೀ ಕ್ಯಾನ್ವಾಸ್ ಮಾಡಿಕೊಂಡೆ. ಒಂದು ದಿನ ಇದರ ಮೇಲೆ ಜಡಿ ಮಳೆ ಸುರಿಯಿತು...

ನೀನು ನನ್ನ ಎದೆಯ ಚೆತ್ತಾರಕ್ಕೆ ತಣ್ಣಿರು ಎರಚಿದ ದಿನ ನಾನು ಎಷ್ಟೊಂದು ಅತ್ತಿದ್ದೆ. ನೀನು ಕೂಡಾ ಅಳುತ್ತಿದ್ದೆ.ನಿನ್ನ ಕಣ್ಣೀರು ನನಗೆ ಕಾಣಬಾರದೆಂದು ನನಗೆ ಬೆನ್ನುಮಾಡಿ ಚಾಪೆಯ ಮೇಲೆ ಕುಳಿತ್ತಿದ್ದೆ. ಹೆಣ್ಣು ಹೃದಯ ನೋಡು ನನ್ನದು, ಬಿಕ್ಕಳಿಸಿ ಅಳುತ್ತಿದ್ದೆ. ಜೀವ ಚೈತನ್ಯವೇ ಉಡುಗಿಹೋದಂತಾಗಿ ನಿನ್ನ ಬೆನ್ನ ಮೇಲೆ ಮುಖವಿಟ್ಟಿದ್ದೆ. ಇಡೀ ಒಂದು ರಾತ್ರಿ ನಿನ್ನ ಬೆನ್ನ ಮೇಲೆ ಕಣ್ಣೀರಿನಲ್ಲಿ ಚಿತ್ತಾರ ಬಿಡಿಸಿದ್ದೆ. ಹೇಳು ಶರೂ, ನಿಜವಾಗಿಯೂ ನನ್ನಲ್ಲಿ ನಿನಗೆ ಪ್ರೀತಿಯಿರುತ್ತಿದ್ದರೆ ನೀನು ನನ್ನನ್ನು ಎದೆಗವಚಿಕೊಂಡು ಸಂತೈಸುತ್ತಿರಲಿಲ್ಲವೇ?

ಈಗ ಅರ್ಥವಾಗುತ್ತಿದೆ; ಆಗ ನೀನು ತುಂಬಾ ಹಿರಿಯನಾಗಿದ್ದೆ. ನಾನು ಚಿಕ್ಕವಳಿದ್ದೆ. ಮಾದರಿಗಳನ್ನು,ಆದರ್ಶ ವ್ಯಕ್ತಿಗಳನ್ನು ಆರಾಧಿಸುವ ವಯಸ್ಸು ಅದು. ನನ್ನ ಪ್ರೀತಿಗೆ ನೀನು ಮಾದರಿಯಾಗಿದ್ದೆ. ನಿನ್ನಂತಹ ಗುಣ ಲಕ್ಷಣಗಳಿರುವ ವ್ಯಕ್ತಿ ನನ್ನ ಬಾಳ ಗೆಳೆಯನಾಗಬೇಕೆಂದು ಆಶಿಸಿದ್ದೆ. ಮನಸ್ಸಿನಲ್ಲಿಯೇ ನಿನಗೆ ಶರಣಾಗಿಬಿಟ್ಟೆ. ಒಬ್ಬ ಚಿತ್ರ ನಟನನ್ನೋ, ಒಬ್ಬ ಲೇಖಕನನ್ನೋ, ಒಬ್ಬ ಇತಿಹಾಸ ಪುರುಷನನ್ನೋ, ಕೊನೆಗೆ ಒಂದು ಪ್ರಾಣಿಯನ್ನಾದರೂ ಪ್ರೀತಿಸುವ ವಯಸ್ಸು ಅದು. ಅಂದರೆ ಒಂದು ರೀತಿಯಲ್ಲಿ ತನ್ನನ್ನೇ ತಾನು ಪ್ರೀತಿಸಿಕೊಳ್ಳುವ ಕಾಲಘಟ್ಟ ಅದು. ನಾನೂ ನಿನ್ನನ್ನು ಪ್ರೀತಿಸಿಬಿಟ್ಟೆ. ನನ್ನ ರಕ್ತ ಮಾಂಸಗಳೊಡನೆ ಸೇರಿಸಿಕೊಂಡು ಬಿಟ್ಟೆ. ಮೊದಲ ಪ್ರೇಮ ಯಾವತ್ತೂ  ಬಾಳ ಪಯಣಕ್ಕೆ ಕಟ್ಟಿಕೊಂಡ ನೆನಪಿನ ಅಕ್ಷಯ ಪಾತ್ರೆಯಲ್ಲವೇ?

ಈಗ ನೀನು ಹೇಗಿದ್ದಿ ಶರೂ? ಇತ್ತೀಚೆಗೆ ಟೀವಿ ಚಾನಲ್ಲೊಂದರಲ್ಲಿ ನಿನ್ನ ಸಂದರ್ಶನ ನೋಡಿದೆ. ಅದೇ ಗಾಂಭೀರ್ಯ ಅದೇ ಸ್ಪಷ್ಟ ನುಡಿಗಳು. ಅದೇ ಕುರುಚಲು ಗಡ್ಡ. ಈಗ ಒಂದೆರಡು ಬೆಳ್ಳಿ ಕೂದಲು ಇಣುಕುತ್ತಿವೆ. ನಿನಗೆ ಗೊತ್ತೇ ಗೆಳೆಯಾ, ಗಡ್ಡವಿರುವ ವ್ಯಕ್ತಿಯೊಬ್ಬ ನನ್ನ ಮುಂದಿನಿಂದ ಹಾದು ಹೋದರೆ ನನಗೆ ನಿನ್ನದೇ ನೆನಪು. ಒಮ್ಮೆಯಾದರೂ ಹಿಂತಿರುಗಿ ಆತನನ್ನು ನೋಡಬೇಕೆನಿಸುತ್ತದೆ. ಆತ ಜುಬ್ಬ ಧರಿಸಿದರಂತೂ ಒಂದು ಕ್ಷಣ ನನ್ನ ಕಣ್ಣುಗಳು ಆತನ ಕಣ್ಣುಗಳಲ್ಲಿ ಸೇರಿಹೋಗುತ್ತದೆ.

ಒಂದೂ ಮಾತಿಲ್ಲದೆ, ಯಾವುದೇ ಸಂಪರ್ಕ ಮಾಧ್ಯಮವಿಲ್ಲದೆ ನಾನು ನಿನ್ನನ್ನು ನಾಲ್ಕು ವರ್ಷಗಳ ಕಾಲ ಆರಾಧಿಸಿದೆ ಎಂದರೆ ನನ್ನ ಬಗ್ಗೆಯೇ ನನಗಿಂದು ಅಚ್ಚರಿ ಮೂಡುತ್ತದೆ. ಮನುಷ್ಯನ ಭಾವನಾತ್ಮಕ ಜಗತ್ತು ಎಷ್ಟೊಂದು ನಿಗೂಢ ಅಲ್ಲವೇ? ನಿನ್ನನ್ನು ಹೋಲುವ ಯಾವನೇ ವ್ಯಕ್ತಿ ನನಗೆ ಕಾರಣವಿಲ್ಲದೆ ಹತ್ತಿರದವನೆನಿಸುತ್ತಾನೆ.

ಮೊನ್ನೆ ಹೀಗಾಯ್ತು ನೋಡು, ತುಂಬಾ ದಿನಗಳಿಂದ ನನ್ನ ಮನಸ್ಸಿನಲ್ಲೊಂದು ಚಿಂತೆ ಕಾಡುತ್ತಿತ್ತು. ಮಾನಸಿಕವಾಗಿ ನಾನು ನಲುಗಿ ಹೋಗಿದ್ದೆ; ದುಭಲಳಾಗಿದ್ದೆ. ನಿನ್ನನ್ನೇ ಹೋಲುವ ಪರಿಚಯದವರೊಬ್ಬರು ನನ್ನ ಮುಂದೆ ಕುಳಿತಿದ್ದರು. ಮಾತಿನ ಮಧ್ಯೆ ನಾನು ಅವರಿಗೆ ನನ್ನ ಚಿಂತೆಗೆ ಕಾರಣವನ್ನು ಹೇಳಲು ಹೊರಟೆ. ಹೇಳಲಾಗಲೇ ಇಲ್ಲ. ಮೈ ನಡುಗಿ, ತುಟಿ ಅದುರಿ, ಕಣ್ಣು ಕತ್ತಲಿಟ್ಟಂತಾಗಿ ನನ್ನನ್ನು ನಾನು ನಿಯಂತ್ರಿಸಿಕೊಳ್ಳದಾದೆ. ಹೊಕ್ಕಳಿನಾಳದಿಂದ ಬಿಕ್ಕಳಿಕೆ ಉಮ್ಮಳಿಸಿ ಬಂತು. ಹೀಗಾಗುತ್ತಿರುವುದು ಇದು ನಾಲ್ಕನೆಯ ಬಾರಿ. ಮೊದಲ ಬಾರಿ ನಿನ್ನೆದುರು ಸಂಭವಿಸಿದ್ದು ಇನ್ನೆರಡು ಬಾರಿ ನನ್ನೆದುರು ನನ್ನ ಪತಿಯಿದ್ದ. ನೀನು ಅಂದು ನನಗೆ ಬೆನ್ನಿನಾಸರೆಯನ್ನಾದರೂ ನೀಡಿದ್ದೆ... ಯಾಕೆ ಶರೂ, ಹೆಣ್ಮಕ್ಕಳ ಬಿಕ್ಕಳಿಕೆಗೆ ಪುರುಷ ಜಗತ್ತು ಬೆನ್ನು ಹಾಕಿ ಪಲಾಯನ ಮಾಡುತ್ತಿದೆ? ಅವರನ್ನು ಎದುರಿಸುವ ಧೈರ್ಯ ನಿಮ್ಮಲಿಲ್ಲವೇ? ನಿಮ್ಮ ಕಲಾಜಗತ್ತಿನಲ್ಲಾದರೂ ಇದಕ್ಕೊಂದು ನ್ಯಾಯ ಒದಗಿಸಬಾರದೇ?

ಹೊಗಲಿ ಬಿಡು, ನನ್ನ ಪಾಲಿಗೆ ಆಕಾಶದ ಅನಂತತೆ, ಸಾಗರದ ಆಳ, ಹಿಮಾಲಯದ ಔನತ್ಯ ಎಲ್ಲವನ್ನೂ ನನ್ನೆಡೆಗೆ ಹೊತ್ತು ತಂದವನು ನೀನು. ಮಲೆನಾಡಿನ ಹಸಿರ ಸೆರಗಿನಲ್ಲಿ ಸುರಗಿ ಹೂವಿನ ಸುವಾಸನೆಗೆ ಕಣ್ಣೆತ್ತಿ ನೋಡಿದಾಗ ಬೊಗಸೆ ತುಂಬಾ ಹೂವಿನ ಮಳೆಗೆರೆದವನು... ಕುಮಾರ ಪರ್ವತದ ತುದಿಯಿಂದ ಅಷ್ಟಮೂಲೆಯ ಕಲ್ಲುಗಳನ್ನು ಆಯ್ದು ತಂದು ನಮ್ಮ  ಸಂಬಂಧಕ್ಕೊಂದು ಪಾವಿತ್ರ್ಯತೆಯ ಆಯಾಮ ಕೊಟ್ಟವನು... ನಿರಂಜನರ ’ಚಿರಸ್ಮರಣೆ’ ಕಾದಂಬರಿಯನ್ನು ಮೊದಲ ಉಡುಗೊರೆಯಾಗಿ ನೀಡಿ, ನನ್ನ ಯೋಚನಾ ಲಹರಿಗೆ ಸ್ಪಷ್ಟತೆಯ ಸಾಣೆ ಹಿಡಿದವನು... ಬದುಕು ಬರಡು ಎನಿಸಿದಾಗ ತನ್ನೆದೆಯ ಬಗೆದು ಪ್ರೀತಿಯ ಜೀವಜಲದ ಕುಂಭವನು ನನ್ನೆದುರಲ್ಲಿ ಹಿಡಿದು ನಿಂದವನು... ಸ್ಪರ್ಶ ಮಾತ್ರದಲ್ಲೇ ನನ್ನ ಮೈಮನದಲ್ಲಿ ಚೈತ್ರ ಪಲ್ಲವಿಸಿದವನು... ಪೂರ್ಣಾಹುತಿಯ ಸಮಯದಲ್ಲೇಕೆ ವಿಶ್ವಾಮಿತ್ರ ಹಸ್ತ ತೋರಿಸಿದೆ. ನನ್ನಿಂದಾದ ಅಪರಾಧವೇನು ಗೆಳೆಯಾ?

ಹೆಜ್ಜೆ ಹೆಜ್ಜೆಗೂ ನಾನು ನಿನ್ನನು ಅನುಸರಿಸಿದೆ. ಪೂರ್ಣ ನಂಬಿಕೆಯಿಂದ ಜೊತೆಯಾದೆ. ನೀನು ನನಗೆ ಗುರುವಾದ;ಗೆಳೆಯನಾದೆ; ತಂದೆಯಾದೆ; ಸಖನಾದೆ;ಕೊನೆಗೆ ದೇವರೇ ಆದೆ. ಹಾಗಾಗಿಯೇ ಆಕಾಶದ ನಕ್ಷತ್ರವೇ ಆದೆ.

ನಾನಿಲ್ಲಿ ಈ ಭೂಮಿಯಲ್ಲಿ ಬಂದು ಬಿದ್ದಿದ್ದೇನೆ ನೋಡು. ನೀನು ನನ್ನನ್ನು ತೊರೆದು ಹೋದ ದಿನ ಆತ ಬಂದಿದ್ದ....ಮರುದಿನವೂ ಬಂದಿದ್ದ...ಆಮೇಲೆಯೂ ಬಂದ...ನನ್ನನ್ನು ಹಿಡಿದೆತ್ತಿದ...ಕಣ್ಣೀರು ಒರೆಸಿದ...ಎದೆಗೊತ್ತಿಕೊಂಡ...ಉಮ್ಮರ್ ಖಯ್ಯಾಮನ ಹಾಡು ಹೇಳಿ ಕಣ್ಣೀರಲ್ಲೂ ನಗುವುದ ಹೇಳಿಕೊಟ್ಟ. ದುಖಃದ ಕಡಲಿಗೆ ಇಳಿತವಿಲ್ಲ..ಭರತ ಮಾತ್ರ...!

ಬದುಕು ಸಾಗಿತು ಮುಂದು ಮುಂದಕೆ...ನೆನಪು ಹಿಂಬಾಲಿಸಿತು ನೆರಳಿನಂತೆ...ಸಂಬಂಧಗಳು ವಿಸ್ತರಿಸಿಕೊಂಡವು ಬಲೆಯಂತೆ...ಯಾವ ದಡದಲ್ಲೂ ಹಡಗು ನಿಲ್ಲಲೇ ಇಲ್ಲ. ಅಲ್ಲಿ ಇತ್ತಾದರೂ ಏನು? ಎಲ್ಲವನ್ನೂ ನೀನು ಬಹು ಹಿಂದೆಯೇ ಲೂಟಿ ಮಾಡಿದ್ದೆ. ನಿನ್ನ ನೆನಪಿನ ಧಾರೆಯಲಿ ನಾನು ತೊಯ್ದು ಹೋಗುತ್ತಲೇ ಇದ್ದೆ...ಆ ಒಂದು ಸಂಜೆ....ಹತ್ತಾರು ವರ್ಷಗಳ ನಂತರ ಅವನು ಬಂದಿದ್ದ. ನನ್ನನು ನೋಡಿ ವಿಸ್ಮಯ ಪಟ್ಟ. ನಾನೇರಿದ ಎತ್ತರಕ್ಕೆ ಬೆಕ್ಕಸ ಬೆರಗಾದ. ನನ್ನ ತಲೆಗೊಂದು ಮೊಟಕಿ ಅವನಂದ ’ ಅವನು ಬಿಟ್ಟು ಹೋದ ದಿನ ನೀ ಅಕ್ಷರಶಃ ಹೆಣವಾಗಿದ್ದೆ. ನಿನಗೆ ಗೊತ್ತಿದೆಯೋ ಇಲ್ಲವೋ ಅಂದು ನಿನಗೆ ನಾನು ಕುಡಿಸಿದ್ದು ಎರಡು ಬಾಟಲ್ ಬಿಯರ್. ನಿನಗೆ ತಾಗಲೇ ಇಲ್ಲ. ಕೊನೆಗೆ ಕುಡಿಸಿದ್ದು ರಮ್. ಆಗ ಒಂದೇ ಸಮನೆ ವಾಂತಿ ಮಾಡಿಕೊಂಡು ಎರಡು ದಿನ ಮಲಗಿದ್ದೆ. ಎಲ್ಲಿ ಗೊತ್ತಾ? ನನ್ನ ತೊಳತೆಕ್ಕೆಯಲ್ಲಿ... ಈಗ ನಾನು ನಿನ್ನನು ಮುಟ್ಟಲೂ ಹಿಂದೇಟು ಹಾಕುವ ರೀತಿಯಲ್ಲಿ ಬೆಳೆದುಬಿಟ್ಟಿದ್ದಿಯಲ್ಲೇ’ ಅಂದುಬಿಟ್ಟ. ಬೆನ್ನು ತಟ್ಟಿದ. ಇದು ನಿಜವಿರಬಹುದೇ? ಅಂತಹದೊಂದು ಸ್ಥಿತಿಯನ್ನು ನಾನು ದಾಟಿ ಬಂದಿರಬಹುದೇ? ಆತ ನಿನ್ನ ಗೆಳೆಯನಲ್ಲವೇ? ನಿನ್ನ ರಾಯಭಾರಿಯಾಗಿ ನನ್ನಲ್ಲಿಗೆ ಬಂದ್ದಿರಬಹುದಲ್ಲವೇ?

ಸಂಬಂಧದ ಕೊಂಡಿ ಮತ್ತೆ ಸೇರಿಕೊಳ್ಳುವುದು ನನಗೆ ಬೇಕಾಗಿರಲಿಲ್ಲ. ಅಷ್ಟರಲ್ಲೇ ನನಗೆ ಅರ್ಥವಾಗಿಬಿಟ್ಟಿತ್ತು. ಪ್ರೀತಿಯ ಜಗತ್ತೇ ಬೇರೆ. ವಾಸ್ತವವೇ ಬೇರೆ. ಸಾಮಾಜಿಕ ಸ್ಥಾನ-ಮಾನ ನನ್ನ ಘನತೆ ಅಂತಸ್ತುಗಳನ್ನು ಹೆಚ್ಚಿಸಿರಬಹುದು. ಆದರೆ ಒಳಗೊಳಗೇ ನಾನು ಕುಸಿದುಹೋಗಿದ್ದೇನೆ ಶರೂ...ಆತನಿಗೆ ಗೊತ್ತಿಲ್ಲದ ಇನ್ನೊಂದು ವಿಚಾರವಿದೆ ಗೆಳೆಯಾ..ಅಸಹಾಯಕ ಘಳಿಗೆಯಲ್ಲಿ ಆತ ನನ್ನ ತುಟಿಗೆ ಮಧು ಪಾತ್ರೆ ಸೋಕಿಸಿರಬಹುದು. ಆದರೆ ಇವತ್ತು ಅದೇ ನನಗೆ ಜೀವಜಲ. ನನ್ನ ಮನೆಯ ಬೀರು ತೆಗೆದು ನೋಡು; ಲಂಚ್ ಗೆ ರೆಡ್ ವೈನ್, ಡಿನ್ನರ್ ಗೆ ಓಡ್ಕ.. ಅದು ರಕ್ತದೊಡನೆ ಸೇರಿದ ಹೊತ್ತು ನಾನೀ ಕಾಂಕ್ರೀಟ್ ಕಾಡಿನಲ್ಲಿರುವುದಿಲ್ಲ. ಮಲೆನಾಡಿನ ದಟ್ಟ ಕಾಡಿನ ನಡುವಿನ ಸುರಗಿ ಮರದ ಅಡಿಯಲ್ಲಿ ನಿಂತಿರುತ್ತೇನೆ. ತೊಟ್ಟಿದ್ದ ಲಂಗವನ್ನು ಎರಡೂ ಕೈಯ್ಯಲ್ಲಿ ಜೊಂಪೆಯಾಗಿ ಹಿಡಿದಿರುತ್ತೇನೆ. ನೀನು ಮರದ ಮೇಲಿನಿಂದ ಹೂಗಳನ್ನು ಬಿಡಿಸಿ ನನ್ನ ಲಂಗದೊಳಗೆ ಹಾಕುತ್ತಿ. ಆಮೇಲೆ ನಾವಿಬ್ಬರೂ ಸೇರಿ ಅದನ್ನು ಮಾಲೆ ಮಾಡುತ್ತೇವೆ. ಒಂದು ಮಾಲೆಯನ್ನು ದೇವರಿಗೆಂದು ತೆಗೆದಿರಿಸುತ್ತೇನೆ. ಇನ್ನೊಂದನ್ನು ನೀನು ನನಗೆ ಮುಡಿಸುತ್ತಿ. ಅದರ ಪರಿಮಳದ ಮತ್ತಿನಲ್ಲಿ ನಾನು ನಿನ್ನ ಭುಜಕ್ಕೊರಗಿ ನಿದ್ರಿಸುತ್ತೇನೆ........ಬೆಳಿಗ್ಗೆ ಎದ್ದಾಗ ಮನಸ್ಸು ಹಗುರವಾಗಿರುತ್ತದೆ. ಆಪೀಸಿನಲ್ಲಿ ಲವಲವಿಕೆಯಿಂದ ಕಾರ್ಯ ನಿರ್ವಹಿಸುತ್ತೇನೆ...ಇದು ನನ್ನ ದಿನಚರಿ. ಕೊನೆ ಉಸಿರಿರುವ ತನಕ ಇದೇ. ನಿನ್ನನ್ನು ನಂಬಿಸುವ ಇರಾದೆ ನನ್ನಲಿಲ್ಲ. ಆದರೂ ಹೇಳುತ್ತಿದ್ದೇನೆ; ನಿನ್ನ ಮೇಲಿನ ನನ್ನ ಪ್ರೀತಿಗೆ ಪಾಲುದಾರರಿಲ್ಲ. ಅದಕ್ಕೆ ನೀನು ಮಾತ್ರ, ಕೇವಲ ನೀನು ಮಾತ್ರ ಹಕ್ಕುದಾರ..

ಬಾಗಿದರೆ ಹಿಮಾಲಯದೆದುರು ಬಾಗಬೇಕು. ಸೋತರೆ ಕಡಲಿನೆದುರು ಸೋಲಬೇಕು. ಒಂದಾಗಿ ಬೆರೆತರೆ ಆಕಾಶದ ಅನಂತತೆಯಲ್ಲಿ ಕರಗಬೇಕು ಎಂಬುದು ನನ್ನ ಹದಿಹರೆಯದ ಕನಸು. ನನ್ನ ಪಾಲಿಗೆ ನೀನು ಇದೆಲ್ಲವೂ ಆಗಿ ಬಂದೆ. ಆದರೂ ಭ್ರಮೆಯಾಗಿ ಉಳಿದೆ. ಯಾಕೆ ಹೀಗಾಯ್ತು? ನಾನು ಎಲ್ಲಿ ತಪ್ಪಿದೆ? ನೀನು ಎಲ್ಲಿ ಸಂದೇಹಿಸಿದೆ? ಕೊನೆಗೂ ಎಲ್ಲವೂ ಪ್ರಶ್ನೆಗಳಾಗಿ ಉಳಿದವು...!

ಮೊನ್ನೆ ಊರಿಗೆ ಹೋದಾಗ ನೋಡಿದೆ; ಸುರಗಿ ಮರವಿದ್ದ ಕಾಡು ಈಗ ರಬ್ಬರ್ ತೋಟವಾಗಿದೆ. ನಾವು ಈಜು ಕಲಿತ ಉಪ್ಪಂಗಳ ಹೊಳೆ ಬತ್ತಿ ಹೋಗಿದೆ. ಭೂಮಿ ತೂಕದ ಹಕ್ಕಿಗೆ ಗೂಡು ಕಟ್ಟಲು ಪೊದೆಗಳೇ ಇಲ್ಲ. ಹುಡುಕಿದರೂ ಕೇದಗೆ ಹೂ ಸಿಗಲಿಲ್ಲ...
ಏನಿಲ್ಲದಿದ್ದರೂ ಏನಂತೆ.?..ನನ್ನೊಳಗೆ ಇವೆಲ್ಲಾ ಸದಾ ಹಸಿರು...!



[ ನಿಯತಕಾಲಿಕವೊಂದರ ಅಂಕಣವೊಂದರಲ್ಲಿ  ನಾನು ಬರೆಯುತ್ತಿದ್ದ ಪ್ರೇಮ ಪತ್ರದಲ್ಲಿ ಇದೂ ಒಂದು. ಅಲ್ಲಿ ನಾನು ಅನಾಮಧೇಯಳು..!]

Tuesday, December 25, 2012

...... ಪುರುಷತ್ವ ಹರಣದ ಶಿಕ್ಷೆಯೇ ಬೇಕು.



·         ಅಧಿಕಾರ ರಾಜಕಾರಣದ ಶಕ್ತಿ ಕೇಂದ್ರವಾದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ಯಾರ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅತ್ಯಂತ ಧಾರುಣವಾಗಿ ಸಾಮೂಹಿಕ ಅತ್ಯಚಾರ ನಡೆಯಿತು. ಆಕೆಯ ದೇಹದ ಮೇಲೆ ಮೃಗೀಯವಾಗಿ ವರ್ತಿಸಿದ ಪುರುಷಪುಂಗವರ ಆಟಾಟೋಪವನ್ನು ಮಾಧ್ಯಮಗಳಲ್ಲಿ ಓದಿದಾಗ, ನೋಡಿದಾಗ, ಕೇಳಿದಾಗ ನನಗೆ ತಕ್ಷಣಕ್ಕೆ ಅನ್ನಿಸಿದ್ದು ಅವರಿಗೆ ಅತ್ಯುಗ್ರವಾದ ಶಿಕ್ಷೆ ನೀಡಬೇಕೆಂದು. ಹಾಗಾಗಿ ನನ್ನ ಪೇಸ್ ಬುಕ್ ಅಕೌಂಟ್ ನಲ್ಲಿ ನಾನು ಹೀಗೆ ಬರೆದೆ;
·          
·         ”ದೆಹಲಿಯಲ್ಲಿ ವಿದ್ಯಾರ್ಥಿಯೊಬ್ಬಳನ್ನು ಚಲಿಸುತ್ತಿದ್ದ ಬಸ್ಸಿನಲ್ಲಿ ಧಾರುಣವಾಗಿ ಗ್ಯಾಂಗ್ ರೇಪ್ ಮಾಡಿದ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ...
ಆದರೆ.. ಸಾಮೂಹಿಕ ಅತ್ಯಾಚಾರಿಗಳಿಗೆ ಕೊಡುವ ಅತ್ಯುಗ್ರ ಶಿಕ್ಷೆಯೆಂದರೆ ಅವರ ಪುರುಷತ್ವ ಹರಣವಾಗಬೇಕು. ಅವರ ಆಯುಧವನ್ನು ನಿಷ್ಕ್ರೀಯಗೊಳಿಸಬೇಕು; ಅವರು ಬದುಕಬೇಕು; ಬದುಕಿಯೂ ಸತ್ತಂತಿರಬೇಕು; ಪ್ರತಿ ಕ್ಷಣವೂ ಅವರ ಸಾವು ಜಗಜ್ಜಾಹೀರಾಗುತ್ತಲಿರಬೇಕು...
·          
·         ಅದಕ್ಕೆ ಬಂದ ಪ್ರತಿಕ್ರಿಯೆಗಳನ್ನು ಹಾಗೂ ಅಂತರ್ಜಾಲದಲ್ಲಿ ಈ ಘಟನೆಗಳಿಗೆ ಸಂಬಂಧಪಟ್ಟ ಸಾರ್ವಜನಿಕ ಅನ್ನಿಸಿಕೆಗಳನ್ನು ಗಮನಿಸಿದಾಗ ನನಗನ್ನಿಸಿದ್ದು ಪುರುಷರ ಮತ್ತು ಮಹಿಳೆಯರ ಅಭಿವ್ಯಕ್ತಿಯಲ್ಲಿನ ಭಾಷಾ ಬಳಕೆಯ ವ್ಯತ್ಯಾಸ.

ಮಹಿಳೆಯೊಬ್ಬಳ ಮೇಲೆ ಲೈಂಗಿಕ ಅತ್ಯಚಾರ ನಡೆದಾಗ ಪುರುಷರಂತೆ ಯೋಚಿಸುವ ಮಹಿಳೆಯರನ್ನೂ ಒಳಗೊಂಡಂತೆ, ಇಡೀ ಪುರುಷ ಜಗತ್ತು ಅದನ್ನು ಬಣ್ಣಿಸುವುದು ’ಶೀಲ ಕಳೆದುಕೊಳ್ಳುವುದು’ ಆದರೆ ಸ್ತ್ರೀ ಮನಸ್ಸು ಗ್ರಹಿಸುವುದು ’ಬದುಕು ಕಳೆದುಕೊಳ್ಳುವುದು’ ಗಂಡಿನ ದೃಷ್ಟಿಯಲ್ಲಿ ಕಳೆದುಕೊಂಡದ್ದನ್ನು ಮತ್ತೆ ಪಡೆಯಲಾಗದು. ಆದರೆ ಹೆಣ್ಣಿನ ದೃಷ್ಟಿಯಲ್ಲಿ ಮತ್ತೆ ಬದುಕನ್ನು ಕಟ್ಟಿಕೊಳ್ಳಬಹುದು.

ಕಳೆದ ಭಾನುವಾರ ರಾತ್ರಿ ಕಾಮಾಂಧರ ಪೈಶಾಚಿಕ ಕ್ರೌಯಕ್ಕೆ ತುತ್ತಾಗಿ ಜೀವಚ್ಛವವಾಗಿ ಸಪ್ತರ್ ಜಂಗ್ ಆಸ್ಪತ್ರೆಯಲ್ಲಿ ಮಲಗಿರುವ ಆ ವಿದ್ಯಾರ್ಥಿನಿ ಮತ್ತೆ ಬದುಕಿನ ಬಗ್ಗೆ ಆಶಾವಾದಿಯಾಗಲು ಕಾರಣವೇ ಆಕೆಯಲ್ಲಿನ ”ಬದುಕನ್ನು ಕಟ್ಟಿಕೊಳ್ಳುವ’ ಛಲ. ಶನಿವಾರ ಆಸ್ಪತ್ರೆಯ ವೈದ್ಯಾಧಿಕಾರಿಗಳು ಆಕೆಯ ದೈಹಿಕ ಮತ್ತು ಮಾನಸಿಕ ಸ್ಥಿತಿಯ ಬಗ್ಗೆ ಪತ್ರಿಕಾ ಗೋಷ್ಟಿಯಲ್ಲಿ ವಿವರಿಸಿದ್ದರು. ಆಕೆಯ ಮಾನಸಿಕ ಸ್ಥಿಮಿತ ಮತ್ತು ಜೀವನ ಪ್ರೀತಿಗೆ ಅಚ್ಚರಿ ವ್ಯಕ್ತಪಡಿಸಿದ್ದರು.  
ನಮಗೆ ಗೊತ್ತಿದೆ; ಅತ್ಯಾಚಾರ ಪ್ರಕರಣಗಳಲ್ಲಿ ಅದು ಬಲತ್ಕಾರದ ದೈಹಿಕ ಸಂಪರ್ಕವೋ ಅಥವಾ ಒಪ್ಪಿತ ಲೈಂಗಿಕ ಕ್ರಿಯೆಯೋ ಎಂದು ನಿರ್ಧರಿಸುವುದು ಕಷ್ಟ ಸಾಧ್ಯ. ಹಾಗಾಗಿ ಅದರ ವಿಚಾರಣೆಯ ಪ್ರಕ್ರಿಯೆ ದೀರ್ಘವಾಗಿರುತ್ತದೆ. ಆದರೆ ಸಾಮೂಹಿಕ ಅತ್ಯಾಚಾರದಲ್ಲಿ ಘಟನೆ ಸ್ಪಷ್ಟವಿರುತ್ತದೆ. ಅಲ್ಲಿ ನಿಸ್ಸಂದೇಹವಾಗಿ ಹೆಣ್ಣು ಬಲಿಪಶುವಾಗಿರುತ್ತಾಳೆ. ಅಲ್ಲೊಂದು ಮೃಗೀಯ ವರ್ತನೆ ನಡೆದಿರುತ್ತದೆ.

ಪುರುಷಪುಂಗವನೆಂದು ತನ್ನನ್ನು ತಾನು ಹೆಮ್ಮೆಯಿಂದ ಕರೆದುಕೊಳ್ಳುವ ಗಂಡಸಿನ ಆಯುಧವೇ ’ಅದು’. ಅದೇ ಇಲ್ಲದಿದ್ದರೆ ಅವನೊಂದು ಹುಳು.ಕಾಲಲ್ಲಿ ಹೊಸಕಿ ಹಾಕಬಹುದಾದ ಜಂತು.ಸೆಕ್ಸ್ ವಿಚಾರದಲ್ಲಿ ಆತನಿಗೆ ವಿವೇಚನೆಯಿಲ್ಲ. ಕಂಡಲ್ಲಿ ನುಗ್ಗುವ ಗೂಳಿ ಅವನು.ಹೆಣ್ಣು ಸಿಗದಿದ್ದರೆ ಅವನಿಗೆ ಇನ್ನೊಂದು ಗಂಡೂ ಆದೀತು..ಕೊನೆಗೆ ಪ್ರಾಣಿಯಾದರೂ ಓಕೆ.

ಒಂದು ವಾರದಿಂದ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದರ ತೃಣಮಾತ್ರವೂ ಅರಿವಿಲ್ಲದಂತೆ ತ್ರಿಪುರದ ಬಿಸ್ಲಾಗಾರದಲ್ಲಿ  ಬುಧವಾರ ರಾತ್ರಿ ಮಹಿಳೆಯೊಬ್ಬಳನ್ನು ಮನೆಯಿಂದ ಹೊರಗೆಳೆದು ತಂದು ಸಾರ್ವಜನಿಕರೇ ಎದುರೇ ಸಾಮೂಹಿಕ ಅತ್ಯಚಾರ ನಡೆಸಿ,ಅನಂತರ ಆಕೆಯನ್ನು ಮರಕ್ಕೆ ಕಟ್ಟಿಹಾಕಿ, ಮತ್ತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇಂತಹ ಅನಾಗರಿಕ ವರ್ತನೆಗೆ ಸಾರ್ವಜನಿಕರೂ ಸಾಕ್ಷಿಯಾಗಿದ್ದಾರೆ ಎಂದರೆ ಆ ಮನಸ್ಥಿತಿ ಹೇಗೆ ರೂಪುಗೊಂಡಿರಬಹುದು?

ನಾನು ಮತ್ತೆ ಮತ್ತೆ ನಂಬುವುದು ’ಪರಿಸರ ವ್ಯಕ್ತಿತ್ವವನ್ನು ರೂಪಿಸುತ್ತದೆ’ ಎಂಬುದನ್ನು. ನಾವು ನಮ್ಮ ಮಕ್ಕಳನ್ನು ಅವರ ಹದಿಹರೆಯದ ತನಕ ಯಾವ ಪರಿಸರದಲ್ಲಿ, ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಪೋಷಕರು ಸ್ವತಃ ಮಾದರಿಯಾಗಿರದಿದ್ದಲ್ಲಿ ಮಕ್ಕಳಲ್ಲಿ ಆರೋಗ್ಯವಂತ ಮನಸ್ಸು ರೂಪುಗೊಳ್ಳಲು ಸಾಧ್ಯವಿಲ್ಲ. ಮಕ್ಕಳು ಬಹುಬೇಗನೆ ಎಲ್ಲವನ್ನೂ ಗ್ರಹಿಸಿಕೊಳ್ಳುತ್ತಾರೆ. ತಮ್ಮ ಮನೆಯ ಹೆಣ್ಣುಮಕ್ಕಳಿಗೆ ಸ್ವಾಭಿಮಾನದ ಜೊತೆಗೆ ಸ್ವರಕ್ಷಣೆಯ ಕಲೆಯನ್ನು ಸಂದರ್ಭಕ್ಕನುಗುಣವಾಗಿ ಹೇಳಿಕೊಡಬೇಕು. ಹಾಗೆಯೇ ಗಂಡು ಮಕ್ಕಳಿಗೂ ಸ್ತ್ರೀಯರನ್ನು ಗೌರವದಿಂದ ಕಾಣುವುದನ್ನು ಅವರಿಗೆ ಅರಿವಿಲ್ಲದಂತೆ ಮನಗಾಣಿಸುತ್ತಿರಬೇಕು. ಯಾಕೆಂದರೆ ಪುರುಷ ಪ್ರಧಾನ ಯೋಚನೆಯನ್ನು ಅಷ್ಟು ಸುಲಭದಲ್ಲಿ ಬದಲಾಯಿಸುವುದು ಸಾಧ್ಯವಿಲ್ಲ.

ನನಗೀಗಲೂ ನೆನಪಿದೆ. ನನ್ನ ಮಗನೊಮ್ಮೆ ಮಾತಿನ ಮಧ್ಯೆ ”ಹೆಂಗಸು’ ಎಂಬ ಪದವನ್ನು ಉಪಯೋಗಿಸಿದ. ನನಗೆ ಆ ಪದವನ್ನು ಕೇಳಿದರಾಗದು. ನಾನು ಎಂದೂ ಆ ಪದವನ್ನು ಉಪಯೋಗಿಸುವುದಿಲ್ಲ. ಹೆಂಗಸು ಅಂದರೆ ಹೆಣ್ಣು ಕೂಸು. ಹೆರುವವಳು ಎಂಬ ಅರ್ಥ ಅದರಿಂದ ಸ್ಫುರಿಸುತ್ತದೆಯೆಂಬುದು ನನ್ನ ಭಾವನೆ., ಮಹಿಳೆಯ ಅಸ್ತಿತ್ವವನ್ನು ಅದು ಸೀಮಿತಗೊಳಿಸುತ್ತದೆಯೆಂಬುದು ನನ್ನ ಗ್ರಹಿಕೆ. ನನ್ನನ್ನು ಯಾರಾದರೂ ’ಆಯಮ್ಮ’ ಎಂದು ಸಂಭೋದಿಸಿದರೆ ನನ್ನ ಸಿಟ್ಟು ನೆತ್ತಿಗೇರುತ್ತದೆ!  ನನ್ನ ಮಗನಿನ್ನೂ ತುಂಬಾ ಚಿಕ್ಕವನು, ಆದರೂ ನಾನವನಿಗೆ ಹೇಳಿದೆ ’ಹೆಂಗಸು ಅನ್ನಬಾರದು, ಮಹಿಳೆ ಅನ್ನು’ ಅಂತ ಆಮೇಲೆ ನಾನದನ್ನು ಮರೆತು ಬಿಟೆ. ಆದರೆ ಒಂದೆರಡು ವರ್ಷಗಳ ಹಿಂದೆ ನಾನೇ ಬಾಯಿತಪ್ಪಿ ’ಆ ಹೆಂಗಸು..’ ಅಂದುಬಿಟ್ಟೆ. ಆಗ ಅಲ್ಲೇ ಇದ್ದ ನನ್ನ ಮಗ ’ ಅಮ್ಮಾ ಗೌರವ..ಮಹಿಳೆ ಅನ್ನು’ ಅಂದುಬಿಟ್ಟ..ನಾನು ಒಂದು ಕ್ಷಣ ಅವಕ್ಕಾಗಿ ನಿಂತು ಬಿಟ್ಟೆ!

ಶನಿವಾರ ಟೈಮ್ಸ್ ನೌ ಚಾನಲ್ಲಿನ ವರದಿಗಾರರೊಬ್ಬರು ತಮ್ಮ ಲೈವ್ ವರಧಿಯಲ್ಲಿ ಹೇಳುತ್ತಿದ್ದರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಕಾರರ ಸರಾಸರಿ ವಯಸ್ಸು ೨೨. ಅಂದರೆ ಅದು ಲೈಂಗಿಕ ಪರ್ವಕಾಲ. ಶರೀರದಲ್ಲಿ ಲೈಂಗಿಕ ಹಾರ್ಮೋನ್ ಗಳು ಅತ್ಯಧಿಕವಾಗಿ ಸ್ರವಿಸುವ ಕಾಲಘಟ್ಟ.ಆದರೂ ಮನುಷ್ಯನ ಮೂಲಭೂತ ಅವಶ್ಯಕತೆಯಲ್ಲಿ ಒಂದಾದ ಸೆಕ್ಸ್ ಅನ್ನು ನಿಯಂತ್ರಣ್ದಲ್ಲಿ ಇಟ್ಟುಕೊಳ್ಳಲು ಇವರಿಗೆಲ್ಲಾ ಹೇಗೆ ಸಾಧ್ಯವಾಯಿತು? ಅದು ಸಂಸ್ಕಾರದಿಂದ, ಶಿಕ್ಷಣದಿಂದ, ವೈಯಕ್ತಿಕ ಬದುಕಿನಲ್ಲಿ ನೈತಿಕ ಮೊಲ್ಯಗಳನ್ನು ಅಳವಡಿಕೊಂಡಿರುವುದರಿಂದ ಸಾಧ್ಯವಾಗಿದೆ. ಅಲ್ಲಿ ಅವರೆಲ್ಲಾ ಸೇರಿ ಸಮಾಜಮುಖಿ ಹೋರಾಟವೊಂದರಲ್ಲಿ ತೊಡಗಿಕೊಂಡಿರುವುದನ್ನು ನೋಡಿದಾಗ ಭವಿಷ್ಯದ ಬಗ್ಗೆ ಆಶಾವಾದ ಮೂಡುತ್ತದೆ. ಇಂತಹ ಮನಸ್ಸುಗಳು ರಾಜಕೀಯಕ್ಕೆ ಬರಬೇಕು; ಕಾನೂನು ರಚನೆಯಲ್ಲಿ ಭಾಗಿಯಾಗಬೇಕು.ಆರೋಗ್ಯವಂತ ಸಮಾಜವನ್ನು ಕಟ್ಟಬೇಕು. ಆದರೆ ಅದು ಸಾಧ್ಯವೇ?

ನಮ್ಮ ಕೆಲವು ಜನಪ್ರತಿನಿಧಿಗಳನ್ನು ನೋಡಿದರೆ ಕಾನೂನನ್ನು ರೂಪಿಸುವವರೇ ಕಾನೂನನ್ನು ಉಲ್ಲಂಘಿಸುವವರೂ ಆಗಿರುತ್ತಾರೆ ಎಂಬುದು ಗೊತ್ತಾಗುತ್ತದೆ. ಇದರ ಜೊತೆಗೆ ಕೆಲವರು ರೇಪ್ ಪ್ರಕರಣಗಳಲ್ಲಿ ಆರೋಪಿಗಳೂ ಆಗಿರುತ್ತಾರೆ. ವಯ್ಯಕ್ತಿಕ ಬದುಕಿನಲ್ಲಿ ಹಲವಾರು ಮಹಿಳೆಯರೊಡನೆ ಸಂಬಂಧವಿಟ್ಟುಕೊಂಡವರೂ ಆಗಿರುತ್ತಾರೆ. ಇದರ ಜೊತೆಗೆ ಮೀಡಿಯಾಗಳು, ಸಿನೇಮಾಗಳು,ಜಾಹೀರಾತುಗಳು ಹೆಣ್ಣನು ಭೋಗದ ವಸ್ತುಗಳಾಗಿ, ಮಾರುಕಟ್ಟೆಯ ಸರಕುಗಳಾಗಿ ಕಾಣುತ್ತವೆ. ಹೆಣ್ಣಿನ ಕೊಬ್ಬು ಇಳಿಸಬೇಕಾದರೆ ಆಕೆಯ ಮೇಲೆ ಅತ್ಯಚಾರ ಮಾಡಬೇಕೆಂಬುದು ಸಿನೇಮಾರಂಗ ಒಪ್ಪಿಕೊಂಡ ಮೌಲ್ಯಗಳಲ್ಲಿ ಒಂದು. ನನಗೆ ಈಗಲೂ ನೆನಪಿದೆ. ಬಹುಶಃ ಅದು ಸುನಿಲ್ ಕುಮಾರ್ ದೇಸಾಯಿ ನಿರ್ದೇಶಿಸಿದ ಸಿನೇಮಾವಿರಬೇಕು. ಒಂದು ಬ್ಯಾಂಕ್ ದರೋಡೆ ನಡೆಯುತ್ತದೆ. ಬ್ಯಾಂಕಿನೊಳಗಿದ್ದ ಸುಮನ್ ನಗರ್ ಕರ್ ಅದನ್ನು ಪ್ರತಿಭಟಿಸುತ್ತಾಳೆ.”ಅವಳ ಕೊಬ್ಬು ಇಳಿಸು’ ಎಂದು ಖಳ ನಾಯಕ ತನ್ನ ಸಹಚರನಿಗೆ ಹೇಳುತ್ತಾನೆ. ಆಗ ದಡಿಯನೊಬ್ಬ ಎಲ್ಲರ ಎದುರಿನಲ್ಲೇ ಅವಳ ಮೇಲೆ ಅತ್ಯಚಾರ ಎಸಗುತ್ತಾನೆ. ನನ್ನ ದೃಷ್ಟಿಯಲ್ಲಿ ಹೆಣ್ಣನ್ನು ಶೋಷಣೆ ಮಾಡುತ್ತಿರುವವರಲ್ಲಿ ಚಿತ್ರರಂಗ ಮತ್ತು ಮೀಡಿಯಾಗಳು ಮೊದಲ ಸಾಲಿನಲ್ಲಿ ಬರುತ್ತವೆ. ಹೆಣ್ಣನ್ನು ಸೂಕ್ಷ್ಮಸಂವೇದನೆಯಿಂದ ಕಾಣುವ ಮಾಧ್ಯಮವಿದ್ದರೆ ಅದು ರಂಗಭೂಮಿ ಮಾತ್ರ. ಅತ್ಯಾಚಾರಕ್ಕೆ ಒಳಗಾಗದ ಮಹಿಳೆಯೊಬ್ಬಳು ಆತನ ಮರ್ಮಾಂಗವನ್ನು ಕತ್ತರಿಸಿ ಸೇಡು ತೀರಿಕೊಳ್ಳವ ವಸ್ತುವುಳ್ಳ ’ಪುರುಷ’ ನಾಟ್ಕವನ್ನು ಕೆಲವು ತಿಂಗಳುಗಳ ಹೀದೆ ನಾನು ಬೆಂಗಳೂರಿನ ಕಲಾಕ್ಷೇತ್ರದಲ್ಲಿ ನೋಡಿದ್ದೆ. ಇದು ಸಮಕಾಲೀನ ಸಮಸ್ಯೆಯೊಂದಕ್ಕೆ ಕಲಾ ಮಾಧ್ಯಮವೊಂದು ಪ್ರತಿಕ್ರಿಯಿಸಿದ ರೀತಿ. ಆ ರೀತಿಯ ಗುಣಾತ್ಮಕವಾದ ಪ್ರತಿಕ್ರಿಯೆಯನ್ನು ನಾವು ಮಾಧ್ಯಮದಿಂದ ನಿರೀಕ್ಷಿಸುತ್ತೇವೆ.

ಪ್ರತಿ ಮಹಿಳೆಯೂ ಒಂದಲ್ಲ ಒಂದು ರೀತಿಯಲ್ಲಿ ಲೈಂಗಿಕ ಅತ್ಯಚಾರಕ್ಕೆ ಒಳಗಾಗಿಯೇ ಆಗಿರುತ್ತಾಳೆ. ಅದು ಮಾನಸಿಕವಾಗಿ ಆಗಿರಬಹುದು, ಇಲ್ಲವೇ ದೈಹಿಕವಾಗಿ ಆಗಿರಬಹುದು. ಅದು ಕುಟುಂಬದ ಒಳಗೇ ಆಗಿರಬಹುದು ಅಥವ ಹೊರಗೇ ಅಗಿರಬಹುದು. ಆದರೆ ಆಕೆ ಲೈಂಗಿಕ ಆಟಿಕೆಯಾಗಿರುವುದು ಸತ್ಯ. ಅದನ್ನು ನಾವು ಬಹಿರಂಗವಾಗಿ ಹೇಳಿಕೊಳ್ಳಲಾರೆವು. ಒಂದು ವೇಳೆ ಯಾರದರೂ ಅದನ್ನು ಹೇಳಿಕೊಳ್ಳುವ ದೈರ್ಯ ಮಾಡಿದರೆ ಆಕೆಯನ್ನು ಸಮಾಜ ನೋಡುವ ದೃಷ್ಟಿಯೇ ಬದಲಾಗುತ್ತದೆ. ಆಗ ನಡೆಯುವುದೇ ನಿಜವಾದ ಅತ್ಯಚಾರವಾಗುತ್ತದೆ. ಹಾಗಾಗಿ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬರುವುದೇ ಇಲ್ಲ. ಅಲ್ಲಿ ಕ್ರೌರ್ಯ ಇತ್ತೋ ಇಲ್ಲವೋ ಗೊತ್ತಾಗುವುದಿಲ್ಲ. ಆದರೆ ಲೈಂಗಿಕ ಲಾಲಸೆಯೇ ಪರಾಕಾಷ್ಠೆಯಲ್ಲಿರುತ್ತದೆ ಎಂಬುದು ಸತ್ಯ. ಹಾಗಾಗಿ ಪುಟ್ಟ ಕಂದಮ್ಮಗಳ ಮೇಲೂ, ಇಳಿ ವಯಸ್ಸಿನವರ ಮೇಲೂ ಅತ್ಯಚಾರ ನಡೆಯುತ್ತದೆ. ಆದರೆ ಸಾಮೂಹಿಕ ಅತ್ಯಚಾರ ನಡೆದಾಗ ಅಲ್ಲಿ ವಿಜೃಂಭಿಸುವುದೇ ಕೌರ್ಯ. ಹಾಗಾಗಿ ಅಲ್ಲಿ ಮೃಗೀಯ ವರ್ತನೆಯಿರುತ್ತದೆ. ತಾವು ಧಾಳಿ ಮಾಡುತ್ತಿರುವುದು ಒಂದು ಜೀವಂತ ಹೆಣ್ಣಿನ ದೇಹದ ಮೇಲೆ, ಅದರಲ್ಲಿಯೂ ಮಿಡಿತವಿದೆ ಎಂಬುದನ್ನವರು ಮರೆತುಬಿಡುತ್ತಾರೆ. ಹಾಗಿಯೇ ಅವಳನ್ನು ಸಾರ್ವಜನಿಕವಾಗಿ ಬೆತ್ತಲೆ ಮಾಡುತ್ತಾರೆ, ಅವಳ ಜನನೇಂದ್ರಿಯಕ್ಕೆ ಕಬ್ಬಿಣದ ಸಲಾಕೆಯನ್ನು ತೂರಿಸುತ್ತಾರೆ. ಹಿಂದೊಮ್ಮೆ ಅಲ್ಲಿಂದಲೇ ತಾವು ಮಾಂಸದ ಮುದ್ದೆಯಂತೆ ಈ ಜಗತ್ತಿಗೆ ಅವತರಿಸಿದ್ದೆವು ಎಂಬುದನ್ನು ಅವರಿಗೆ ತಿಳಿಸಿ ಹೇಳುವವರು ಯಾರು? ಪುರುಷಪ್ರಧಾನವಾದ, ಪುರುಷ ಮನಸ್ಥಿತಿಯ ಪೋಲಿಸ್ ಇಲಾಖೆಯಲ್ಲಿ ಈ ಕಾರ್ಯಕ್ಕೆ ಲಾಠಿಯ ಬಳಕೆಯಾಗುತ್ತದೆ ಅಷ್ಟೇ. ಕ್ರಿಮಿನಲ್ ಕೇಸ್ ಗಳಲ್ಲಿ ಪೋಲಿಸ್ ಠಾಣೆಯಲ್ಲಿ ಅತೀಥ್ಯ ಪಡೆದು ಬಂದ ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆತ್ಮೀಯವಾಗಿ ಮಾತಾಡಿಸಿ ನೋಡಿ, ಭೀಕರ ಸತ್ಯಗಳು ಹೊರಬರುತ್ತವೆ!.

ಆದರೆ ಲೈಂಗಿಕ ತಜ್ನರು ಹೇಳುವ ಸತ್ಯ ಬೇರೆಯದೇ ಆಗಿರುತ್ತದೆ. ಅವರು ಹೇಳುತ್ತಾರೆ. ಪುರಷನಿಗಿಂತಲೂ ಸ್ತ್ರೀಯ ಲೈಂಗಿಕ ಕಾಮನೆಗಳು ದುಪ್ಪಟ್ಟಾಗಿರುತ್ತವೆ. ಓಶೋ ತಮ್ಮ ’ಸ್ತ್ರೀ’ ಪುಸ್ತಕದಲ್ಲಿ ಇದಕ್ಕೆ ಸಮರ್ಥನೆಗಳನ್ನು ನೀಡುತ್ತರೆ. ಇದಕ್ಕೆ ವರ್ತಮಾನದಲ್ಲಿ ಪುರಾವೆಗಳು ಸಿಗುತ್ತವೆ. ಒಬ್ಬಳು ವೇಶ್ಯ ದಿನವೊಂದರಲ್ಲಿ ಹತ್ತು ಗಿರಾಕಿಗಳನ್ನಾದರೂ ತೃಪ್ತಿ ಪಡಿಸಬಲ್ಲಳು. ಆದರೆ ಒಬ್ಬ ಗಂಡಸು ಎಷ್ಟು ಜನರನ್ನು ಹಾಸಿಗೆಯಲ್ಲಿ ಗೆಲ್ಲಬಲ್ಲ ಹೇಳಿ? ಆಗ ಅವನಿಗೆ ನೆನಪಾಗುವುದೇ  ರಾಡ್, ಲಾಠಿಗಳು...

ಮೊನ್ನೆ ನನ್ನ ಸ್ನೇಹಿತರೊಬ್ಬರೊಡನೆ ದೆಹಲಿ ಘಟನೆ ಬಗ್ಗೆ ಮಾತಾಡುತ್ತಿದ್ದೆ. ಮಾತಿನ ಮಧ್ಯೆ ಅವರಲ್ಲಿ ಹೇಳಿದೆ. ನೀವು ಗಂಡಸರು ಮಾಡಿದ ಹಾಗೆ ಹುಡುಗಿಯರು ಕೂಡಾ ಮಾಡಿದರೆ ಹೇಗಿರುತ್ತೆ ಸ್ವಲ್ಪ ಕಲ್ಪ್ಪಿಸಿಕೊಳ್ಳಿ; ಒಂದು ಆರೇಳು ಹುಡುಗಿಯರು ಹುಡುಗನೊಭ್ಭನನ್ನು ಅಪಹರಿಸಿ ಅವನ ಬಾಯಿಗೆ ಒಂದೆರಡು ವಯಾಗ್ರ ಮಾತ್ರೆ ತುರುಕಿಸಿ ಅವನನ್ನು ಕಬ್ಬಿನ ರಸ ಹೀರಿದಂತೆ ಹೀರಿ ಬಿಟ್ಟರೆ ಹೇಗಿರುತ್ತೆ? ಎಂದೆ. ಬಿಟ್ಟ ಬಾಯಿ ಬಿಟ್ಟಂತೆ ನಿಂತ ಅವರನ್ನು ನಾನು ಮೈ ಮುಟ್ಟಿ ಎಚ್ಚರಿಸಬೇಕಾಯ್ತು. ವಿದೇಶದಲ್ಲಿ ಎಲ್ಲಿಯೋ ಒಂದು ಪ್ರಕರಣ ಈ ರೀತಿ ನಡೆದದ್ದು ವರದಿಯಾಗಿದ್ದು ಬಿಟ್ಟರೆ ಇನ್ನೆಲ್ಲೂ ನಡೆದಂತಿಲ್ಲ. ಆದ್ರೆ ಮುಂದೆ ನಡೆಯಲಾರದು ಎಂದು ಹೇಳುವುದು ಹೇಗೆ?.ಹಾಗಾಗಿ ನನ್ನ ಪುರುಷ ಸಂಗಾತಿಗಳಲ್ಲಿ ಕೇಳಿಕೊಳ್ಳುವುದಿಷ್ಟೇ; ನಿಮ್ಮ ಉಳಿವಿಗಾಗಿಯಾದರೂ ನಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳಿ.........

  [ ಅವಧಿ ವೆಬ್ ಸೈಟ್ ನಲ್ಲಿ ಪ್ರಕಟವಾದ ಲೇಖನ ]




·          
·          

Saturday, December 15, 2012

ನಾವು ಯಾರಿಗಾದರೂ ಸಿಗುತ್ತಿರಲೇ ಬೇಕು ಗೆಳೆಯಾ...

ಪ್ರೇಮದ ವಿಷಯದಲ್ಲಿ ನಾವು ಇನ್ನೊಬ್ಬರ ’ಆಯ್ಕೆ’ ಆಗಿರಬೇಕು ಎಂಬುದು ನನ್ನ ಆಸೆ ಮತ್ತು ನಂಬಿಕೆ. ಆಗ ನಾವು ಸದಾ ಖುಷಿಯಾಗಿರುತ್ತೇವೆ. ಯಾಕೆಂದರೆ ನಮ್ಮ ’ಅಹಂ’ ಈ ಮೂಲಕ ವಿಜೃಂಭಿಸುತ್ತಲೇ ತಣಿಯುತ್ತಿರುತ್ತದೆ.

ಶರೂ, ನೀನು ನನ್ನ ಆಯ್ಕೆ ಆಗಿಬಿಟ್ಟೆ. ನಾನು ನಿನ್ನ ಆಯ್ಕೆ ಆಗಿದ್ದೇನೆಯೇ ಎಂಬುದನ್ನು ತಿಳಿದುಕೊಳ್ಳಲು ಸತತ ಪ್ರಯತ್ನಪಡುತ್ತಲೇ ಇಷ್ಟು ದೂರ ಸಾಗಿ ಬಂದೆ. ದುರ್ಭಲವಾಗುತ್ತಿರುವ ಮನಸ್ಸನ್ನು ಮತ್ತೆ ಮತ್ತೆ  ಗಟ್ಟಿಗೊಳಿಸುತ್ತಲೇ, ಒಳಗೊಳಗೆ ಟೊಳ್ಳಾಗುತ್ತಿದ್ದೆನೆನೋ ಎಂಬ ಭಯದಲ್ಲಿ ಬದುಕಿಬಿಟ್ಟೆ. ನಾನು ಸೋತು ಹೋಗುತ್ತಿದ್ದೆನೆಯೇ? ಸೋತರೇನಂತೆ ಅದು ಶರುವಿನೆದುರು ತಾನೇ? ಎಂದು ನನ್ನನ್ನು ನಾನು ಸಂತೈಸಿಕೊಳ್ಳಬಹುದು. ಆದರೂ ಸೋಲಿನಲ್ಲೂ ಒಂದು ಘನತೆಯಿರಬೇಕಲ್ಲವೇ?

ಸಮುದ್ರದೆದುರು ಸೋತರೆ ಅದು ನನ್ನ ಕಾಲನ್ನು ಚುಂಬಿಸಿ ನನ್ನ ಸೋಲನ್ನು ಗೌರವಿಸುತ್ತದೆ. ಹಿಮಾಲಯದೆದುರು ಸೋತರೆ ಅದು ಹಿಮಮಣಿಯನ್ನು ಸುರಿಸಿ ನನ್ನ ಕಣ್ಣರೆಪ್ಪೆಗಳನ್ನು ಅಲಂಕರಿಸುತ್ತದೆ. ಆಕಾಶದೆದುರು ಸೋತರೆ ಅದು ಬೆಳದಿಂಗಳ ತಂಪನ್ನೆರೆದು ಕ್ಷೋಭೆಗೊಂಡ ಮನಸ್ಸನ್ನು ಸಂತೈಸುತ್ತದೆ. ಆದರೆ ನಿನ್ನೆದುರು ಸೋಲುತ್ತಿದ್ದೇನೆ ಎಂಬ ಭಾವನೆಯೇ ನನ್ನಲ್ಲಿ ಅಸ್ಥಿರತೆಯನ್ನೂ, ಆತಂಕವನ್ನೂ ಏಕಕಾಲದಲ್ಲಿ ಉಂಟುಮಾಡುತ್ತಿದೆಯಲ್ಲಾ..ಅದೇ ನನಗೆ ಸೋಜಿಗ!.

ನಿನಗ್ಗೊತ್ತಾ ಶರೂ,  ರಾತ್ರಿ ನಿನ್ನ ಕನಸಿನೊಂದಿಗೆ ದಿಂಬಿಗೆ ತೋಳು ಚೆಲ್ಲುತ್ತೇನೆ. ಬೆಳಿಗ್ಗೆ ಏಳುವಾಗಲೂ ಮನಸ್ಸಿನ ತುಂಬಾ ನಿನ್ನದೇ ನೆನಪು. ಹೊತ್ತು ಮೇಲೇರಿದಂತೆಲ್ಲಾ ಕಲ್ಪನಾ ಕುದುರೆಯ ನಾಗಾಲೋಟ. ಕೆಲವೊಮ್ಮೆ ಚಿಕ್ಕಪುಟ್ಟ ಸಂಗತಿಗಳನ್ನೂ ಕೂಡಾ ನಿನ್ನಲ್ಲಿ ಹೇಳಿಕೊಳ್ಳಬೇಕೆಂಬ ತೀವ್ರ ತುಡಿತ. ನಾನು ಇಲ್ಲೇ ಇದ್ದರೂ  ಕುಣಿದು ಕುಪ್ಪಳಿಸುವ ಮನಸ್ಸು ನಿನ್ನ ತೋಳುಗಳಲ್ಲಿ ತೋಳು ಸೇರಿಸಿ ವಾಕಿಂಗ್ ಹೊರಟಿರುತ್ತೆ.

ದೊಡ್ಡ ದೊಡ್ಡ ವಿಚಾರಗಳನ್ನು ಹೇಳಿಕೊಳ್ಳಲಿಕೆ, ಚರ್ಚಿಸಲಿಕ್ಕೆ ಬಹಳಷ್ಟು ಜನ ಸ್ನೇಹಿತರು ಸಿಗುತ್ತಾರೆ. ಆದರೆ ಆ ಕ್ಷಣದ ಖುಷಿಗಳನ್ನು ಅನುಭವಿಸಲು, ಬಿಂದುವಿನಲ್ಲೂ ಸಿಂಧುವನ್ನು ಕಾಣುವವರು ಯಾರೂ ಇಲ್ಲ. ಎಂತಹ ಗಂಭೀರ ವ್ಯಕ್ತಿಗೂ ಕೂಡಾ ಮನಸ್ಸು  ಬಿಚ್ಚಿಕೊಳ್ಳಲೊಂದು ಕಂಫರ್ಟ್ ಝೋನ್ ಬೇಕು; ಅಳಲೊಂದು ಹೆಗಲು ಬೇಕು.ಸಾಂತ್ವನದ ಸ್ಪರ್ಷವೊಂದು ಬೇಕು. ಆದರೆ ಬಹಳಷ್ಟು ಜನರಿಗೆ ಆ ಭಾಗ್ಯ ಇರುವುದಿಲ್ಲ. ನಿನ್ನಿಂದ ಆ ಭಾಗ್ಯ ನನಗೆ ಒಲಿದು ಬರಲಿ ಎಂದು ನನ್ನ ಮನಸ್ಸು ಹಂಬಲಿಸುತ್ತಿತ್ತು. ಆದರೆ ಅದು ನಿಜವಾಗಲಾರದು ಎಂದು ನನಗೆ ಗೊತ್ತಿತ್ತು. ಯಾಕೆ ಗೊತ್ತಾ?

ಭಾವನೆಗಳೇ ಇಲ್ಲದ ಬರಡು ನೆಲ ನೀನು. ನಿನ್ನ ಬಾಹ್ಯ ವ್ಯಕ್ತಿತ್ವವನ್ನು ನೋಡಿ ನಾನು ಮನಸೋತು ಹೋದೆ. ನಿನ್ನ ಹೊರ ವ್ಯಕ್ತಿತ್ವಕ್ಕೆ ಆಂತರಿಕ ಗುಣಗಳನ್ನು ನಾನೇ ಆರೋಪಿಸಿಕೊಂಡೆ. ಆ ಗುಣಗಳನ್ನು ಆರಾಧಿಸತೊಡಗಿದೆ. ನಿನ್ನಲ್ಲಿ ಇಲ್ಲದಿರುವುದನ್ನು ಇದೆ ಎಂದು ಭಾವಿಸತೊಡಗಿದೆ. ಆ ಮೂಲಕ ನೀನು ನನ್ನ ಕಲ್ಪನೆಯಲ್ಲೇ ಬೆಳೆಯುತ್ತಾ...ಬೆಳೆಯುತ್ತಾ..ಪರಿಪೂರ್ಣ ಮಾನವನಾಗುತ್ತಾ ಹೋದೆ.

ನೀನು ಇದ್ದಲಿಯೇ ಇದ್ದೆ. ಹಾಗೆಯೇ ಇದ್ದೆ. ಅದನ್ನು ಒಪ್ಪಿಕೊಳ್ಳುವುದು ನನ್ನ ಮನಸ್ಸಿಗೆ ಕಷ್ಟವಾಗುತ್ತಿತ್ತು. ಜಗತ್ತು ನೋಡುವವರ ಕಣ್ಣಲ್ಲಿದೆ ಎಂಬುದು ನನಗೆ ಗೊತ್ತಿತ್ತು. ಶರಧಿ ಎಂಬ ನೀನು ನನ್ನ ದೃಷ್ಟಿಯಲ್ಲಿ ’ಏನೋ ’ ಆಗಿ ಕಂಡು ಬರುತ್ತಲಿದ್ದೆ.
ನೀನೊಬ್ಬ ನನ್ನವನಾಗುತ್ತಿದ್ದರೆ ನನ್ನ ಬದುಕೆಷ್ಟು ಸುಂದರ ಆಗುತ್ತಿತ್ತು. ’ನನ್ನವನಾಗುವುದು’ ಅನ್ನುತ್ತಿಯಲ್ಲ ಹಾಗೆಂದರೇನು? ಎಂದು ನೀನು ಕೇಳಲೂಬಹುದು. ಅದು ನನ್ನೊಳಗಿನ ಭಾವನೆ ಅಷ್ಟೇ. ಅದಕ್ಕೆ ಪುಷ್ಟಿ ಹೊರಜಗತ್ತಿನಿಂದ ದೊರೆಯುತ್ತದೆ. ಅದು ನಿನ್ನ ವರ್ತನೆಯಿಂದ ನನಗೆ ದೊರೆಯಬೇಕಿತ್ತು.

ಬದುಕಿನ ಖುಷಿ ಮತ್ತು ಸತ್ಯದ ಅವಿಷ್ಕಾರ ಅತೀ ಸಣ್ಣ ಅನುಭವಗಳಲ್ಲಿರುತ್ತದೆ. ನಾವು ದೊಡ್ಡ ಘಟನೆಗಳಿಗೆ ತಕ್ಷಣ ಸ್ಪಂದಿಸುತ್ತೇವೆ.ಆದರೆ ನವಿರಾದ ಸೂಕ್ಷ್ಮ ಭಾವಗಳಿಗೆ? ಮೊನ್ನೆ ಅರಮನೆ ಮೈದಾನದಲ್ಲಿ ಏರ್ಪಾಡಾಗಿದ್ದ ಪುಸ್ತಕ ಮೇಳಕ್ಕೆ ’ನೀನು ಬರುವಿಯಾ?’ ಎಂದು ನಾನು ಕರೆದಿದ್ದೆ. ನೀನು ನಿರಾಕರಿಸಿದ್ದೆ. ನಾನೊಬ್ಬಳೇ ಹೋಗಿದ್ದೆ. ಮುನ್ನೂರಕ್ಕೂ ಹೆಚ್ಚು ಮಳಿಗೆಗಳಿದ್ದವು . ಒಂದು ವಾರದ ಅವಧಿಯಲ್ಲಿ ಒಂದೂವರೆ ಲಕ್ಷ ಜನರು ಇದಕ್ಕೆ ಭೇಟಿ ನೀಡಿದ್ದರು. ಅಂದರೆ ದಿನಕ್ಕೆ ಸುಮಾರು ಇಪ್ಪತ್ತೈದು ಸಾವಿರ ಜನರು. ಓದುವ ಅಭಿರುಚಿ ಜಾಸ್ತಿಯಾಗುತ್ತಿದೆಯೆಂದು ಹೆಮ್ಮೆಪಟ್ಟುಕೊಳ್ಳಬೇಡ. ಸೀಡಿ ಮತ್ತು ವ್ಯಕ್ತಿತ್ವ ವಿಕಸನದಂತಹ ಮಾಹಿತಿಗಳನ್ನು ನೀಡುವ ಇಂಗ್ಲೀಷ್ ಬುಕ್ ಸ್ಟಾಲ್ ಗಳ ಎದುರು ಜನರ ಜಾತ್ರೆಯಿರುತ್ತಿತ್ತು. ಕಲೆ ಮತ್ತು ಸಾಹಿತ್ಯ ಸಂಬಂಧಿ ಪುಸ್ತಕಗಳ ಅಂಗಡಿಯೆದುರು ಬೆರಳೆಣಿಕೆಯ ಜನರಿದ್ದರು.

ಆ ಬೆರಳೆಣಿಕೆಯ ಜನರಲ್ಲಿ ನೀನೂ ಒಬ್ಬನಾಗಿರಬೇಕೆಂದು ನಾನು ಬಯಸಿದ್ದೆ. ನನ್ನೊಡನೆ ಸುಮ್ಮನೆ ನಾಲ್ಕು ಹೆಜ್ಜೆ ಹಾಕಿದ್ದರೆ ಆ ಸಾನಿಧ್ಯ ಸುಖ ನನ್ನಲ್ಲಿ ಹೊಸ ಕನಸುಗಳ ಅಂಕುರಕ್ಕೆ ನಾಂದಿಯಾಗುತ್ತಿತ್ತು. ನೀನು ಬರಲಿಲ್ಲ. ಆದರೂ ನಿನಗೆಂದು ಕೆಲವು ಪುಸ್ತಕಗಳನ್ನು ಖರೀದಿ ಮಾಡಿದ್ದೆ. ’ಯಾವಾಗ ಸಿಗ್ತೀಯಾ? ನಿನಗಾಗಿ ಒಂದಷ್ಟು ಪುಸ್ತಕ ಖರೀದಿ ಮಾಡಿದ್ದೆ’ ಎಂದಾಗ ನೀನು, ’ಯಾರಿಗೆಂತ ಕೊಂಡಿದ್ದೆ?’ ಎಂದು ಉಢಾಪೆಯ ಮಾತಾಡಿದ್ದೆ.

ಕಳೆದ ವಾರ ಕಲಾಕ್ಷೇತ್ರದಲ್ಲಿ ಪ್ರದರ್ಶನಗೊಂಡ ಬಿ,ವಿ.ರಾಜಾರಾಂ ಅವರ ’ಮೂಕಜ್ಜಿಯ ಕನಸುಗಳು’ ನಾಟಕಕ್ಕೆ ನಿನ್ನನ್ನು ಬರಹೇಳಿದ್ದೆ. ನೀನು ಬರಲಿಲ್ಲ. ನನಗೇನೂ ನಷ್ಟವಾಗಲಿಲ್ಲ. ನೀನು ಮಾತ್ರ ಈ ವರ್ಷದ ಅತ್ಯುತ್ತಮ ನಾಟಕವೊಂದರ ವೀಕ್ಷಣೆಯಿಂದ ವಂಚಿತನಾದೆ. ನಿನಗೆ ಕಡಿದು ಗುಡ್ಡೆ ಹಾಕುವಷ್ಟು ಕೆಲಸವೇನೂ ಇರುವುದಿಲ್ಲ ಎಂದು ನನಗೆ ಗೊತ್ತು. ಸುಮ್ಮನೆ ಮಲಗಿಕೊಂಡು ಸೂರು ನೋಡುತ್ತಾ ಹಗಲು ಕನಸು ಕಾಣುತ್ತಿರುತ್ತಿಯಾ..ಮನುಷ್ಯನಿಗೆ ಗರಿಷ್ಟ ನೂರು ವರ್ಷ ಆಯುಸ್ಸಿರುವುದು ಎಂಬುದನ್ನು ನೀನು ಆಗಾಗ ಮರೆಯುತ್ತಿಯಾ!

ಕೆಲವು ವರ್ಷಗಳ ಹಿಂದೆ ನನ್ನ ಮನೆಯ ಅಂಗಳದಲ್ಲಿ ನಿನ್ನನ್ನು ನೋಡಿದಾಗ ಹಲವು ಶತಮಾನಗಳಿಂದ ನಾನು ನಿನ್ನನ್ನೇ ಹುಡುಕುತ್ತಿದ್ದೇನೆ ಎನಿಸಿತ್ತು. ನನ್ನ ಸುದೀರ್ಘ ಕಾಯುವಿಕೆ ಕೊನೆಗೂ ಅಂತ್ಯಗೊಂಡಿತ್ತು ಎಂದು ರೋಮಾಂಚನಗೊಂಡಿದ್ದೆ. ಈತನ ಕಿರು ಬೆರಳು ಹಿಡಿದು ಎಂತಹ ದುರ್ಭರ ಕ್ಷಣಗಳನ್ನಾದರೂ ಗೆಲ್ಲಬಲ್ಲೆ ಎನಿಸಿತ್ತು. ಆದರೆ ಈಗ....?

ಸೋತು ಹೋಗಿದ್ದೇನೆ ಕಣೋ; ನಿನಗಲ್ಲ
ಬದುಕಿನ ಭ್ರಮೆಗಳಿಗೆ, ಮನಸ್ಸುಗಳ ನಿಗೂಢತೆಗೆ.
ಅಚ್ಚರಿಪಟ್ಟಿದ್ದೇನೆ; ನನ್ನಲ್ಲೇ ಹುಟ್ಟಿಕೊಳ್ಳುವ ಕ್ಷುಲ್ಲಕ ಬಯಕೆಗಳಿಗೆ,
ಬದಲಾಗುವ ಆಕಾಶದ ಬಣ್ಣಗಳಿಗೆ.
ಮನಸ್ಸು ಮ್ಲಾನಗೊಂಡಿದೆ; ಸಂಬಂಧಗಳ ಎಳೆ ಶಿಥಿಲಗೊಂಡಾಗ
ಹಾಲುಗಲ್ಲದ ಹಸುಳೆಗಳು ಬಿಕ್ಕಳಿಸಿದಾಗ.

ಸಂಬಂಧವೊಂದು ನಮ್ಮಲ್ಲಿ ಸದಾ ಅಸ್ಥಿರತೆಗೆ, ಆತಂಕಕ್ಕೆ ಕಾರಣವಾಗುತ್ತಿದ್ದರೆ, ಪ್ರಯತ್ನಪಟ್ಟಾದರೂ ಅಥವಾ ಯಾವ ಬೆಲೆ ತೆತ್ತಾದರೂ ಅದರಿಂದ ಹೊರಬರುವ ಪ್ರಯತ್ನ ಮಾಡಬೇಕು. ಇದು ಗೊತ್ತಿದ್ದೂ ಕೂಡಾ ನಿನ್ನ ನೆನಪಿನಿಂದ ಬಿಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಒಂದು ಒಳ್ಳೆಯ ಗೆಳೆತನವೆಂದರೆ, ಅದು ನಮಗರಿವಿಲ್ಲದಂತೆ ನಮ್ಮನ್ನು ಬದಲಾಯಿಸುತ್ತಿರಬೇಕು. ಮತ್ತು ಆ ಬದಲಾವಣೆ ಸಕಾರಾತ್ಮಕವಾಗಿರಬೇಕು. ನಿನ್ನಿಂದ ನಾನು ಏನು ಬದಲಾವಣೆ ಕಂಡೆ? ಅದು ನನಗೆ ಮಾತ್ರ ಗೊತ್ತು. ಅದನ್ನು ನಿನಗೆ ಹಲವು ಬಾರಿ ಹೇಳಲೆತ್ನಿಸಿದ್ದೆ. ಆದರೆ ನಿನಗೆ ಆ ಬಗ್ಗೆ ಗಮನವಿರಲಿಲ್ಲ.
ನನಗೊತ್ತು ಶರೂ, ಯಾರೂ ಯಾರಿಗೂ ಸಿಗಲಾರರು. ಆದರೂ ಯಾವುದೋ ಒಂದು ಮಿತಿಯೊಳಗೆ ನಾವು ಯಾರಿಗೋ ಸಿಗುತ್ತಲಿರಬೇಕು. ನನ್ನ ಮಟ್ಟಿಗೆ ಆ ’ಯಾರೋ’ ನೀನಾಗಿರಬೇಕೆಂದು ಆಸೆ ಪಟ್ಟಿದ್ದೆ. ಸಂಬಂಧಗಳಿಗೆ ನಿರಂತರತೆಯಿದೆ. ಅನುಭವಕ್ಕೊಂದು ಮಿತಿಯಿದೆ. ನಿನ್ನೊಂದಿಗಿನ  ಸಂಬಂಧವನ್ನು ಅನುಭಾವವನ್ನಾಗಿಸಿಕೊಳ್ಳುವ ನಿರಂತರ ಪ್ರಯತ್ನ ನನ್ನದು. ಅದಕ್ಕೇ ಹೇಳುತ್ತಿದ್ದೇನೆ; ನೀನಿಲ್ಲದೆ ನಾನಿಲ್ಲ

[ ಐದಾರು ವರ್ಷಗಳ ಹಿಂದೆ ಸಾಗರಿಕಾ ಎಂಬ ಹೆಸರಿನಲ್ಲಿ ನಾನು ’ಓಮನಸೇ’ ಗಾಗಿ ಬರೆದ ಲಹರಿ ]